ಸಾರಾಂಶ
ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತ ಕಿಸಾನ್ ಸಭಾದ ಕಾರ್ಯಕರ್ತರು ತಾಲೂಕಿನ ಅರಸೀಕೆರೆ ನಾಡ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ರೈತ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ಗೆ ಆಕ್ರೋಶ । ಅರಸೀಕೆರೆ ಹೋಬಳಿಯ ಉಪ ತಹಸೀಲ್ದಾರ್ಗೆ ಮನವಿ
ಕನ್ನಡಪ್ರಭ ವಾರ್ತೆ ಹರಪನಹಳ್ಳಿದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತ ಕಿಸಾನ್ ಸಭಾದ ಕಾರ್ಯಕರ್ತರು ತಾಲೂಕಿನ ಅರಸೀಕೆರೆ ನಾಡ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡ ಗುಡಿಹಳ್ಳಿ ಹಾಲೇಶ್, ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ರೈತರ ಭೂಮಿಯನ್ನು ಕೈಗಾರಿಕೆಗಾಗಿ ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ರೈತರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಭೂಮಿ ಬಿಟ್ಟು ಕೊಡುವುದಿಲ್ಲ ಎಂದು ಪಟ್ಟು ಹಿಡಿದ ಕಾರಣ ರೈತ ಹೋರಾಟಗಾರರ ಮೇಲೆ ಸರ್ಕಾರ ಲಾಠಿ ಚಾರ್ಜ್ ಮಾಡಿ ಬಂಧಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.ರೈತ ಮುಖಂಡ ಮಲ್ಲನಗೌಡ ಮಾತನಾಡಿ, ದೇವನಹಳ್ಳಿ, ಸುತ್ತಮುತ್ತ ಇರುವ ರೈತರ ಜಮೀನನ್ನು ಅಕ್ರಮವಾಗಿ ಸರ್ಕಾರ ವಶಪಡಿಸಿಕೊಳ್ಳಲು ಮುಂದಾಗಿರುವುದು ಖಂಡನೀಯ. ಸಿದ್ದರಾಮಯ್ಯ ಸರ್ಕಾರ ಕೂಡಲೇ ಈ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅರಸೀಕೆರೆ ಹೋಬಳಿಯ ಉಪ ತಹಸೀಲ್ದಾರ್ ಹನುಮಕ್ಕ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.ರೈತ ಸಂಘಟನೆಯ ತಾಲೂಕು ಅಧ್ಯಕ್ಷ ಅರಸೀಕೆರೆ ಎಚ್. ಹಾಲಪ್ಪ, ಎ.ಬಿ. ನಾಗರಾಜ್ಗೌಡ, ಯರಬಳ್ಳಿ ಅಭಿಷೇಕ್, ಎನ್. ಮಲ್ಲೇಶಪ್ಪ ಇದ್ದರು.