ಮಹಿಳೆಯರು ಕುಟುಂಬದ ಜವಾಬ್ದಾರಿಯೊಂದಿಗೆ ಆರೋಗ್ಯ, ಶಿಕ್ಷಣ ಹಾಗೂ ವೈಯಕ್ತಿಕ ಅಭಿವೃದ್ಧಿಗೂ ಆದ್ಯತೆ ನೀಡಬೇಕು.
ಕುಷ್ಟಗಿ: ಮಹಿಳೆಯರಲ್ಲಿ ಆತ್ಮವಿಶ್ವಾಸ ಬೆಳೆಸುವುದರ ಜತೆಗೆ ಅವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿ ಮಾಡುವಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಕೊಪ್ಪಳ ಜಿಲ್ಲಾ ನಿರ್ದೇಶಕ ವಿಠ್ಠಲ ಪೂಜಾರಿ ಹೇಳಿದರು.
ನಗರದ ಎನ್ಸಿಎಚ್ ಪ್ಯಾಲೇಸ್ನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು.ಮಹಿಳೆಯರು ಕುಟುಂಬದ ಜವಾಬ್ದಾರಿಯೊಂದಿಗೆ ಆರೋಗ್ಯ, ಶಿಕ್ಷಣ ಹಾಗೂ ವೈಯಕ್ತಿಕ ಅಭಿವೃದ್ಧಿಗೂ ಆದ್ಯತೆ ನೀಡಬೇಕು. ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ನೈತಿಕ ಮೌಲ್ಯ ಬೆಳೆಸುವಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದೆ ಎಂದ ಅವರು, ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಪೌಷ್ಟಿಕ ಆಹಾರ ಸೇವಿಸಬೇಕು. ಸಣ್ಣ ಉದ್ಯಮ ಆರಂಭಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಯೋಜನಾಧಿಕಾರಿ ನಿರಂಜನ ಮಾತನಾಡಿ, ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರಿಗೆ ಹೊಲಿಗೆ, ಹಸ್ತ ಕಲೆ ಹಾಗೂ ಸಣ್ಣ ಉದ್ಯಮಗಳ ಕುರಿತು ಉಚಿತ ತರಬೇತಿ ನೀಡಲಾಗುತ್ತಿದೆ. ಆರೋಗ್ಯ, ಪೌಷ್ಟಿಕ ಆಹಾರ ಹಾಗೂ ಕುಟುಂಬ ನಿರ್ವಹಣೆ ಕುರಿತು ಮಾರ್ಗದರ್ಶನ ನೀಡಲಾಗುತ್ತಿದೆ. ಸಂಕಷ್ಟದಲ್ಲಿರುವ ಮಹಿಳೆಯರಿಗೆ ವಾತ್ಸಲ್ಯ ಯೋಜನೆ ಹಾಗೂ ಕೌಟುಂಬಿಕ ಸಲಹಾ ಕೇಂದ್ರಗಳ ಮೂಲಕ ನೆರವು ನೀಡಲಾಗುತ್ತಿದೆ ಎಂದರು.ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಸರೋಜಿನಿ ವಿಜಯಕುಮಾರ್ ಮುರಡಿ ಮಾತನಾಡಿ, ಮನೆ ಮಗುವಿನ ಮೊದಲ ಶಾಲೆ, ತಾಯಿ ಮೊದಲ ಗುರು. ಮಕ್ಕಳ ಮೇಲೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳ ಪ್ರಭಾವ ಹೆಚ್ಚಾಗಿರುವುದರಿಂದ ತಾಯಂದಿರು ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ದೇವೇಂದ್ರಪ್ಪ ಬಳೂಟಗಿ, ಮೇಲ್ವಿಚಾರಕ ಅರುಣ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ರೂಪ, ಮೇಲ್ವಿಚಾರಕಿ ಮಂಜುಳಾ ಸೇರಿದಂತೆ ಒಕ್ಕೂಟದ ಪದಾಧಿಕಾರಿ, ಸೇವಾ ಪ್ರತಿನಿಧಿ ಹಾಗೂ ವಿವಿಧ ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರು ಭಾಗವಹಿಸಿದ್ದರು.