ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಣ ಹಂಚುವುದು ಹಾಗೂ ದ್ವೇಷ ಭಾಷಣ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದರಿಂದ ಚುನಾವಣೆ ಅನೂರ್ಜಿತಗೊಳಿಸಿ, ಮರು ಚುನಾವಣೆ ಮಾಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ ನಾಗರಾಜ ಕಲಕುಟಕರ ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಮತದಾನದ ದಿನ ಕಾಂಗ್ರೆಸ್ ಮುಖಂಡರೊಬ್ಬರು ಪಕ್ಷದ ಅಭ್ಯರ್ಥಿ ಪರವಾಗಿ ಮತ ಪಡೆಯಲು ಮತದಾರರಿಗೆ ಹಣದ ಆಮಿಷವೊಡ್ಡಿದ್ದಾರೆ. ಬಿಜೆಪಿ ಮುಖಂಡರು ದ್ವೇಷ ಭಾಷಣ ಮಾಡಿದ್ದಾರೆ. ಈ ಎರಡೂ ಘಟನೆಗಳ ಕುರಿತು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಬಗ್ಗೆ ದೂರು ದಾಖಲಾಗಿವೆ ಎಂದು ತಿಳಿಸಿದರು.

ಚುನಾವಣೆಗೆ ಸ್ಪರ್ಧಿಸಿದಾಗಲೇ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವಂತಿಲ್ಲ. ಮತದಾರರಿಗೆ ಆಮಿಷವೊಡ್ಡುವುದು, ದ್ವೇಷ ಭಾಷಣ ಮಾಡಬಾರದು ಎಂದು ತಿಳಿಸಲಾಗುತ್ತದೆ. ಉಲ್ಲಂಘಿಸಿದರೆ, ಚುನಾವಣೆ ರದ್ದುಪಡಿಸಬಹುದು ಎಂದಿದೆ. ಆದ್ದರಿಂದ ಚುನಾವಣೆ ರದ್ದುಗೊಳಿಸಬೇಕು. ಮರು ಚುನಾವಣೆಗೆ ಮಾಡಬೇಕು ಎಂದು ಒತ್ತಾಯಿಸಿದರು.

ಮತದಾನ ಎಣಿಕೆ ಮುನ್ನವೇ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಗಳ ಬಗ್ಗೆ ತನಿಖೆ ನಡೆಸಬೇಕು. ಅವರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಕೆಆರ್ಎಸ್ ಪಕ್ಷವೂ ಈ ಕುರಿತು ಕಾನೂನು ಹೋರಾಟ ನಡೆಸಲು ಉದ್ದೇಶಿಸಿದೆ ಎಂದು ಹೇಳಿದರು.