ಸಿಎಂ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ, ಶಿಷ್ಟಾಚಾರ ಪಾಲಿಸಿ: ಜಿಲ್ಲಾಧಿಕಾರಿ

| Published : Jun 20 2024, 01:00 AM IST

ಸಿಎಂ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ, ಶಿಷ್ಟಾಚಾರ ಪಾಲಿಸಿ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ಆಗಿರುವುದರಿಂದ ಮಹತ್ವದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು.

ಹೊಸಪೇಟೆ: ವಿಜಯನಗರ ಜಿಲ್ಲೆಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜೂ.21ರಂದು ಕೆಡಿಪಿ ಸಭೆಗೆ ಮುಖ್ಯಮಂತ್ರಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶಿಷ್ಟಾಚಾರ ಪಾಲನೆಯೊಂದಿಗೆ ಶಿಸ್ತನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿ ಮಾತನಾಡಿದ ಅವರು, ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ ಆಗಿರುವುದರಿಂದ ಮಹತ್ವದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಬೇಕು. ಇಲಾಖೆಗಳ ಪ್ರಗತಿಗೆ ಪೂರಕವಾಗಿ ಸಿಎಂ ಬಯಸುವ ಯಾವುದೇ ಮಾಹಿತಿಯನ್ನು ತಕ್ಷಣ ಕೊಡುವ ಹಾಗೆ ಎಲ್ಲ ಮಾಹಿತಿಯೊಂದಿಗೆ ಅಧಿಕಾರಿಗಳು ಬರಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಅಧಿಕಾರಿಗಳು ಶಿಷ್ಟಾಚಾರ ಪಾಲನೆ ಮಾಡಬೇಕು. ಕಚೇರಿಯ ಇನ್ನಿತರ ಅಧಿಕಾರಿ ಸಿಬ್ಬಂದಿ ನಿಯೋಜಿಸದೇ ಜಿಲ್ಲಾಮಟ್ಟದ ಅಧಿಕಾರಿಗಳೇ ಸಭೆಗೆ ಖುದ್ದು ಹಾಜರಾಗಬೇಕು. ನಿಗದಿತ ಸಮಯಕ್ಕೆ ಸಭೆಗೆ ಹಾಜರಾಗಬೇಕು. ಸಭೆಯಲ್ಲಿ ಕೇಳುವ ಪ್ರಶ್ನೆಗಳಿಗೆ ಅನಾವಶ್ಯಕವಾಗಿ ವಿವರಣೆ ನೀಡದೇ ನೇರವಾಗಿ ಉತ್ತರಿಸಬೇಕು. ಗೊಂದಲಕ್ಕೆ ಅವಕಾಶವಿಲ್ಲದ ಹಾಗೆ ವಸ್ತುನಿಷ್ಠವಾಗಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜನಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು, ಪತ್ರಕರ್ತರಿಗೆ ಪ್ರತ್ಯೇಕವಾಗಿ ಆಸನ ವ್ಯವಸ್ಥೆ ಮಾಡಬೇಕು. ಪಾಸು ಪಡೆದ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶಾವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಈ ಬಾರಿ ಮುಂಗಾರು ಮಳೆಗಳು ಉತ್ತಮವಾಗಿ ಸುರಿದಿವೆ. ಬಿತ್ತನೆಯ ಕಾರ್ಯಾರಂಭವಾಗಿದೆ. ಹೋಬಳಿ, ತಾಲೂಕುವಾರು ಮಳೆ ವಿವರ, ಬಿತ್ತನೆ ಗುರಿ, ಬಿತ್ತನೆ ಬೀಜ ಮತ್ತು ರಸಗೊಬ್ಬರದ ದಾಸ್ತಾನು ಸೇರಿ ಈ ಮಾಹಿತಿಯನ್ನು ಸ್ಪಷ್ಟವಾಗಿ ನೀಡಬೇಕು.

ಜಿಲ್ಲೆಯಲ್ಲಿ ನಡೆಯುತ್ತಿರುವ ಮಹತ್ವದ ಕಾಮಗಾರಿಗಳು, ಅವುಗಳ ಪ್ರಗತಿ, ಟೆಂಡರ್ ಹಂತದಲ್ಲಿರುವ ಕಾಮಗಾರಿಗಳ ಮಾಹಿತಿಯನ್ನು ಅನುಷ್ಠಾನಾಧಿಕಾರಿಗಳು ಸಭೆಗೆ ಸರಿಯಾಗಿ ನೀಡಬೇಕು ಎಂದು ತಿಳಿಸಿದರು.

ಜಿಪಂ ನರೇಗಾ ಯೋಜನೆ ಸಹ ಅಚ್ಚುಕಟ್ಟಾಗಿ ಅನುಷ್ಠಾನವಾಗಿದೆ. ಇಂತಹ ಮಹತ್ವದ ಅನೇಕ ಯೋಜನೆಗಳು ವಿಜಯನಗರ ಜಿಲ್ಲೆಯಲ್ಲಿ ಉತ್ತಮವಾಗಿ ಅನುಷ್ಠಾನಗೊಂಡ ಬಗ್ಗೆ ಯಶೋಗಾಥೆಯನ್ನು ಆಯಾ ಇಲಾಖೆಯ ಅಧಿಕಾರಿಗಳು ಪ್ರಾತ್ಯಕ್ಷಿಕೆಯ ಮೂಲಕ ಸಭೆಗೆ ಸಾದರಪಡಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿಪಂ ಸಿಇಒ ಸದಾಶಿವ ಪ್ರಭು ಬಿ., ಎಸ್ಪಿ ಶ್ರೀಹರಿಬಾಬು, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಜಿಪಂ ಮುಖ್ಯ ಯೋಜನಾಧಿಕಾರಿ ಅನ್ನದಾನೇಶ್ವರ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.