ದೇಶ, ರಾಜ್ಯ ಒಡೆಯುವ ಬಿಜೆಪಿ ದೂರವಿಡಿ: ಸಿಎಂ ಸಿದ್ದರಾಮಯ್ಯ

| Published : Oct 14 2024, 01:16 AM IST

ಸಾರಾಂಶ

ದೇವರು, ಧರ್ಮದ ಹೆಸರಲ್ಲಿ ದೇಶ, ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡು ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ದೇವರು, ಧರ್ಮದ ಹೆಸರಲ್ಲಿ ದೇಶ, ರಾಜ್ಯವನ್ನು ಒಡೆಯುವ ಬಿಜೆಪಿಯನ್ನು ಮೊದಲು ದೂರ ಇಡಿ. ಇಲ್ಲದಿದ್ದರೆ ನಮ್ಮ ನಾಡು ಉಳಿಯಲ್ಲ, ದೇಶವೂ ಉಳಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.

ಸವದತ್ತಿ ರೇಣುಕಾ ಯಲ್ಲಮ್ಮನ ಗುಡ್ಡದಲ್ಲಿ ಭಾನುವಾರ ಮಹಿಳಾ ಅಭಿವೃದ್ಧಿ ನಿಗಮದಿಂದ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ದೇವರು, ಧರ್ಮ ತಮಗೆ ಮಾತ್ರ ಸೇರಿದ್ದು ಎಂದು ಬಿಜೆಪಿಯವರು ಭಯಾನಕವಾಗಿ ಮಾತನಾಡುತ್ತಾರೆ. ಆದರೆ, ಇದುವರೆಗೂ ದೇವಿಯ ಭಕ್ತರಿಗೆ ನಾವು ಮಾಡಿದಂಥ ಕಾರ್ಯಕ್ರಮವನ್ನು ಬಿಜೆಪಿಯವರು ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ತಾಯಿ ಯಲ್ಲಮ್ಮ ಶಕ್ತಿ ದೇವತೆ. ಯಾವ ದೇವರೂ ಕೂಡ ಮನುಷ್ಯರನ್ನು ಧರ್ಮದ ಕಾರಣಕ್ಕೆ ದ್ವೇಷಿಸಿ ಎಂದು ಹೇಳುವುದಿಲ್ಲ. ದೇವರ ಹೆಸರಲ್ಲಿ ದ್ವೇಷ ಹೇಳುವುದು ಬಿಜೆಪಿ ಮಾತ್ರ. ತಾಯಿ ರೇಣುಕಾ ಯಲ್ಲಮ್ಮ ದೇವರು, ಧರ್ಮದ ಹೆಸರಲ್ಲಿ ಮನುಷ್ಯರನ್ನು ದ್ವೇಷಿಸಿ ಎಂದು ಎಲ್ಲೂ ಹೇಳಿಲ್ಲ ಎಂದು ಕಿಡಿಕಾರಿದರು.

ಗೃಹಲಕ್ಷ್ಮಿ ಯೋಜನೆ ಜಾರಿಯಾದರೆ ಅತ್ತೆ ಸೊಸೆ ಜಗಳ ಆಗುತ್ತದೆ ಎಂದು ಬಿಜೆಪಿಯವರು ಬೊಬ್ಬೆ ಹೊಡೆದರು. ಆದರೆ, ಗೃಹಲಕ್ಷ್ಮಿ ಹಣವನ್ನು ಕೂಡಿಸಿಟ್ಟು ಅತ್ತೆಯರು ಸೊಸೆಯರಿಗೆ ಬಳೆ, ಅಂಗಡಿ ಹಾಕಿಕೊಟ್ಟಿದ್ದಾರೆ. ಟೈಲರಿಂಗ್ ಮೆಷಿನ್ ಕೊಡಿಸಿದ್ದಾರೆ. ಇಂಥ ನೂರಾರು ಉದಾಹರಣೆಗಳಿವೆ ಎಂದು ಸಮರ್ಥಿಸಿಕೊಂಡರು.

ತಾಯಿ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ ನಾವು ರೆಡಿ. ನಿಮ್ಮ ಸಹಕಾರ ಅಗತ್ಯ. ಕ್ಷೇತ್ರದಲ್ಲಿ ಅನಧಿಕೃತವಾಗಿ ಮಳಿಗೆ ಹಾಕಬೇಡಿ. ಅನಧಿಕೃತವಾಗಿ ಇರುವವರಿಗೆ ಬೇರೆ ವ್ಯವಸ್ಥೆ ಮಾಡೋಣ. ಆದರೆ, ಅಕ್ರಮವಾಗಿ ಯಾರೂ ಮಳಿಗೆ ಹಾಕದೆ ಸಹಕರಿಸಿ ಎಂದು ಮನವಿ ಮಾಡಿದರು.

ಮುಂದಿನ ವರ್ಷದ ವೇಳೆಗೆ 6 ಸಾವಿರ ಭಕ್ತರು ಉಳಿಯಲು ರೇಣುಕಾ ಯಲ್ಲಮ್ಮ ಸನ್ನಿಧಿಯಲ್ಲಿ ವ್ಯವಸ್ಥೆ ಮಾಡುತ್ತೇವೆ. ಶಕ್ತಿ ಯೋಜನೆಯಿಂದಾಗಿ ಇದುವರೆಗೂ ರಾಜ್ಯದಲ್ಲಿ ಮಹಿಳೆಯರು 300 ಕೋಟಿ ಉಚಿತ ಟ್ರಿಪ್ ಮಾಡಿದ್ದಾರೆ. ಇವರಲ್ಲಿ ಲಕ್ಷಾಂತರ ಮಂದಿ ತಾಯಿ ರೇಣುಕಾ ಯಲ್ಲಮ್ಮನ ದರ್ಶನ ಕೂಡ ಪಡೆದಿದ್ದಾರೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ವಿಶ್ವಾಸ್ ವೈದ್ಯ ವಹಿಸಿದ್ದರು.