ಸಾರಾಂಶ
ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಪೂರಕ ವಾತಾವರಣ ಹಾಗೂ ನುರಿತ ಶಿಕ್ಷಕರಿದ್ದು, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಆದರ್ಶ ವಿದ್ಯಾರ್ಥಿಗಳಾಗಬೇಕು
ಕನ್ನಡಪ್ರಭ ವಾರ್ತೆ ರಾವಂದೂರು
ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತಲೂ ಉತ್ತಮ ಗುಣಾತ್ಮಕ ಶಿಕ್ಷಣ ದೊರೆಯುತ್ತದೆ ಎಂದು ತಾಲೂಕು ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಹೇಳಿದರು.ಪಿರಿಯಾಪಟ್ಟಣ ತಾಲೂಕು ಕಿತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ ಕೆಎಂಎಫ್ ಹಾಗೂ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ನೀಡಲಾದ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಮಾಲ್ಟ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಪೂರಕ ವಾತಾವರಣ ಹಾಗೂ ನುರಿತ ಶಿಕ್ಷಕರಿದ್ದು, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದನ್ನು ಸದುಪಯೋಗಪಡಿಸಿಕೊಂಡು ಉತ್ತಮ ಆದರ್ಶ ವಿದ್ಯಾರ್ಥಿಗಳಾಗಬೇಕು ಎಂದು ತಿಳಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಬಿಸಿ ಊಟ ಯೋಜನೆಯನ್ನು ಜಾರಿಗೆ ತಂದಿದ್ದು, ತದನಂತರ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರವು ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಎಲ್ಲ ಸಾಮಗ್ರಿಗಳನ್ನು ಉಚಿತವಾಗಿ ನೀಡುತ್ತಿದ್ದ ಇದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ತಿಳಿಸಿದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ. ಪ್ರಶಾಂತ್ ಮಾತನಾಡಿ, ಇಡೀ ದೇಶದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಮೂಲ ಉದ್ದೇಶವೇ ನಮ್ಮ ಮಕ್ಕಳ ಅಪೌಷ್ಟಿಕತೆಯನ್ನು ಹೋಗಲಾಡಿಸಿ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವುದಾಗಿದೆ ಎಂದರು.ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜ್, ಎಸ್.ಡಿಎಂಸಿ ಅಧ್ಯಕ್ಷ ಚೆಲುವರಾಜು, ಸಿಆರ್.ಪಿ ಮಲ್ಲಿಕಾರ್ಜುನ್ , ಮುಖ್ಯೋಪಾಧ್ಯಾಯ ರಾಜೇಂದ್ರ, ಶಿಕ್ಷಕರ ಸಂಘದ ನಿರ್ದೇಶಕ ಸೋಮಶೇಖರ್, ಗುರುಮೂರ್ತಿ ಇದ್ದರು.