ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ ಎಂದು ಎಲ್ಲ ಗ್ರಾಪಂಗಳ ಮೂಲಕ ಆಕ್ಷೇಪ ಸಲ್ಲಿಸಲು ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ಮಾಸಿಕ ಸಭೆಯಲ್ಲಿ ನಿರ್ಣಯಿಸಲಾಯಿತು.

ನಾಪೋಕ್ಲು: ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕ ಎಂದು ಎಲ್ಲ ಗ್ರಾಪಂಗಳ ಮೂಲಕ ಆಕ್ಷೇಪ ಸಲ್ಲಿಸಲು ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ಮಾಸಿಕ ಸಭೆಯಲ್ಲಿ ನಿರ್ಣಯಿಸಲಾಯಿತು.

ಮಡಿಕೇರಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ ಪಾಡಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಜಿಲ್ಲಾಧಿಕಾರಿಗಳು ತಕ್ಷಣ ಕಂದಾಯ ಮತ್ತು ಅರಣ್ಯ ಇಲಾಖೆ ವತಿಯಿಂದ ಜಂಟಿ ಸರ್ವೆ ಮಾಡಿಸಿ, ಸರ್ಕಾರಕ್ಕೆ ವರದಿ ನೀಡುವಂತೆ ಆಗ್ರಹಿಸಲಾಯಿತು. ವರದಿ ತಯಾರಿಸುವಾಗ ಸ್ಥಳೀಯ ಗ್ರಾಪಂಗಳ ಅಥವಾ ಜನರ ಅಭಿಪ್ರಾಯವನ್ನು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಪ್ರಜಾಪ್ರಭುತ್ವದ ವಿಕೇಂದ್ರೀಕರಣ ನೀತಿಗೆ ವಿರುದ್ಧವಾಗಿರಬಾರದು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಗ್ರಾಮೀಣ ರಸ್ತೆಗಳು, ಸರ್ಕಾರಿ ಕಟ್ಟಡಗಳಿಗೆ ಮತ್ತು ಕೃಷಿಗೆ ಹಾನಿಯಾಗಿದ್ದು ತಕ್ಷಣ ಗ್ರಾಪಂಗಳಿಗೆ ಭೇಟಿ ನೀಡಿ ವರದಿ ಸಂಗ್ರಹಿಸಿ ಸರ್ಕಾರಕ್ಕೆ ಸಲ್ಲಿಸುವುದು ಹಾಗೂ ಎಂಡಿಆರ್‌ಎಫ್‌ ಅನುದಾನ ಪಡೆಯಲು ಪ್ರಯತ್ನಿಸಬೇಕು. ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದು ಒತ್ತಾಯಿಸಲಾಯಿತು.

ಜಲಜೀವನ್‌ ಮಿಷನ್ ಯೋಜನೆಗೆ ಸಂಬಂಧಿಸಿದಂತೆ ಗ್ರಾಮಗಳಲ್ಲಿ ಸಮರ್ಪಕವಾಗಿ ಕೆಲಸ ಕಾರ್ಯ ಆಗಿಲ್ಲ. ಸಮಯಕ್ಕೆ ಸರಿಯಾಗಿ ನಡೆಯದೆ ಇದರ ಬಗ್ಗೆ ಎಲ್ಲ ಗ್ರಾಮಗಳಿಗೆ ತಾಪಂ ಕಾರ್ಯನಿರ್ವಹಣಾಧಿಕಾರಿ ಮತ್ತು ತಾಪಂ ಆಡಳಿತ ಅಧಿಕಾರಿಗಳು ಜಂಟಿಯಾಗಿ ಸರ್ವೆ ಮಾಡಿ ತಕ್ಷಣ

ಕೆಲಸ ಕಾರ್ಯಗಳನ್ನು ಮುಗಿಸಬೇಕು ಎಂದು ಕಾರ್ಯಕರ್ತರು ಸಭೆಯಲ್ಲಿ ಒತ್ತಾಯಿಸಿದರು. ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಉಪಾಧ್ಯಕ್ಷ ಕೆ.ಎಸ್. ಸತೀಶ್, ಜಿಲ್ಲಾ ಕಾರ್ಯದರ್ಶಿ ಉಮಾ ಪ್ರಭು, ಮಂಡಲ ಕಾರ್ಯದರ್ಶಿ ಡೀನ್ ಬೋಪಣ್ಣ, ಧನುಷ್ ಉಪಸ್ಥಿತರಿದ್ದರು. ಗ್ರಾಮಾಂತರ ಮಂಡಲದ ಪದಾಧಿಕಾರಿಗಳು ಮಹಾಶಕ್ತಿ ಕೇಂದ್ರ ಮತ್ತು ಶಕ್ತಿ ಕೇಂದ್ರದ ಪ್ರಮುಖರು ಹಾಜರಿದ್ದರು.