ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 100 ಹಾಸಿಗೆಯ ಸೌಲಭ್ಯವಿದ್ದು, ಸರ್ಕಾರ ಸಾಕಷ್ಟು ಹಣ ಖರ್ಚು ಮಾಡಿ ಎಲ್ಲ ಪರಿಕರಗಳನ್ನು, ಸೌಲಭ್ಯಗಳನ್ನು ನೀಡಿದೆ. ಸಿಬ್ಬಂದಿಯು ಇದರ ಸದ್ಬಳಕೆ ಮಾಡಿಕೊಂಡು ಬಂದ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕು ಎಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷ ಅರುಣಕುಮಾರ ಪಾಟೀಲ ಹೇಳಿದರು .

ಕನ್ನಡಪ್ರಭ ವಾರ್ತೆ ಅಫಜಲಪುರ

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 100 ಹಾಸಿಗೆಯ ಸೌಲಭ್ಯವಿದ್ದು, ಸರ್ಕಾರ ಸಾಕಷ್ಟು ಹಣ ಖರ್ಚು ಮಾಡಿ ಎಲ್ಲ ಪರಿಕರಗಳನ್ನು, ಸೌಲಭ್ಯಗಳನ್ನು ನೀಡಿದೆ. ಸಿಬ್ಬಂದಿಯು ಇದರ ಸದ್ಬಳಕೆ ಮಾಡಿಕೊಂಡು ಬಂದ ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕು ಎಂದು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಅಧ್ಯಕ್ಷ ಅರುಣಕುಮಾರ ಪಾಟೀಲ ಹೇಳಿದರು .

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಬಳಿಕ ತಾಲೂಕು ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದರು. ಸಾರ್ವಜನಿಕ ಆಸ್ಪತ್ರೆ ಎಂದರೆ ಜನಸಾಮಾನ್ಯರ ನಂಬಿಕೆಯ ಕೇಂದ್ರ. ಆದ್ದರಿಂದ ಸ್ವಚ್ಛತೆ, ಗುಣಮಟ್ಟದ ಚಿಕಿತ್ಸೆ ಹಾಗೂ ರೋಗಿಗಳೊಂದಿಗೆ ಮಾನವೀಯ ಸ್ಪಂದನೆ ಈ ಮೂರು ವಿಷಯಗಳಲ್ಲಿ ಯಾವುದೇ ರಾಜಿ ಇಲ್ಲ. ಆಸ್ಪತ್ರೆಯ ಆವರಣ ಹಾಗೂ ಶೌಚಾಲಯಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಹಳೆಯ ಶೌಚಾಲಯಗಳನ್ನು ತಕ್ಷಣ ದುರಸ್ತಿಗೊಳಿಸುವುದರ ಜತೆಗೆ ಹೊಸದಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಯಾವುದೇ ವಿಳಂಬವಿಲ್ಲದೆ ರೋಗಿಗಳ ಬಳಕೆಗೆ ಹಸ್ತಾಂತರಿಸಬೇಕು. ರೋಗಿಗಳಿಗೆ ತೊಂದರೆ ಉಂಟಾಗದಂತೆ ವೈದ್ಯರು ಹಾಗೂ ಸಿಬ್ಬಂದಿ ತಕ್ಷಣ ಸ್ಪಂದಿಸಿ ಗುಣಮಟ್ಟದ ಚಿಕಿತ್ಸೆ ಮತ್ತು ಅಗತ್ಯ ಸೇವೆಗಳನ್ನು ಒದಗಿಸಬೇಕುದೆ ಎಂದು ವೈದ್ಯರಿಗೆ ತಾಕೀತು ಮಾಡಿದರು.

ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಂಜುನಾಥ ಅಂಜುಟಗಿ, ತಾಲೂಕು ಆರೋಗ್ಯಾಧಿಕಾರಿ ಡಾ. ಚೇತನ ಧಂಬಾಳೆ, ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಇದ್ದರು.