ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾ ತಾಲೂಕು ಗೃಹ ನಿರ್ಮಾಣ ಕಾರ್ಮಿಕರ ಸಂಘದ ವತಿಯಿಂದ ಮಾ. ೨೫ರ ಮಂಗಳವಾರ ಬೆಳಿಗ್ಗೆ ೧೧ ಗಂಟೆ ಸಮಯಕ್ಕೆ ನಗರದ ಲಕ್ಷ್ಮೀ ಬಡಾವಣೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಗೃಹ ನಿರ್ಮಾಣ ಕಾರ್ಮಿಕರ ಸಂಘದ ಕಚೇರಿ ಆವರಣದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಟೂಲ್ ಕಿಟ್ಸ್ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶಿರಾ ತಾಲೂಕು ಗೃಹ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಮುಬಾರಕ್ ಪಾಷ ತಿಳಿಸಿದರು. ನಗರದ ಗೃಹ ನಿರ್ಮಾಣ ಕಾರ್ಮಿಕರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಕಾರ್ಯಕ್ರಮವನ್ನುಶಾಸಕ ಟಿ.ಬಿ.ಜಯಚಂದ್ರ ಉದ್ಘಾಟಿಸುವರು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕಾರ್ಮಿಕರ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿರಾ ತಾಲೂಕಿನ ಕಾರ್ಮಿಕರನ್ನು ಸಂಪರ್ಕಿಸಿ ಸೌಲಭ್ಯ ಕೊಡಿಸುವುದಾಗಿ ಹಣ ಕೇಳಿದರೆ ಕೊಡಬೇಡಿ ಎಂದು ತಿಳಿಸಿದರು. ಶಿರಾ ತಾಲೂಕು ಗೃಹ ನಿರ್ಮಾಣ ಕಾರ್ಮಿಕರ ಸಂಘದ ಉಪಾಧ್ಯಕ್ಷ ನರಸಿಂಹಯ್ಯ ಮಾತನಾಡಿ ತಾಲೂಕಿನಲ್ಲಿ ಪ್ರಸ್ತುತ ೧೧ ಸಾವಿರ ಮಂದಿ ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರಿದ್ದು, ಅವರ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಪ್ರಸ್ತುತ ಕಾರ್ಮಿಕರಿಗೆ ಸರಕಾರದ ವತಿಯಿಂದ ಟೂಲ್ ಕಿಟ್ ನೀಡುತ್ತಿದ್ದು, ಇದನ್ನು ಕಾರ್ಮಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಆರ್.ಕಂಬಣ್ಣ, ಸಂಘಟನಾ ಕಾರ್ಯದರ್ಶಿ ಕೋಟೆ ಸಿದ್ದಪ್ಪ, ಕೊಟ್ಟ ರಾಜಣ್ಣ ಸೇರಿದಂತೆ ಹಲವರು ಹಾಜರಿದ್ದರು.