ಸಾರಾಂಶ
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಭೆ । ಇಲಾಖೆ ಅಧಿಕಾರಿಗಳಿಗೆ ತೀವ್ರ ತರಾಟೆ
ಕನ್ನಡಪ್ರಭ ವಾರ್ತೆ ದಾವಣಗೆರೆಶಾಲೆ ಬಿಟ್ಟ ಮಕ್ಕಳ ಚಲನವಲನದ ಮೇಲೆ ನಿಗಾ ವಹಿಸುವ ಜೊತೆಗೆ ಬಾಲಕಾರ್ಮಿಕ ಪದ್ಧತಿ ಅಲ್ಲಲ್ಲಿ ವರದಿಯಾಗುತ್ತಿದ್ದು, ಬಾಲ ಕಾರ್ಮಿಕತೆ ನಿರ್ಮೂಲನೆಯಲ್ಲಿ ಅಂತರ ಇಲಾಖೆಗಳ ಮಧ್ಯೆ ಸಮನ್ವಯದ ಕೊರತೆ ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಚಾಟಿ ಬೀಸಿದರು.
ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯ ಜಿಲ್ಲಾ ಮಟ್ಟದ ಕಾರ್ಯಪಡೆ ಹಾಗೂ ಕಾರ್ಯಕಾರಿಣಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಲ ಕಾರ್ಮಿಕರು ಜಿಲ್ಲೆಯ ಯಾವುದೇ ಭಾಗದಲ್ಲಿ ಕಂಡು ಬಂದರೂ ತಕ್ಷಣವೇ ಎಲ್ಲಾ ಇಲಾಖೆ ಅಧಿಕಾರಿಗಳು ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದರು.2024ರ ಏಪ್ರಿಲ್ನಿಂದ 2025ರ ಮಾರ್ಚ್ ವರೆಗೆ ಜಿಲ್ಲೆಯಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಥ ಮತ್ತು ನಿಯಂತ್ರಣ 1986ರ ಕಾಯ್ದೆ ಕಲಂ 16 ಮತ್ತು 17ರಡಿ 372 ಕಡೆ ತಪಾಸಣೆ ಮಾಡಿ, 23 ಬಾಲಕಾರ್ಮಿಕರನ್ನು ಪತ್ತೆ ಮಾಡಿ, ಪ್ರಕರಣ ದಾಖಲಿಸಲಾಗಿದೆ. ಆದರೆ, ಒಂದು ವರ್ಷದ ಅವದಿಯಲ್ಲಿ ಇಷ್ಟು ಮಾತ್ರ ಬಾಲಕಾರ್ಮಿಕರನ್ನು ಪತ್ತೆ ಮಾಡಿರುವುದು ಅಂತರ ಇಲಾಖೆಗಳ ಅಧಿಕಾರಿಗಳ ಮಧ್ಯೆ ಸಮನ್ವಯದ ಕೊರತೆ ಕಾರಣವೆಂಬುದನ್ನು ತೋರಿಸುತ್ತದೆ ಎಂದು ತರಾಟೆಗೆ ತೆಗೆದುಕೊಂಡರು.
ದಾವಣಗೆರೆ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಯಾಗಬೇಕು. ಬಾಲ್ಯ ವಿವಾಹ, ಪೋಕ್ಸೋ ಪ್ರಕರಣಗಳು ಸಹ ವರದಿಯಾಗಬಾರದು. ಬಾಲ್ಯ ವಿವಾಹವಾಗುವುದರಿಂದ ತಾಯಿ ಮರಣ ಪ್ರಮಾಣ ಹೆಚ್ಚುತ್ತದೆ. ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣ ಹೆಚ್ಚಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ ಜಿಲ್ಲಾ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಿದ್ದರೂ ಸಹ ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಮ್ಮ ಜಿಲ್ಲೆಯ 26ನೇ ಸ್ಥಾನದಲ್ಲಿರುವುದು ಬೇಸರದ ಸಂಗತಿಯಾಗಿದೆ ಎಂದರು.ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿನ ಫಲಿತಾಂಶ ಕಡಿಮೆಯಾಗಿರುವ ಕಾರಣ ಮುಂದಿನ ದಿನಗಳಲ್ಲಿ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಹ ವಿದ್ಯಾರ್ಥಿಗಳಂತೆ ಪಾಠ ಕೇಳುವ ಕೆಲಸವನ್ನು ಮಾಡಲು ಸೂಚಿಸಲಾಗಿದೆ. ಖುದ್ದು ಜಿಲ್ಲಾಧಿಕಾರಿ, ಜಿಪಂ ಸಿಇಓ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಹಿರಿಯ ಅಧಿಕಾರಿಗಳು ಸಹ ವಿದ್ಯಾರ್ಥಿಗಳಂತೆ ಪಾಠ ಕೇಳಲು ಶಾಲೆ ಮತ್ತು ಕಾಲೇಜುಗಳಿಗೆ ತೆರಳಲಿದ್ದಾರೆ. ಈ ತಿಂಗಳಾಂತ್ಯದ ವೇಳೆಗೆ ಈ ಕೆಲಸ ಶುರುವಾಗಲಿದೆ ಎಂದು ಮಾಹಿತಿ ನೀಡಿದರು.
ವಿಜ್ಞಾನ ವಿಷಯದಲ್ಲಿ ಜಿಲ್ಲೆಯ ಫಲಿತಾಂಶ ಉತ್ತಮವಾಗಿದೆ. ಆದರೆ, ಕನ್ನಡ, ಹಿಂದಿ ಸೇರಿದಂತೆ ಸರಳ ವಿಷಯಗಳಲ್ಲೇ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದಾರೆ. ಒಂದೇ ವಿಷಯದಲ್ಲಿ ಅನೇಕ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದರಿಂದ ಇದನ್ನು ಸುಧಾರಣೆ ಮಾಡಿದರೆ ಜಿಲ್ಲೆಗೆ ಉತ್ತಮ ಫಲಿತಾಂಶ ಸಿಗಲಿದೆ. ಈ ನಿಟ್ಟಿನಲ್ಲಿ ಸಾಶಿಇ ಮತ್ತು ಪಪೂಶಿ ಇಲಾಖೆ ಉಪ ನಿರ್ದೇಶಕರು, ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗಮನ ಹರಿಸಬೇಕು ಎಂದರು.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮಹಾವೀರ ಮ.ಕರಣ್ಣನವರ್, ಹೆಚ್ಚುವರಿ ರಕ್ಷಣಾಧಿಕಾರಿ ಜಿ.ಮಂಜುನಾಥ, ಜಿಪಂ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ, ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಅವಿನಾಶ, ವಿವಿಧ ಸಂಘ ಸಂಸ್ಥೆಗಳ ರೂಪ್ಲಾ ನಾಯ್ಕ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.