ಬಾನೆತ್ತರದಲ್ಲಿ ಹಾರಾಡಿದ ಕರ್ನಾಟಕ ಸುವರ್ಣ ಸಂಭ್ರಮದ ಗಾಳಿಪಟ

| Published : Nov 01 2023, 01:01 AM IST / Updated: Nov 01 2023, 01:02 AM IST

ಸಾರಾಂಶ

ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡ ಸಂಭ್ರಮವನ್ನು ಜಿಲ್ಲೆಯಾದ್ಯಂತ ಅತ್ಯಂತ ಸಂಭ್ರಮದಿಂದ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ.

ಕಾರವಾರ:

ನಗರದ ರವೀಂದ್ರನಾಥ ಟಾಗೂರ ಕಡಲ ತೀರದಲ್ಲಿ ಆಯೋಜಿಸಿದ್ದ ಕನ್ನಡ ಬಾವುಟದಲ್ಲಿನ ಕೆಂಪು ಮತ್ತು ಹಳದಿ ಬಣ್ಣದಲ್ಲಿ ತಯಾರಿಸಿದ್ದ ಗಾಳಿಪಟಗಳನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಮುಗಿಲೆತ್ತರದಲ್ಲಿ ಹಾರಾಡಿಸಿ ಸುವರ್ಣ ಸಂಭ್ರಮವನ್ನು ಇಮ್ಮಡಿಗೊಳಿಸಿದರು.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡ ಸಂಭ್ರಮದ ಪ್ರಯುಕ್ತ ಜಿಲ್ಲೆಯಲ್ಲಿ ಸರ್ಕಾರದ ಸುತ್ತೋಲೆಯಂತೆ ವಿಶಿಷ್ಠಪೂರ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಅದರ ಆಂಗವಾಗಿ ಮಂಗಳವಾರ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸ್ವತಃ ಗಾಳಿಪಟವನ್ನು ಮುಗಿಲಿಗೆ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಂದಾಜು 30 ನಿಮಿಷ ಬಾನಿನಲ್ಲಿ ಗಾಳಿಪಟ ಹಾರಿಸಿದ ಜಿಲ್ಲಾಧಿಕಾರಿಗಳು ನಂತರ ಮಾತನಾಡಿ, ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡ ಸಂಭ್ರಮವನ್ನು ಜಿಲ್ಲೆಯಾದ್ಯಂತ ಅತ್ಯಂತ ಸಂಭ್ರಮದಿಂದ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ನ. 1ರಂದು ಜಿಲ್ಲೆಯ ಎಲ್ಲ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿ ಬಿಡಿಸಿ ಕರ್ನಾಟಕ ಸಂಭ್ರಮ-50 “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಎಂಬ ಘೋಷ ವಾಕ್ಯ ಬರೆಯಲು ಹಾಗೂ ತಳಿರು ತೋರಣ ಕಟ್ಟಲು ತಿಳಿಸಲಾಗಿದೆ. ಬೆಳಗ್ಗೆ 9ಕ್ಕೆ ಎಲ್ಲ ಆಕಾಶವಾಣಿ ಕೇಂದ್ರಗಳಲ್ಲಿ (ರೇಡಿಯೋ) ನಾಡ ಗೀತೆ ಪ್ರಸಾರ ಮಾಡಲಾಗುತ್ತದೆ. ಆ ಸಮಯದಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡ ಗೀತೆಗೂ ಗೌರವ ಸಲ್ಲಿಸುವಂತೆ ಕೋರಿದರು.ಮಂಗಳವಾರ ನಡೆದ ಗಾಳಿಪಟ ಹಾರಿಸುವ ಕಾರ್ಯಕ್ರಮದಲ್ಲಿ 50ಕ್ಕೂ ಅಧಿಕ ಅಧಿಕಾರಿಗಳು ಮತ್ತು ಸಿಬ್ಬಂದಿ, ಸಾರ್ವಜನಿಕರು ಭಾಗವಹಿಸಿ ಕೆಂಪು ಮತ್ತು ಹಳದಿ ಬಣ್ಣದಲ್ಲಿ ತಯಾರಿಸಿದ್ದ ವಿವಿಧ ವಿನ್ಯಾಸದ ಗಾಳಿಪಟ ಹಾರಿಸಿ ಸಂಭ್ರಮಿಸಿದರು.ಅಪರ ಜಿಲ್ಲಾಧಿಕಾರಿ ಪ್ರಕಾಶ ರಾಜಪೂತ, ಕಾರವಾರ ಉಪವಿಭಾಗಾಧಿಕಾರಿ ಜಯಲಕ್ಷ್ಮಿ ರಾಯಕೋಡ್ ಮೊದಲಾದವರು ಇದ್ದರು.