ಸಾರಾಂಶ
ಮಂಡ್ಯ ಮಂಜುನಾಥ
ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಮೂರನೇ ಬಾರಿಗೆ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. 30 ವರ್ಷಗಳ ಬಳಿಕ ಅದ್ಧೂರಿಯಾಗಿ ನುಡಿಜಾತ್ರೆಯ ಆತಿಥ್ಯ ಉಣಬಡಿಸಲು ನಗರ ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ.
ಸಾಹಿತ್ಯ ಹಬ್ಬಕ್ಕೆ ಆಗಮಿಸುವ ಸಾಹಿತಿಗಳು- ಸಾಹಿತ್ಯಾಸಕ್ತರನ್ನು ಸ್ವಾಗತಿಸಲು ಇಡೀ ಮಂಡ್ಯ ನಗರ ನವ ವಧುವಿನಂತೆ ಸಿಂಗಾರಗೊಂಡಿದೆ. ಬಂಟಿಂಗ್ಸ್, ಕಟೌಟ್, ವಿದ್ಯುತ್ ದೀಪಾಲಂಕಾರದಿಂದ ಇಡೀ ನಗರ ಕಂಗೊಳಿಸುತ್ತಿದೆ. ಮೈಸೂರು ದಸರಾ ವಿಶೇಷ ದೀಪಾಲಂಕಾರದ ಮಾದರಿಯಲ್ಲಿ ಚೆಸ್ಕಾಂ ವತಿಯಿಂದ ನಗರದ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಕಲಾಕೃತಿ, ಜ್ಞಾನಪೀಠ ಪುರಸ್ಕೃತರ ಭಾವಚಿತ್ರಗಳು ದೀಪಾಲಂಕಾರದ ಪ್ರಮುಖ ಆಕರ್ಷಣೆಯಾಗಿವೆ.
ಸಮ್ಮೇಳನಾಧ್ಯಕ್ಷ, ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಗುರುವಾರ ಸಂಜೆ 5 ಗಂಟೆಗೆ ನಗರಕ್ಕೆ ಆಗಮಿಸಿದ್ದು, ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಜಿಲ್ಲಾಡಳಿತದಿಂದ ಅದ್ಧೂರಿಯಾಗಿ ಸ್ವಾಗತಿಸಿ ಆತಿಥ್ಯ ನೀಡಲಾಯಿತು.
ಶುಕ್ರವಾರ ನುಡಿಜಾತ್ರೆಗೆ ಚಾಲನೆ ದೊರೆಯಲಿದ್ದು, ರಾಷ್ಟ್ರಧ್ವಜವನ್ನು ಸಚಿವ ಎನ್.ಚಲುವರಾಯಸ್ವಾಮಿ, ಪರಿಷತ್ತಿನ ಧ್ವಜವನ್ನು ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ಜೋಶಿ, ನಾಡಧ್ವಜವನ್ನು ಪರಿಷತ್ತಿನ ಸಂಚಾಲಕಿ ಡಾ.ಮೀರಾ ಶಿವಲಿಂಗಯ್ಯ ನೆರವೇರಿಸುವರು.
ಸಮ್ಮೇಳನಾಧ್ಯಕ್ಷರ ಮೆರವಣಿಗೆ:
ಸಾಹಿತ್ಯ ಸಮ್ಮೇಳನದ ಪ್ರಮುಖ ಆಕರ್ಷಣೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ವಿಶೇಷ ರಥ ಸಿದ್ಧಪಡಿಸಲಾಗಿದ್ದು, ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಬೆಳಗ್ಗೆ 7 ಗಂಟೆಗೆ ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಚಾಲನೆ ನೀಡಲಿದ್ದಾರೆ. 154 ಕಲಾತಂಡಗಳಿಂದ ಮೆರವಣಿಗೆ ಕಳೆಗಟ್ಟಲಿದೆ. 800 ಮಹಿಳೆಯರು ಪೂರ್ಣಕುಂಭದಲ್ಲಿ ಪಾಲ್ಗೊಳ್ಳುವರು. ಮೆರವಣಿಗೆ ನಗರದ ಪ್ರಮುಖ ರಸ್ತೆಗಳ ಮೂಲಕ ಸಮ್ಮೇಳನ ವೇದಿಕೆ ತಲುಪಲಿದೆ.
ಸಮ್ಮೇಳನದ ಪ್ರಧಾನ ವೇದಿಕೆಗೆ ರಾಜಮಾತೆ ಕೆಂಪನಂಜಮ್ಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್, ಮಹಾಮಂಟಪಕ್ಕೆ ಸರ್ ಎಂ.ವಿಶ್ವೇಶ್ವರಯ್ಯ, ಮಹಾದ್ವಾರಕ್ಕೆ ಯಕ್ಷಕವಿ ಕೆಂಪಣ್ಣಗೌಡ ಮತ್ತು ಉಭಯ ಕವಿತಾ ವಿಶಾರದ ಷಡಕ್ಷರ ದೇವ, ಪ್ರವೇಶ ದ್ವಾರಕ್ಕೆ ಶ್ರೇಷ್ಠ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಮತ್ತು ಡಾ.ಬಾಲಗಂಗಾಧರನಾಥ ಮಹಾ ಸ್ವಾಮೀಜಿ ಹೆಸರನ್ನಿಡಲಾಗಿದೆ.
ಪ್ರಧಾನವೇದಿಕೆ ಕಾರ್ಯಕ್ರಮ ಬೆಳಗ್ಗೆ 10.30ಕ್ಕೆ ಆರಂಭವಾಗಲಿದ್ದು, ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಸಮ್ಮೇಳನಾಧ್ಯಕ್ಷ ಸ್ಥಾನವನ್ನು ನಾಡೋಜ ಡಾ.ಗೊ.ರು.ಚನ್ನಬಸಪ್ಪ ವಹಿಸುವರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮೊದಲಾದವರು ಭಾಗವಹಿಸುವರು.
