ಕನ್ನಡಪ್ರಭ ವಾರ್ತ ಬೆಳಗಾವಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಫೆ.24 ರ ಸಂಜೆ 6 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ -2025-26ರ ಅಂಗವಾಗಿ ಕನ್ನಡ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಹೇಳಿದರು.
ಕನ್ನಡಪ್ರಭ ವಾರ್ತ ಬೆಳಗಾವಿ
ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಫೆ.24 ರ ಸಂಜೆ 6 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ -2025-26ರ ಅಂಗವಾಗಿ ಕನ್ನಡ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಹೇಳಿದರು.ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಖ್ಯಾತ ಹಿನ್ನೆಲೆ ಗಾಯಕ ವಿಜಯ ಪ್ರಕಾಶ ಹಾಗೂ ಹಿನ್ನೆಲೆ ಗಾಯಕಿ ಅನುರಾಧಾ ಭಟ್ ಆಗಮಿಸಲಿದ್ದಾರೆ. ರಾಜ್ಯೋತ್ಸವಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ₹ 50 ಲಕ್ಷ ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ₹3 ಲಕ್ಷವನ್ನು ವಸ್ತು ಪ್ರದರ್ಶನಕ್ಕೆ ಮೀಸಲಿಟ್ಟು, ಉಳಿದ ₹ 47 ಲಕ್ಷವನ್ನು ಕನ್ನಡ ಹಬ್ಬ ಕಾರ್ಯಕ್ರಮಕ್ಕೆ ವೆಚ್ಚ ಮಾಡಲು ತೀರ್ಮಾನಿಸಲಾಗಿತ್ತು. ರಾಜ್ಯೋತ್ಸವ ವೇಳೆ ಸುಮಾರು 10 ಸಾವಿರ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಲು ₹8 ಲಕ್ಷ ವೆಚ್ಚ ಮಾಡಲಾಗಿದೆ. ಉಳಿದ ₹39 ಲಕ್ಷವನ್ನು ಅದ್ಧೂರಿ ಕಾರ್ಯಕ್ರಮ ಆಯೋಜನೆಗೆ ಬಳಸಲಾಗುತ್ತದೆ ಎಂದು ತಿಳಿಸಿದರು.ಚಳಿಗಾಲದ ಅಧಿವೇಶನದ ವೇಳೆ ಕಾರ್ಯಕ್ರಮ ಬೇಡ ಎಂದು ಕನ್ನಡಪರ ಸಂಘಟನೆಗಳು ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ನಡೆಸಲು ನಿರ್ಧರಿಸಲಾಗಿತ್ತು. ಈ ಕುರಿತು ಪಾಲಿಕೆ ಆಯುಕ್ತರು ಕನ್ನಡಪರ ಸಂಘಟನೆಗಳೊಂದಿಗೆ ಸಭೆ ನಡೆಸಿದರೂ, ಒಂದು ದಿನವೇ ಕಾರ್ಯಕ್ರಮ ಮಾಡಬೇಕೇ ಅಥವಾ ಮೂರು ದಿನಗಳವರೆಗೆ ವಿಸ್ತರಿಸಬೇಕೇ ಎಂಬ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ ಎಂದು ಹೇಳಿದರು.ಸಂಪರ್ಕ ಕೊರತೆಯಿಂದ ಗೊಂದಲ ಸೃಷ್ಟಿಯಾಗಿದ್ದು, ಎಲ್ಲರೊಂದಿಗೂ ಚರ್ಚಿಸಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು. ಒಂದು ದಿನ ಸಣ್ಣ ಕಾರ್ಯಕ್ರಮ ಮಾಡುವುದಕ್ಕಿಂತ ದೇಶದ ಗಮನ ಸೆಳೆಯುವ ರೀತಿ ಕಾರ್ಯಕ್ರಮ ಆಯೋಜಿಸಲು ಸೂಚಿಸಲಾಗಿದೆ. ವಿಜಯ ಪ್ರಕಾಶರನ್ನು ಆಹ್ವಾನಿಸಿರುವುದು ಒಳ್ಳೆಯ ನಿರ್ಧಾರ. ಕಾರ್ಯಕ್ರಮದ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಪಾಲಿಕೆ ಆಯುಕ್ತ ಕಾರ್ತಿಕ ಮಾತನಾಡಿ, ಫೆ.19 ರಂದು ಕನ್ನಡ ಹಬ್ಬ ಕಾರ್ಯಕ್ರಮ ನಿಗದಿ ಆಗಿತ್ತು. ಅದನ್ನು ಫೆ. 24ಕ್ಕೆ ಮುಂದೂಡಲಾಗಿತ್ತು. ಸಂಪರ್ಕ ಕೊರತೆ ಆಗಿದೆ. ಇದರಿಂದಾಗಿ ಗೊಂದಲ ಸೃಷ್ಟಿಯಾಗಿದೆ ಎಂದರು.