ಬೈರನ್ ನಾಲೆ ಮತ್ತು ವೈದ್ಯನಾಥಪುರ ನಾಲೆಗಳ ಆಧುನಿಕರಣಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ 15 ದಿನಗಳಿಗೊಮ್ಮೆ ನಾಲೆಗಳಲ್ಲಿ ನೀರು ಹರಿಸಿ ಬೇಸಾಯಕ್ಕೆ ಅನುಕೂಲ ಕಲ್ಪಿಸಲಾಗುವುದು.

ಕನ್ನಡಪ್ರಭ ವಾರ್ತೆ ಮದ್ದೂರು

ಕೆಮ್ಮಣ್ಣುನಾಲೆ ಅಭಿವೃದ್ಧಿ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಮುಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ನೀರು ಹರಿಸಲು ಅಗತ್ಯ ಕ್ರಮವಹಿಸಿರುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲೂಕಿನ ವಳಗೆರೆಹಳ್ಳಿ, ಸೊಳ್ಳೆಪುರ, ಚಾಪುರದೊಡ್ಡಿ, ದೇಶಹಳ್ಳಿ ಹಾಗೂ ಚಾಮನಹಳ್ಳಿ ಗ್ರಾಮಗಳಲ್ಲಿ ಮೂರು ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ನೆರೆಯ ರಾಜ್ಯಗಳಲ್ಲಿ ಚುನಾವಣೆಗಳಿಂದಾಗಿ ಕಾರ್ಮಿಕರ ಸಮಸ್ಯೆಯಿಂದ ನಾಲೆ ಅಭಿವೃದ್ಧಿ ಕಾಮಗಾರಿ ವಿಳಂಬವಾಗಿತ್ತು ಎಂದರು.ಎಂದಿನಂತೆ ಕಾರ್ಮಿಕರು ನಾಲೆ ಅಭಿವೃದ್ಧಿ ಕಾಮಗಾರಿಯಲ್ಲಿ ತೊಡಗಿರುವುದರಿಂದ ಮುಂದಿನ ಒಂದು ತಿಂಗಳೊಳಗೆ ಸಂಪೂರ್ಣವಾಗಿ ಕಾಮಗಾರಿ ಪೂರ್ಣಗೊಂಡು ರೈತರ ಕೊನೆ ಭಾಗದ ಜಮೀನುಗಳಿಗೆ ನೀರು ಸರಾಗವಾಗಿ ಹರಿಯಲು ಅಧಿಕಾರಿಗಳೊಂದಿಗೆ ಬೇಸಾಯಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಬೈರನ್ ನಾಲೆ ಮತ್ತು ವೈದ್ಯನಾಥಪುರ ನಾಲೆಗಳ ಆಧುನಿಕರಣಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ 15 ದಿನಗಳಿಗೊಮ್ಮೆ ನಾಲೆಗಳಲ್ಲಿ ನೀರು ಹರಿಸಿ ಬೇಸಾಯಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದರು.

ತಾವು ಶಾಸಕರಾದ ಬಳಿಕ ಪ್ರತಿ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಸ್ಥಳೀಯ ಗ್ರಾಮಸ್ಥರು ಅಹವಾಲು ಸಲ್ಲಿಸಿದ್ದು, ಈ ಸಂಬಂಧ ಇಲಾಖಾವಾವರು ಪಟ್ಟಿ ತಯಾರಿಸಿ ತುರ್ತು ಕಾಮಗಾರಿ ಕೈಗೊಂಡು ರಸ್ತೆ, ಚರಂಡಿ, ಕುಡಿಯುವ ನೀರು ಇನ್ನಿತರ ಸೌಲಭ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ನನ್ನ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟು ಅತಿ ಹೆಚ್ಚಿನ ಮತಗಳಿಂದ ತಮ್ಮನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದೀರಿ. ನಿಮಗೆ ಚ್ಯುತಿ ಬಾರದಂತೆ ಶ್ರದ್ಧೆ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಗ್ರಾಮಾಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುತ್ತೇನೆ. ಇದೇ ರೀತಿ ಮುಂದೆಯೂ ನನಗೆ ಸಹಕಾರ ನೀಡುವಂತೆ ಕೋರಿದರು.

ಈ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ.ಸಂದರ್ಶ, ಎಂ.ಕೆ.ಹರೀಶ್ ಬಾಬು, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಮಮತಾ ಶಂಕರೆಗೌಡ, ಸೊಳ್ಳೆಪುರ ಎಂಪಿಸಿಎಸ್ ಅಧ್ಯಕ್ಷ ಪ್ರಕಾಶ್ ಗೌಡ‌, ಗ್ರಾಪಂ ಮಾಜಿ ಸದಸ್ಯರಾದ ವಿ.ಜೆ.ಸುನೀಲ್ ಕುಮಾರ್, ವಿ.ಆರ್. ಸುನಿಲ್ ಕುಮಾರ್, ವಿಎಸ್ಎಸ್ ಬಿಎನ್‌ ಮಾಜಿ ಅಧ್ಯಕ್ಷ ಪುಟ್ಟರಾಮು, ತಾಪಂ ಮಾಜಿ ಸದಸ್ಯ ಮರಿಯಪ್ಪ, ಸ್ಥಳೀಯ ಮುಖಂಡರಾದ ವೆಂಕಟೇಶ್, ಉಮೇಶ್‌, ಜಗದೀಶ್, ಲೋಕೇಶ್, ವೆಂಕಟೇಶ್, ಕೃಷ್ಣಪ್ಪ ಇತರರಿದ್ದರು.