538ನೇ ಜಯಂತ್ಯುತ್ಸವ ನಿಮಿತ್ತ ಕನಕದಾಸರ ಭಾವಚಿತ್ರ ಮೆರವಣಿಗೆ

| Published : Nov 10 2025, 12:45 AM IST

ಸಾರಾಂಶ

ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುತ್ತಾ ಜನರಲ್ಲಿ ಜೀವನದ ಮೌಲ್ಯಗಳ ಅರಿವು ಮೂಡಿಸುವ ಮೂಲಕ ಭಾರತದ ಭಕ್ತಿ ಸಾಹಿತ್ಯದ ಪರಂಪರೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಸಂತ ಶ್ರೇಷ್ಠ ಕನಕದಾಸರ 538ನೇ ಜಯಂತ್ಯುತ್ಸವದ ಅಂಗವಾಗಿ ಕನಕದಾಸರ ಭಾವಚಿತ್ರದ ಮೆರವಣಿಗೆ ಪಟ್ಟಣದಲ್ಲಿ ಶನಿವಾರ ವಿವಿಧ ಜಾನಪದ ಕಲಾತಂಡಗಳ ಮೇಳಗಳೊಂದಿಗೆ ವೈಭವದಿಂದ ನೆರವೇರಿತು.

ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಕುರುಬರ ಸಂಘದ ಸಹಯೋಗದಲ್ಲಿ ನಡೆದ ಜಯಂತ್ಯುತ್ಸವದಲ್ಲಿ ಕೋಟೆ ಬೀದಿಯ ಶ್ರೀಉಗ್ರನರಸಿಂಹಸ್ವಾಮಿ ದೇವಾಲಯದ ಆವರಣದಿಂದ ಆರಂಭಗೊಂಡ ಕನಕದಾಸರ ಭಾವಚಿತ್ರದ ಮೆರವಣಿಗೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕುರುಬರ ಸಂಘದ ಅಧ್ಯಕ್ಷ ಅಶ್ವಿನ್ ರಾಮಕೃಷ್ಣ ಮತ್ತು ಪದಾಧಿಕಾರಿಗಳು ಚಾಲನೆ ನೀಡಿದರು.

ನಂತರ ಮಾತನಾಡಿದ ಅಶ್ವಿನ್, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುತ್ತಾ ಜನರಲ್ಲಿ ಜೀವನದ ಮೌಲ್ಯಗಳ ಅರಿವು ಮೂಡಿಸುವ ಮೂಲಕ ಭಾರತದ ಭಕ್ತಿ ಸಾಹಿತ್ಯದ ಪರಂಪರೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು.

ನಂತರ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಜಾನಪದ ಕಲಾತಂಡಗಳ ಪ್ರದರ್ಶನದ ನಂತರ ತಾಪಂ ಕಚೇರಿ ಸಭಾಂಗಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಕನಕದಾಸರ ಭಾವಚಿತ್ರಕ್ಕೆ ಗ್ರೇಡ್ ಟು ತಹಸೀಲ್ದಾರ್ ಸೋಮಶೇಖರ್ ಪುಷ್ಪಾರ್ಚನೆ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕುರುಬ ಸಮುದಾಯದ ಸಾಧಕರು ಮತ್ತು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ.ಧನಂಜಯ, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರವೀಶ್, ಕುರುಬರ ಸಂಘದ ಉಪಾಧ್ಯಕ್ಷ ಪ್ರಪುಲಚಂದ್ರ, ಕಾರ್ಯದರ್ಶಿ ರಾಜು, ಜಿಪಂ ಮಾಜಿ ಸದಸ್ಯರಾದ ಜವಾಹರ್ ಲಾಲ್, ಕೆ.ರವಿ, ಮನ್ಮುಲ ಮಾಜಿ ನಿರ್ದೇಶಕ ಲಿಂಗನದೊಡ್ಡಿ ರಾಮಕೃಷ್ಣ, ಕುರುಬರ ಸಂಘದ ಮಾಜಿ ಅಧ್ಯಕ್ಷ ಮರಿ ಹೆಗಡೆ ಮತ್ತಿತರರು ಭಾಗವಹಿಸಿದ್ದರು.

ಇಂದು ಟಿಪ್ಪು ಸುಲ್ತಾನ್ ಜಯಂತಿ: ನಿಷೇಧಾಜ್ಞೆ ಜಾರಿ

ಶ್ರೀರಂಗಪಟ್ಟಣ:

ಪಟ್ಟಣದ ಗಂಜಾಂನ ಗುಂಬಜ್‌ನಲ್ಲಿ ಟಿಪ್ಪು ವಕ್ಫ್ ಎಸ್ಟೆಟ್ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ನ.10ರಂದು ಬೆಳಗ್ಗೆ 6 ರಿಂದ ರಾತ್ರಿ 9ರವರೆಗೆ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಾಲೂಕು ದಂಡಾಧಿಕಾರಿ ಚೇತನ್ ಯಾದವ್ ಆದೇಶ ಹೊರಡಿಸಿದ್ದಾರೆ.

ಮೈಸೂರು, ತಾಲೂಕು ಮತ್ತು ಅಕ್ಕಪಕ್ಕದ ಜಿಲ್ಲೆಗಳಿಂದ ಮುಸ್ಲಿಂ ಯುವಕರು, ಟಿಪ್ಪು ಅಭಿಮಾನಿಗಳು ಪಟ್ಟಣಕ್ಕೆ ಬರುವ ಮುನ್ಸೂಚನೆ ಇದ್ದು, ಮತೀಯ ಸೂಕ್ಷ್ಮ ಪ್ರದೇಶವಾಗಿದ್ದರಿಂದ ಟೌನ್ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ವರದಿಯನ್ವಯ ಈ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದ್ದಾರೆ.

ನಿಷೇಧಾಜ್ಞೆ ವ್ಯಾಪ್ತಿಯಲ್ಲಿ ಯಾವುದೇ ರೀತಿಯಲ್ಲಿ ಪ್ರತಿಭಟನೆ, ಮೆರವಣಿಗೆ, ರ್ಯಾಲಿ, ಬ್ಯಾನರ್, ಬಂಟಿಂಗ್ಸ್ ಭಾವುಟಗಳು, ಧ್ವನಿವರ್ಧಕಗಳು, ಪಟಾಕಿ ಸಿಡಿಸುವುದು, ಡಿಜೆ ಅಳವಡಿಸಿಕೊಂಡು ಘೋಷಣೆ ಕೂಗದಂತೆ ಹಾಗೂ ಟಾಲ್ಲೋ, ಪ್ರಚೋದನಾತ್ಮಕ ಚಿತ್ರವಿರುವ ಟೀ ಶರ್ಟ್ ಧರಿಸಿದಂತೆ ಬಿಎನ್ ಎಸ್ 163ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.