ಬೈಂದೂರು: ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ತಮ್ಮ ಚಾತುರ್ಮಾಸ್ಯ ವ್ರತಾಚರಣೆಯನ್ನು ಬೈಂದೂರಿನ ಗೋಳಿಹೊಳೆಯ ಬಿಳಿಶಿಲೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಕೈಗೊಳ್ಳಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಇಲ್ಲಿನ ಸೇನೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಶ್ರೀ ಬ್ರಹ್ಮಾನಂದ ಸರಸ್ವತೀ ಮಹಾರಾಜ್ ಅವರು ಆಮಂತ್ರಣ ಪತ್ರಿಕೆ ಮಾಡಿ, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಆಧ್ಯಾತ್ಮಕ ಮಹೋತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಆಶೀರ್ವಚನ ನೀಡಿದರು.ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ಚಾತುರ್ಮಾಸ್ಯ ವ್ರತಾಚರಣೆ ಸಮಿತಿ ಸಂಚಾಲಕ ಶಿವರಾಜ್ ಪೂಜಾರಿ, ನರಸಿಂಹ ಪೂಜಾರಿ, ರಮೇಶ್ ಪೂಜಾರಿ, ದೊಟ್ಟಿಯ್ಯ ಪೂಜಾರಿ, ಸಮಿತಿ ಪದಾಧಿಕಾರಿಗಳು, ಸದಸ್ಯರು, ವಿವಿಧ ಗಣ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.ಈ ಚಾತುರ್ಮಾಸ್ಯ ವ್ರತಾಚರಣೆ ಜು. 29ರಂದು ವೈವಿಷ್ಟ್ಯಪೂರ್ಣ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಳ್ಳಲಿದ್ದು, ಸೆ. 14ರಂದು ಮಂಡಲ (48 ದಿನಗಳ) ಕಾಲ ನಡೆಯಲಿದೆ. ಈ ಅವಧಿಯಲ್ಲಿ ನಿತ್ಯ ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ, ಪ್ರವಚನ, ಭಜನೆ, ಸತ್ಸಂಗ ಸೇರಿದಂತೆ ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮಗಳು ಜರುಗಲಿವೆ.