ಕನ್ನಡಪ್ರಭ ವಾರ್ತೆ ವಿಜಯಪುರ

ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕರಿಗೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಡೆ ಖಂಡನಾರ್ಹ. ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಓಲೈಸಲು ಈ ರೀತಿ ಒಬ್ಬ ದೇಶದ ಹೆಮ್ಮೆಯ ಪ್ರಧಾನಿಯನ್ನೇ ಅವಮಾನಿಸಿ ಕೀಳುಮಟ್ಟದ ಪದ ಪ್ರಯೋಗಿಸಿರುವುದು ಖರ್ಗೆ ಅವರ ಹಿರಿತನಕ್ಕೆ ಶೋಭೆ ತರುವಂತಹದಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರೀಯ ಪಕ್ಷದ ಅಧ್ಯಕ್ಷರು. ಒಂದು ಜವಾಬ್ದಾರಿಯುತ ಸ್ಥಾನದಲ್ಲಿರುವವರು ದೇಶದ ಪ್ರಧಾನಿಯ ಬಗ್ಗೆ ಈ ರೀತಿ ಹೇಳಿಕೆ ನೀಡಿರುವುದು ಬಿಜೆಪಿ ಅಷ್ಟೇ ಅಲ್ಲದೇ ಇಡೀ ಭಾರತೀಯರಿಗೆ ನೋವು ತರಿಸಿದೆ. ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ, ಭಯೋತ್ಪಾದಕರನ್ನು ದಮನಗೊಳಿಸಲು ದಿಟ್ಟ ಹೆಜ್ಜೆ ಇರಿಸುವ ಪ್ರಧಾನಿಯ ಬಗ್ಗೆಯೇ ಈ ರೀತಿ ಅಗೌರವ ತರುವ ಹೇಳಿಕೆ ನೀಡುವುದು ಯಾವ ಉದ್ದೇಶಕ್ಕಾಗಿ ಎಂದು ಅವರು ಪ್ರಶ್ನಿಸಿದ್ದಾರೆ.