ಸಮ್ಮೇಳನಕ್ಕಾಗಿ ಮೂರು ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಪ್ರಧಾನ ವೇದಿಕೆಯಲ್ಲಿ ಸಮ್ಮೇಳನಾಧ್ಯಕ್ಷರ ಜೊತೆಗಿನ ಸಂವಾದವೂ ಸೇರಿ 11 ಗೋಷ್ಠಿ, 2 ಸಮಾನಾಂತರ ವೇದಿಕೆಗಳಲ್ಲಿ 20 ಗೋಷ್ಠಿ ಆಯೋಜಿಸಲಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರ, ಅಂಬೇಡ್ಕರ್ ಭವನ, ಸಮಾನಾಂತರ ವೇದಿಕೆ ಮತ್ತು ಪ್ರಧಾನ ವೇದಿಕೆಗಳಲ್ಲಿ ಸ್ಥಳೀಯ ಕಲಾವಿದರ ಕಾರ್ಯಕ್ರಮಗಳು, ಪ್ರಧಾನ ವೇದಿಕೆಯಲ್ಲಿ ನುಡಿ ಜಾತ್ರೆ ಸ್ವರ ಯಾತ್ರೆ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊದಲ ದಿನ ಸಾಧುಕೋಕಿಲ ಮತ್ತು ರಾಜೇಶ್ ಕೃಷ್ಣನ್ ತಂಡದವರಿಂದ ಸಂಗೀತ ಸಂಜೆ ಕಾರ್ಯಕ್ರಮ ಗಮನ ಸಳೆಯಲಿದೆ. ನಾಡುನುಡಿಗೆ ಸೇವೆ ಸಲ್ಲಿಸಿದ 170 ಮಂದಿ ಸಾಧಕರನ್ನು ಸಮ್ಮೇಳನದಲ್ಲಿ ಸನ್ಮಾನಿಸಲಾಗುತ್ತಿದೆ. ಸಮ್ಮೇಳನದ ಸ್ಮರಣಾರ್ಥ 87 ಪುಸ್ತಕಗಳನ್ನು ಬಿಡುಗಡೆ ಮಾಡಲಾಗುತ್ತಿದ್ದು, "ಬೆಲ್ಲದಾರತಿ " ಹೆಸರಿನ ಸ್ಮರಣ ಸಂಚಿಕೆ ಕೂಡ ಹೊರತಲಾಗುತ್ತಿದೆ. ಸಮ್ಮೇಳನದಲ್ಲಿ 450 ಪುಸ್ತಕ ಮಳಿಗೆ, 55 ವಸ್ತುಪ್ರದರ್ಶನ ಮಳಿಗೆ, 350 ವಾಣಿಜ್ಯ ಮಳಿಗೆ ಇರಲಿವೆ.
3 ಲಕ್ಷ ಜನರಿಗೆ ಊಟ
ಒಟ್ಟಾರೆಯಾಗಿ ಸಮ್ಮೇಳನದಲ್ಲಿ ಭಾಗವಹಿಸುವ 3 ಲಕ್ಷ ಜನರಿಗೆ ಉತ್ತರ-ದಕ್ಷಿಣ ಕರ್ನಾಟಕ ಶೈಲಿಯ ಭೋಜನ ಸಿದ್ಧಗೊಳ್ಳುತ್ತಿದ್ದು, 350 ಜನ ಬಾಣಸಿಗರು ಅಡುಗೆ ತಯಾರಿಯಲ್ಲಿ ತೊಡಗಿದ್ದಾರೆ. 900 ಜನ ಊಟ ಬಡಿಸಲು ನಿಯೋಜಿಸಲಾಗಿದೆ. ಊಟಕ್ಕೆ 100 ಕೌಂಟರ್, ನೊಂದಾಯಿತ ಪ್ರತಿನಿಧಿಗಳಿಗೆ 40 ಕೌಂಟರ್ ತೆರೆಯಲಾಗಿದೆ. ಎಲ್ಲರಿಗೂ ಒಂದೇ ಊಟದ ಮೆನು ಇರಲಿದೆ.
6 ಸಾವಿರ ನೋಂದಾಯಿತ ಪ್ರತಿನಿಧಿಗಳಿಗೆ ಅರ್ಧ ಕೆಜಿ ಬೆಲ್ಲ, ಅರ್ಧ ಕೆಜಿ ಸಕ್ಕರೆ, ಬ್ರೆಶ್, ಪೇಸ್ಟ್, ಸೋಪು, ಬೆಡ್ ಶಿಟ್ ಒಳಗೊಂಡ ಕಿಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬಸ್ ವ್ಯವಸ್ಥೆ
ಸಮ್ಮೇಳನಕ್ಕೆ ಆಗಮಿಸಲು ಸುತ್ತಮುತ್ತಲಿನ 7 ತಾಲೂಕು ಕೇಂದ್ರಗಳಿಂದ 15 ಉಚಿತ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಮಂಡ್ಯ ನಗರದಿಂದ ಕೂಡ ಬಸ್ಗಳು ಸಮ್ಮೇಳನ ಸ್ಥಳಕ್ಕೆ ಜನರನ್ನು ಉಚಿತವಾಗಿ ಕರೆದೊಯ್ಯಲಿವೆ. ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್ ಸ್ಥಳದಿಂದ ಕೂಡ ಉಚಿತ ಸಾರಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಬೆಂಗಳೂರಿನಿಂದ ಪ್ರತಿ 30 ನಿಮಿಷಕ್ಕೆ ಒಂದು ವಿಶೇಷ ಬಸ್ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.