ಕನ್ನಡಪ್ರಭ ವಾರ್ತೆ, ತುಮಕೂರುಕರ್ನಾಟಕದ ರಪ್ತುಗಳ ಭವಿಷ್ಯ ಅತ್ಯಂತ ಪ್ರಕಾಶಮಾನವಾಗಿದ್ದು, ರಾಜ್ಯಕ್ಕೆ ಇನ್ನಷ್ಟು ರಫ್ತು ಸಾಧನೆ ಮಾಡಲು ಹೆಚ್ಚಿನ ಅವಕಾಶಗಳಿವೆ ಎಂದು ಕಾಸಿಯಾ ಅಧ್ಯಕ್ಷ ಗಣೇಶ್ ರಾವ್ ಬಿ.ಆರ್. ಹೇಳಿದರು.ನಗರದ ಬಟವಾಡಿ ಸಮೀಪವಿರುವ ಅರ್ಬನ್ ರೆಸಾರ್ಟ್ ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಹಾಗೂ ರಫ್ತು ಕುರಿತು ಆಯೋಜಿಸಿದ್ದ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ರಫ್ತುವಿನಲ್ಲಿ ನಮ್ಮ ರಾಜ್ಯವು ಪ್ರಮುಖ ಸ್ಥಾನವನ್ನು ಪಡೆದಿದ್ದು, ಸರಕು ರಫ್ತುಗಳಲ್ಲಿ ದೇಶದಲ್ಲೇ 4ನೇ ಸ್ಥಾನದಲ್ಲಿದೆ. ಸೇವಾ ರಫ್ತುಗಳಲ್ಲಿ 1ನೇ ಸ್ಥಾನದಲ್ಲಿದೆ. ಕಳೆದ ಹಣಕಾಸು ವರ್ಷದಲ್ಲಿ ಕರ್ನಾಟಕವು ಸುಮಾರು 30 ಬಿಲಿಯನ್ ಡಾಲರ್ ಮೌಲ್ಯದ ಸರಕು ರಫ್ತುಗಳನ್ನು ದಾಖಲಿಸಿದ್ದು, ಜತೆಗೆ ಸೇವಾ ರಫ್ತುಗಳಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಸುಮಾರು 160 ಬಿಲಿಯನ್ ಡಾಲರ್ ಮೌಲ್ಯದ ರಫ್ತುಗಳನ್ನು ರಾಜ್ಯ ಸಾಧಿಸಿದೆ ಎಂದು ಅವರು ತಿಳಿಸಿದರು. ಹಣಕಾಸು ಸಚಿವಾಲಯವು ಎಂಎಸ್ಎಂಇ ರಫ್ತುಗಾರರ ಜೀವನವನ್ನು ಮತ್ತಷ್ಟು ಸುಗಮಗೊಳಿಸಲು ಹಲವು ಮಾರ್ಗಸೂಚಿಗಳನ್ನು ರೂಪಿಸುತ್ತಿದೆ. ಇ-ಕಾಮರ್ಸ್ ಮೂಲಕ ರಫ್ತು ಮಾಡಲು ಬಯಸುವ ಬ್ರಾಂಡ್ ಗಳಿಗೆ ಸಹ ವಿವಿಧ ಸಚಿವಾಲಯಗಳಿಂದ ಸಹಾಯ ಒದಗಿಸಲಾಗುತ್ತಿದೆ. ಅವರಿಗೆ ಕ್ರೆಡಿಟ್ ಸೌಲಭ್ಯಗಳನ್ನು ನೀಡುವುದು, ರಫ್ತು ದಾಖಲೆ ಸಲ್ಲಿಕೆ ಪ್ರಕ್ರಿಯೆಯನ್ನು ಸರಳಗೊಳಿಸುವುದು ಮತ್ತು ಲಾಜಿಸ್ಟಿಕ್ ವ್ಯವಸ್ಥೆಗಳಲ್ಲಿ ನೆರವು ನೀಡುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಿಂದ ರಫ್ತು ಪ್ರಕ್ರಿಯೆಯ ಕಷ್ಟಕರ ಹಂತಗಳು ಸರಳವಾಗುತ್ತಿವೆ ಎಂದು ಅವರು ಹೇಳಿದರು.ಸಮಾರಂಭ ಉದ್ಘಾಟಿಸಿದ ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಪಿ. ಕುರಂದವಾಡ ಮಾತನಾಡಿ, ಕಾಸಿಯಾ ವತಿಯಿಂದ ರಫ್ತು ಕುರಿತು ಹಮ್ಮಿಕೊಂಡಿರುವ ಅರಿವು ಮೂಡಿಸುವ ಈ ಕಾರ್ಯಕ್ರಮ ತುಮಕೂರು ನಗರದಲ್ಲಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಉದ್ಯಮಿಗಳಿಗೆ ಪ್ರಯೋಜನಕಾರಿಯಾಗಿದೆ ಎಂದು ತಿಳಿಸಿದರು.ವಸಂತನರಸಾಪುರ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಸಿ.ವಿ.ಹರೀಶ್ ಮಾತನಾಡಿ, ಹೊಸದಾಗಿ ಕೈಗಾರಿಕೆಗಳನ್ನು ಸ್ಥಾಪಿಸುವವರಿಗೆ ಹಾಗೂ ತುಮಕೂರಿನ ಎಲ್ಲಾ ಕೈಗಾರಿಕೋದ್ಯಮಿಗಳು ತುಂಬಾ ಅನುಕೂಲವಾಗಲಿದೆ ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಸಿಯಾ ಉಪಾಧ್ಯಕ್ಷ ನಿಂಗಣ್ಣ ಎಸ್. ಬಿರಾದರ ವಹಿಸಿದ್ದರು.ಈ ಸಂದರ್ಭದಲ್ಲಿ ಕಾಸಿಯಾ ಕಾರ್ಯಕಾರಿ ಸಮಿತಿ ಸದಸ್ಯರಾದ ಸದಾಶಿವ ಆರ್. ಆಮಿನ್, ತುಮಕೂರು ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಸುಜ್ಞಾನ ಹಿರೇಮಠ, ಕೈಗಾರಿಕೋದ್ಯಮಿ ಹೆಚ್.ಎನ್. ಚಂದ್ರಶೇಖರ್, ದಿನೇಶ್ಕುಮಾರ್ ವಿ., ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಪಿ. ಕುರಂದವಾಡ, ವಸಂತನರಸಾಪುರ ಇಂಡಸ್ಟ್ರೀಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ಸಿ.ವಿ.ಹರೀಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ್, ಕಾರ್ಯಕಾರಿ ಸಮಿತಿ ಸದಸ್ಯರು, ಸಂಯೋಜಿತ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕರ್ನಾಟಕದ ರಫ್ತುಗಳ ಭವಿಷ್ಯ ಅತ್ಯಂತ ಪ್ರಕಾಶಮಾನ
ಕರ್ನಾಟಕದ ರಪ್ತುಗಳ ಭವಿಷ್ಯ ಅತ್ಯಂತ ಪ್ರಕಾಶಮಾನವಾಗಿದ್ದು, ರಾಜ್ಯಕ್ಕೆ ಇನ್ನಷ್ಟು ರಫ್ತು ಸಾಧನೆ ಮಾಡಲು ಹೆಚ್ಚಿನ ಅವಕಾಶಗಳಿವೆ ಎಂದು ಕಾಸಿಯಾ ಅಧ್ಯಕ್ಷ ಗಣೇಶ್ ರಾವ್ ಬಿ.ಆರ್. ಹೇಳಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.