ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ ಆಗಿದ್ದು, 60 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಆಗಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದ್ದು, ಗ್ರಾಮೀಣ ಭಾಗದ ಜನ ಗುಳೆ ಹೋಗದಂತೆ ತಡೆಯಲು ವಿಬಿಜಿ ರಾಮ್‌ ಜಿ ಯೋಜನೆಯಡಿ ಪ್ರತೀ ತಿಂಗಳು 1.25 ಕೋಟಿ ಮಾನವ ದಿನದ ಉದ್ಯೋಗ ಸೃಷ್ಟಿ ಗುರಿ ಹೊಂದಲಾಗಿದೆ

 ಬೆಂಗಳೂರು : ರಾಜ್ಯದ 178 ತಾಲೂಕುಗಳಲ್ಲಿ ಮಳೆ ಕೊರತೆ ಆಗಿದ್ದು, 60 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಆಗಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದ್ದು, ಗ್ರಾಮೀಣ ಭಾಗದ ಜನ ಗುಳೆ ಹೋಗದಂತೆ ತಡೆಯಲು ವಿಬಿಜಿ ರಾಮ್‌ ಜಿ ಯೋಜನೆಯಡಿ ಪ್ರತೀ ತಿಂಗಳು 1.25 ಕೋಟಿ ಮಾನವ ದಿನದ ಉದ್ಯೋಗ ಸೃಷ್ಟಿ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

 90:10 ಅನುಪಾತ ಬದಲಿಸಿ 60:40 ಅನುಪಾತ

ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ಮಳೆ ಕೊರತೆ, ಬರ ಪರಿಸ್ಥಿತಿ ಕುರಿತ ಪ್ರಶ್ನೆಗೆ, ಕೇಂದ್ರ ಸರ್ಕಾರ ಮನನರೇಗಾದಡಿ ನೀಡುತ್ತಿದ್ದ 90:10 ಅನುಪಾತ ಬದಲಿಸಿ 60:40 ಅನುಪಾತ ಮಾಡಿದ್ದು, ರಾಜ್ಯದ ಮೇಲೆ ಹೊರೆಯಾಗಿದ್ದರೂ ಬಡವರ, ಗ್ರಾಮೀಣರ, ದಲಿತರ, ವಂಚಿತರ ಹಿತದೃಷ್ಟಿಯಿಂದ ಜುಲೈ 1ರಿಂದ ಯೋಜನೆ ಜಾರಿಗೆ ತರಲಾಗಿದೆ. ನಿನ್ನೆಯವರೆಗೆ 5 ಲಕ್ಷ ಮಾನವದಿನ ಉದ್ಯೋಗ ಸೃಷ್ಟಿಸಲಾಗಿದೆ. ಈ ತಿಂಗಳಾಂತ್ಯದೊಳಗೆ ವಿಬಿಜಿ ರಾಮ್ ಜಿ ಅಡಿ 10 ಲಕ್ಷ ಮಾನವ ದಿನ ಸೃಜಿಸಲಾಗುವುದು. ಆದರೆ ಪ್ರತಿ ತಿಂಗಳೂ 1.25 ಕೋಟಿ ಮಾನವ ದಿನ ಉದ್ಯೋಗ ಸೃಷ್ಟಿ ಗುರಿಯಿದ್ದು, ಮೊದಲ ತ್ರೈಮಾಸಿಕದಲ್ಲಿ 2900 ಕೋಟಿ ರು. ಬಿಡುಗಡೆ ಆಗಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಚೀಟಿ (ಜಾಬ್ ಕಾರ್ಡ್) ಹೊಂದಿರುವ ಪ್ರತಿಯೊಬ್ಬರಿಗೂ 125 ದಿನ ಉದ್ಯೋಗ ದೊರಕಲಿದೆ ಎಂದು ತಿಳಿಸಿದರು.

ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮ

ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮ ವಹಿಸಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಕೊರತೆ ಆಗಬಾರದು ಎಂದು ₹117 ಕೋಟಿ ಮುಂಗಡವಾಗಿ ಬಿಡುಗಡೆ ಮಾಡಿದ್ದೇವೆ. ₹95 ಕೋಟಿ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಇನ್ನೂ ₹25 ಕೋಟಿ ವಿವಿಧ ಜಿಲ್ಲೆಗಳಲ್ಲಿ ಇದೆ ಎಂದು ಸ್ಪಷ್ಟಪಡಿಸಿದರು.