ಸಾರಾಂಶ
ಕನ್ನಡಪ್ರಭ ವಾರ್ತೆ ಬಳ್ಳಾರಿ
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಜನಪರ ಕಾರ್ಯಕ್ರಮ ಅನುಷ್ಠಾನದಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.ಬೆಂಗಳೂರಿನ ಗುತ್ತಿಗೆದಾರ ಅಂಬಿಕಾಪತಿ ಮನೆಯ ಮೇಲೆ ನಡೆದ ಐಟಿ ದಾಳಿ ವೇಳೆಯಲ್ಲಿ ಸಿಕ್ಕ ₹42 ಕೋಟಿ ನಗದು ಹಣ ಸರ್ಕಾರದ ಕೆಲವರಿಗೆ ಕಮಿಷನ್ ರೂಪದಲ್ಲಿ ಸೇರಿದ ಹಣ ಎಂಬ ಗುಮಾನಿ ಮೂಡಿದೆ. ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಗೆಂದು ನೀಡಿದ ಬಾಕಿ ಹಣ ₹650 ಕೋಟಿ ಪ್ರತಿಯಾಗಿ ಗುತ್ತಿಗೆದಾರರು ₹42 ಕೋಟಿ ಕಮಿಷನ್ ರೂಪವಾಗಿ ನೀಡಿರುವ ಶಂಕೆಯಿದೆ. ಈ ರೀತಿಯಾಗಿ ಹಣವನ್ನು ಸಂಗ್ರಹ ಮಾಡಿಕೊಂಡು ಪಂಚರಾಜ್ಯ ಚುನಾವಣೆಗೆ ಕಾಂಗ್ರೆಸ್ ಬಳಕೆ ಮಾಡುವ ಹುನ್ನಾರ ನಡೆಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ನಗರ ಮಾಜಿ ಶಾಸಕ ಜಿ. ಸೋಮಶೇಖರ ರೆಡ್ಡಿ, ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ರಾಜ್ಯದ ಜನರು ಸಾಕಷ್ಟು ನಿರೀಕ್ಷೆಯನ್ನಿಟ್ಟುಕೊಂಡು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಆದರೆ, ಈ ಸರ್ಕಾರ ಜನಪರವಾದ ಯಾವುದೇ ನೀತಿಗಳನ್ನು ಜಾರಿಗೊಳಿಸುವ ಬದಲು ಕಮಿಷನ್ ದಂಧೆಯಲ್ಲಿ ಮುಳುಗಿದೆ. ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಆಗಿದ್ದು, ಕಾಂಗ್ರೆಸ್ ನಾಯಕರು ಕರ್ನಾಟಕವನ್ನು ಕಲೆಕ್ಷನ್ ಕೇಂದ್ರವನ್ನಾಗಿ ಮಾಡಿಕೊಂಡಿದ್ದಾರೆ ಎಂದು ದೂರಿದರು.ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಮಾತನಾಡಿ, ರಾಜ್ಯದಲ್ಲಿ ಬರಗಾಲ ತೀವ್ರವಾಗಿದೆ. ಆದರೆ, ಬರಪೀಡಿತ ಪ್ರದೇಶಗಳಿಗೆ ನೆರವಿಗೆ ಸರ್ಕಾರ ಮುಂದಾಗಿಲ್ಲ. ಜನ- ಜಾನುವಾರುಗಳು ಕುಡಿಯುವ ನೀರು, ಮೇವಿನ ಸಮಸ್ಯೆ ಎದುರಿಸುತ್ತಿವೆ. ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಮಿತಿ ಮೀರಿದೆ. ವರ್ಗಾವಣೆ ದಂಧೆಯಿಂದ ಆಡಳಿತ ವ್ಯವಸ್ಥೆ ಹಾದಿ ತಪ್ಪಿದೆ ಎಂದು ದೂರಿದರು.
ಪಕ್ಷದ ಜಿಲ್ಲಾಧ್ಯಕ್ಷ ಮುರಹರಗೌಡ ಗೋನಾಳ್, ಹಿರಿಯ ಮುಖಂಡರಾದ ಎಸ್. ಗುರುಲಿಂಗನಗೌಡ, ಕೆ.ಎ. ರಾಮಲಿಂಗಪ್ಪ ಅವರು ರಾಜ್ಯ ಸರ್ಕಾರದ ದುರಾಡಳಿತ ನೀತಿಗಳನ್ನು ಖಂಡಿಸಿದರು.ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ರಾಯಲ್ ವೃತ್ತದಲ್ಲಿ ಪ್ರತಿಭಟನಾ ಸಮಾವೇಶ ನಡೆಸಿ, ರಾಜ್ಯ ಸರ್ಕಾರ ಆಡಳಿತ ವೈಖರಿಯನ್ನು ಟೀಕಿಸಿದರು.
ಪಕ್ಷದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಗುಣಾ ಕಾಕರ್ಲ, ಉಪಾಧ್ಯಕ್ಷೆ ಪುಷ್ಪಾ, ಬುಡಾ ಮಾಜಿ ಅಧ್ಯಕ್ಷ ಮಾರುತಿ ಪ್ರಸಾದ್ ಸೇರಿದಂತೆ ಪಕ್ಷದ ಜಿಲ್ಲಾ ಪ್ರಮುಖರು ಹಾಗೂ ಬಿಜೆಪಿ ಪಾಲಿಕೆ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.