ಸಾರಾಂಶ
ಪೆಟ್ರೋಲ್, ಡೀಸೆಲ್ ಹಾಗೂ ದಿನಸಿ ಪದಾರ್ಥಗಳ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನೇತೃತ್ವದಲ್ಲಿ ಆಟೋ ಮಾಲೀಕರು ಮತ್ತು ಚಾಲಕರ ಸಂಘದಿಂದ ಮಂಗಳವಾರ ಹರಿಹರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಕನ್ನಡಪ್ರಭ ವಾರ್ತೆ ಹರಿಹರ
ಪೆಟ್ರೋಲ್, ಡೀಸೆಲ್ ಹಾಗೂ ದಿನಸಿ ಪದಾರ್ಥಗಳ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನೇತೃತ್ವದಲ್ಲಿ ಆಟೋ ಮಾಲೀಕರು ಮತ್ತು ಚಾಲಕರ ಸಂಘದಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ತಾಲೂಕು ಕಚೇರಿಗೆ ಆಗಮಿಸಿದ ಮುಖಂಡರು ಗ್ರೇಡ್-೨ ತಹಸೀಲ್ದಾರರಿಗೆ ಮನವಿ ಸಲ್ಲಿಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರು ಮಾತನಾಡಿ, ಜನಪರ ಆಡಳಿತ ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ. ಇಂಧನ ಬೆಲೆ ಹೆಚ್ಚಳದಿಂದ ಈಗಾಗಲೇ ಗಗನಕ್ಕೇರಿರುವ ದಿನಬಳಕೆ ವಸ್ತುಗಳು ಮತ್ತಷ್ಟು ತುಟ್ಟಿಯಾಗಲಿವೆ. ಬಡಜನರು ಬದುಕು ನಡೆಸುವುದು ದುಸ್ತರವಾಗಲಿದೆ ಎಂದು ಕಿಡಿಕಾರಿದರು.ಅಂತರ ರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಕಡಿಮೆ ಇದ್ದರೂ ಕೇಂದ್ರ ಸರ್ಕಾರ ಗರಿಷ್ಠ ಪ್ರಮಾಣದ ಸೆಸ್ ವಿಧಿಸುವ ಮೂಲಕ ಕಳ್ಳದಾರಿಯಲ್ಲಿ ಜನರಿಗೆ ವಂಚಿಸುತ್ತಿದೆ. ಕಳೆದ ೧೦ ವರ್ಷಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರುಮುಖವಾಗಿಯೇ ಇದ್ದು, ಪರಿಣಾಮ ಅಗತ್ಯ ವಸ್ತುಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಕೇಂದ್ರ ಮತ್ತು ರಾಜ್ಯದ ಎರಡೂ ಸರ್ಕಾರಗಳು ಬೆಲೆ ಏರಿಕೆಗೆ ತಮ್ಮದೇ ಆದ ಕೊಡುಗೆ ನೀಡುತ್ತಿವೆ. ರಾಜ್ಯ ಸರ್ಕಾರ ಕೂಡಲೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿಂಪಡೆಯಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಕರವೇ ತಾಲೂಕು ಅಧ್ಯಕ್ಷ ರಮೇಶ್ ಮಾನೆ ನಗರ ಘಟಕ ಅಧ್ಯಕ್ಷ ಪ್ರಿತಮ್ ಬಾಬು, ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಗೌರವ ಅಧ್ಯಕ್ಷರ ಸಿದ್ದಲಿಂಗಸ್ವಾಮಿ, ಅಧ್ಯಕ್ಷ ಮೋಹನ್ ಗೌಡ, ನಗರಸಭಾ ಸದಸ್ಯ ಆಟೋ ಹನುಮಂತಪ್ಪ, ನಾಗರಾಜ್ ಮಹಮದ್ ನಜೀರ್, ಕೇಶವ್, ಸಿದ್ದಪ್ಪ, ಅಲಿ ಅಕ್ಬರ್, ಹೈದರ್, ಸಂತೋಷ್, ದುರ್ಗಪ್ಪ, ಉಮೇಶ್ ಇತರರಿದ್ದರು.- - - -೧೮ಎಚ್ಆರ್ಆರ್೧:
ಬೆಲೆ ಏರಿಕೆ ಖಂಡಿಸಿ ಕರವೇ ನೇತೃತ್ವದಲ್ಲಿ ಆಟೋ ಮಾಲೀಕರು ಮತ್ತು ಚಾಲಕರ ಸಂಘದಿಂದ ಹರಿಹರದಲ್ಲಿ ಪ್ರತಿಭಟನೆ ನಡೆಸಲಾಯಿತು.