ಹೊಸಪೇಟೆ ನಗರ ಹಾಗೂ ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿ ಕಳಪೆ

ಹೊಸಪೇಟೆ: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪಮಾತನಾಡಿ, ನಗರದ ಹೊರ ವಲಯದಲ್ಲಿ ನಿರ್ಮಿಸಲಾದ ನೂತನ 250 ಹಾಸಿಗೆಗಳ ಜಿಲ್ಲಾಸ್ಪತ್ರೆಯನ್ನು ಯಾವುದೇ ಕಾರಣಕ್ಕೂ ತರಾತುರಿಯಲ್ಲಿ ಉದ್ಘಾಟನೆ ಮಾಡಬಾರದು. ಮೊದಲು ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ವೈದ್ಯರು ಹಾಗೂ ಸಿಬ್ಬಂದಿ ನೇಮಕ ಮಾಡಬೇಕು ಮತ್ತು ಚಿಕಿತ್ಸೆಗೆ ಅಗತ್ಯವಿರುವ ಎಲ್ಲ ವೈದ್ಯಕೀಯ ಯಂತ್ರೋಪಕರಣ ಆಸ್ಪತ್ರೆಗೆ ಬಂದ ನಂತರವೇ ಆಸ್ಪತ್ರೆ ಉದ್ಘಾಟನೆ ಮಾಡಬೇಕು ಎಂದು ಒತ್ತಾಯಿಸಿದರು.

ಅಲ್ಲದೆ ಹೊಸಪೇಟೆ ನಗರ ಹಾಗೂ ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಸ್ತೆ ಹಾಗೂ ಚರಂಡಿ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು. ಈ ಕುರಿತು ಲೋಕೋಪಯೋಗಿ ಸಚಿವರು ನಗರಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಬೇಕು ಹಾಗೂ ಕಳಪೆ ಕಾಮಗಾರಿ ಕೈಗೊಂಡ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಕಾಮಗಾರಿ ಪರಿಶೀಲನೆ ನಡೆಸದೇ ಕಮಿಷನ್ ಹಣ ಪಡೆದ ಅಧಿಕಾರಿಗಳು ಹಾಗೂ ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರರನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ನಂತರ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿಗೆ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸ್ವಾಭಿಮಾನಿ ಸೇನೆ ಜಿಲ್ಲಾ ಕಾರ್ಯದರ್ಶಿ ಎನ್.ಎಚ್.ಶ್ರೀನಿವಾಸ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಎಸ್.ಎಂ. ಜಾಫರ್, ತಾಲೂಕಾಧ್ಯಕ್ಷ ಈಡಿಗರ ರಮೇಶ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.