ಸಾರಾಂಶ
ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ, ಶಾಖಾಧ್ಯಕ್ಷ ಪ್ರದೀಪ್,ತಾಲೂಕು ಉಪಾಧ್ಯಕ್ಷ ವೆಂಕಟರಮಣ ಸ್ವಾಮಿ, ನೀರು ಸರಬರಾಜು ನೌಕರರ ಸಂಘದ ಅಧ್ಯಕ್ಷ ಮೋಹನ್ ಸೇರಿ ನಗರಸಭೆಯ ಇತರೆ ನೌಕರರು,ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.
ಕನ್ನಡಪ್ರಭ ವಾರ್ತೆ ಕನಕಪುರ
ರಾಜ್ಯ ಪೌರ ನೌಕರರ ಸಂಘವು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ, ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಕನಕಪುರದ ನಗರಸಭಾ ಪೌರ ನೌಕರರು ಹಾಗೂ ಸಿಬ್ಬಂದಿ ಮುಷ್ಕರ ಪ್ರಾರಂಭಿಸಿದ್ದಾರೆ. ನಗರಸಭೆ ಮುಂಭಾಗ ಮುಷ್ಕರದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಪೌರ ಕಾರ್ಮಿಕರ ನೌಕರರ ಸಂಘದ ತಾಲೂಕು ಅಧ್ಯಕ್ಷ ಜನಾರ್ದನ್, ರಾಜ್ಯದ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂಬ ಬೇಡಿಕೆಯ ಜೊತೆಗೆ ಇನ್ನು ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ಹಮ್ಮಿಕೊಂಡಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ಅನಿರ್ದಿಷ್ಟಾವಧಿ ಕಾಲಮುಷ್ಕರ ಮುಂದುವರಿಸುವುದಾಗಿ ತಿಳಿಸಿದರು.
ನಗರಸಭಾ ಸದಸ್ಯ ಚಂದ್ರು, ಬಹುಜನ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನೀಲಿ ರಮೇಶ್ ಮಾತನಾಡಿ, ನಗರದ ಸ್ವಚ್ಛತೆಯಲ್ಲಿ ಹಗಲಿರುಳು ಸೇನಾನಿಗಳಂತೆ ಶ್ರಮಿಸುತ್ತಿರುವ ಪೌರ ಕಾರ್ಮಿಕರು ದೇವರ ಪ್ರತಿರೂಪ ಎಂದರೂ ತಪ್ಪಾಗಲಾರದು. ನೌಕರರ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರ ಶೀಘ್ರವಾಗಿ ಸ್ಪಂದಿಸಿ ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ನೀಡಬೇಕು, ಪೌರ ಕಾರ್ಮಿಕ ಬಂಧುಗಳು ಮುಷ್ಕರ ವಾಪಸ್ ಪಡೆಯದಿದ್ದರೆ ನಗರದ ನೈರ್ಮಲ್ಯ ಹಾಗೂ ಸ್ವಚ್ಛತೆಗೆ ಧಕ್ಕೆ ಬರುವುದರ ಜೊತೆಗೆ ಹಲವು ರೋಗ ರುಜಿನಗಳು ಹರಡುವುದಕ್ಕೆ ಕಾರಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ, ಶಾಖಾಧ್ಯಕ್ಷ ಪ್ರದೀಪ್,ತಾಲೂಕು ಉಪಾಧ್ಯಕ್ಷ ವೆಂಕಟರಮಣ ಸ್ವಾಮಿ, ನೀರು ಸರಬರಾಜು ನೌಕರರ ಸಂಘದ ಅಧ್ಯಕ್ಷ ಮೋಹನ್ ಸೇರಿ ನಗರಸಭೆಯ ಇತರೆ ನೌಕರರು,ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಮಾಜಿ ಅಧ್ಯಕ್ಷ ಚಿಕ್ಕ ಕೆಂಪೇಗೌಡ ಹಾಗೂ ತಾಲೂಕಿನ ಹಲವು ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಪಕ್ಷಾತೀತವಾಗಿ ಹಲವು ರಾಜಕೀಯ ಮುಖಂಡರು ಪೌರ ಕಾರ್ಮಿಕ ಬಂಧುಗಳ ಮುಷ್ಕರಕ್ಕೆ ಬೆಂಬಲ ಸೂಚಿಸಿ ಮುಷ್ಕರದಲ್ಲಿ ಭಾಗಿಯಾಗಿದ್ದರು.