ಭಾಷೆಗೆ ಜಾತಿ, ಮತದ ಭೇದವಿಲ್ಲ, ಅಂತಹ ಕನ್ನಡ ಶ್ರೀಮಂತ, ಅತೀ ಪುರಾತನ ಭಾಷೆಗಳಲ್ಲಿ ಒಂದಾಗಿದ್ದು, ಅನೇಕ ಮಹನೀಯರು ಅದನ್ನು ಉಳಿಸಿ ಬೆಳೆಸಿದ್ದು, ಈ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಕನ್ನಡ ಮತ್ತು ತುಳು ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗಬೇಕು ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನುಡಿದರು.
ಕಾಪು: ಭಾಷೆಗೆ ಜಾತಿ, ಮತದ ಭೇದವಿಲ್ಲ, ಅಂತಹ ಕನ್ನಡ ಶ್ರೀಮಂತ, ಅತೀ ಪುರಾತನ ಭಾಷೆಗಳಲ್ಲಿ ಒಂದಾಗಿದ್ದು, ಅನೇಕ ಮಹನೀಯರು ಅದನ್ನು ಉಳಿಸಿ ಬೆಳೆಸಿದ್ದು, ಈ ಕೆಲಸವನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಕನ್ನಡ ಮತ್ತು ತುಳು ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗಬೇಕು ಎಂದು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನುಡಿದರು.
ಅವರು ಮಂಗಳವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಘಟಕದ ವತಿಯಿಂದ ಕಾಪು ಸಾರ್ವಜನಿಕ ಗ್ರಂಥಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಇದರ 112ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಕಾಪು ಪುರಸಭಾ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯಗಳ ಗ್ರಂಥ ಮೇಲ್ವಿಚಾರಕರುಗಳಾದ ಆಶಾ ಉಳಿಯಾರಗೋಳಿ, ಪೂರ್ಣಿಮಾ ಕಾಪು, ನಸ್ರಿನ್ ಫಾತಿಮಾ ಮಲ್ಲಾರು ಇವರನ್ನು ಪರಿಷತ್ತು ವತಿಯಿಂದ ಸನ್ಮಾನಿಸಲಾಯಿತು. ಗ್ರಂಥಾಲಯದ ಮೇಲ್ವಿಚಾರಕರ ವತಿಯಿಂದ ಪುರಸಭೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮೋಹಿನಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಪುರಸಭಾ ಮುಖ್ಯ ಅಧಿಕಾರಿ ನೀಲಕಂಠ ಮೇಸ್ತ ದಿಕ್ಸೂಚಿ ಭಾಷಣದಲ್ಲಿ ಕನ್ನಡ ಸಾಹಿತ್ಯ, ಸಂಗೀತ, ಕಲೆ, ವಿಜ್ಞಾನ, ತಂತ್ರಜ್ಞಾನ ಸಹಿತ ಇನ್ನಿತರ ಕ್ಷೇತ್ರಗಳಲ್ಲಿ ಕನ್ನಡಿಗರ ಸಾಧನೆಗಳು, ಕೊಡುಗೆಗಳು ಸ್ಮರಣೀಯವಾಗಿದ್ದು, ಕೃಷ್ಣರಾಜ ಒಡೆಯರ್, ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ರಿಂದ ಆರಂಭವಾದ ಕನ್ನಡ ಸಾಹಿತ್ಯ ಪರಿಷತ್ತು ಈ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಅಪಾರ ಕೊಡುಗೆ ನೀಡಿದೆ ಎಂದರು.ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯದ ನುಡಿಗಳನ್ನಾಡಿದರು. ಪುರಸಭಾ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಪಡುಬಿದ್ರಿ, ಕಸಾಪ ಜಿಲ್ಲಾ ಸಮಿತಿ ಪ್ರತಿನಿಧಿ ಕಟ್ಟಿಂಗೇರಿ ದೇವದಾಸ್ ಹೆಬ್ಬಾರ್ ಉಪಸ್ಥಿತರಿದ್ದರು.ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಮಿತಿಯ ಸದಸ್ಯ ನರಂಹಮೂರ್ತಿ ರಾವ್, ತಾಲೂಕು ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ, ಮಧುಕರ್ ಎಸ್.ಕಲ್ಯಾ, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಸರಿತಾ ಉಪಸ್ಥಿತರಿದ್ದರು.
ತಾಲೂಕು ಕೋಶಾಧ್ಯಕ್ಷ ವಿದ್ಯಾಧರ್ ಪುರಾಣಿಕ್ ಸ್ವಾಗತಿಸಿದರು. ಗೌ.ಕಾರ್ಯದರ್ಶಿ ನೀಲಾನಂದ ನಾಯ್ಕ್ ಧನ್ಯವಾದವಿತ್ತರು. ಸಮಿತಿ ಸದಸ್ಯರಾದ ಸತ್ಯಸಾಯಿ ಪ್ರಸಾದ್ ನಿರೂಪಿಸಿದರು.