ಮರವಂತೆಯ ಮಾರಸ್ವಾಮಿಯ ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಶ್ರದ್ಧಾ ಭಕ್ತಿ ಹಾಗೂ ಸಡಗರದಿಂದ ಸಂಪನ್ನಗೊಂಡಿತು.
ಕುಂದಾಪುರ: ಮರವಂತೆಯ ಮಾರಸ್ವಾಮಿಯ ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಶ್ರದ್ಧಾ ಭಕ್ತಿ ಹಾಗೂ ಸಡಗರದಿಂದ ಸಂಪನ್ನಗೊಂಡಿತು.
ಕರ್ಕಾಟಕ ಅಮಾವಾಸ್ಯೆ ಪರ್ವದ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ತಂಡೋಪತಂಡವಾಗಿ ದೇವಸ್ಥಾನದತ್ತ ಆಗಮಿಸಿದರು. ಮುಂಜಾನೆಯಿಂದಲೇ ದೇವಸ್ಥಾನದ ಪರಿಸರದಲ್ಲಿ ಭಕ್ತರ ಸಂಖ್ಯೆ ಸಹಸ್ರಾರು ಸಂಖ್ಯೆಗೆ ಏರಿತು.ಭಕ್ತರು ಸಂಪ್ರದಾಯದಂತೆ ಸಮುದ್ರ ಹಾಗೂ ನದಿಯಲ್ಲಿ ಪವಿತ್ರ ಸ್ನಾನ ನೆರವೇರಿಸಿ ಬಳಿಕ ಶ್ರೀ ವರಾಹ ದೇವರ ದರ್ಶನ ಪಡೆದರು. ದೇವರಿಗೆ ಅಭಿಷೇಕ, ವಿಶೇಷ ಪೂಜೆ ಹಾಗೂ ವಿವಿಧ ಸೇವೆಗಳನ್ನು ಸಲ್ಲಿಸಿ ಹರಕೆ ತೀರಿಸಿದರು. ದೇವಸ್ಥಾನದಲ್ಲಿ ಭಕ್ತರಿಗಾಗಿ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿದ್ದು, ಸರತಿ ಸಾಲಿನಲ್ಲಿ ಸಾಗಿದ ಭಕ್ತರು ಶಾಂತವಾಗಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಜಾತ್ರೆ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ವಿಶೇಷವಾಗಿ ಪುಷ್ಪಾಲಂಕಾರದಿಂದ ಸಿಂಗರಿಸಲಾಗಿತ್ತು. ದೇವಾಲಯದ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ದೂರದ ಊರುಗಳಿಂದ ಆಗಮಿಸಿದ್ದ ಭಕ್ತರ ವಾಹನಗಳಿಂದ ಮರವಂತೆ ಭಾಗದಲ್ಲಿ ವಾಹನ ಸಂಚಾರವೂ ಹೆಚ್ಚಾಗಿತ್ತು.