ಅಧಿಕಾರ, ಹಣಕ್ಕಿಂತ ವಿದ್ಯೆ ದೊಡ್ಡ ಸಂಪತ್ತು. ಮಕ್ಕಳು ಉತ್ತಮ ಶಿಕ್ಷಣ ಪಡೆದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪ್ರಯತ್ನಿಸಬೇಕು.

ತಾಲೂಕಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಸರ್ವ ಸದಸ್ಯರ ಸಭೆ

ಕನ್ನಡಪ್ರಭ ವಾರ್ತೆ ಶಿರಸಿ

ಅಧಿಕಾರ, ಹಣಕ್ಕಿಂತ ವಿದ್ಯೆ ದೊಡ್ಡ ಸಂಪತ್ತು. ಮಕ್ಕಳು ಉತ್ತಮ ಶಿಕ್ಷಣ ಪಡೆದು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಗರದ ಡಾ. ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಶಿರಸಿ ಜಿಲ್ಲಾ ಶಾಖೆಯಿಂದ ಹಮ್ಮಿಕೊಂಡ ತಾಲೂಕಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕ ಸರ್ವ ಸದಸ್ಯರ ಸಭೆ ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಕಾಂಗ್ರೆಸ್‌ ಸರ್ಕಾರವು ಸರ್ಕಾರಿ ನೌಕರರ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದು, ಶಿಕ್ಷಣ ಇಲಾಖೆಯಲ್ಲಿ ಅನೇಕ ಬದಲಾವಣೆ ಮಾಡಲಾಗಿದ್ದು, ಅದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಉನ್ನತ ಹುದ್ದೆ ಗಳಿಸಿ ದೇಶದ ಪ್ರಗತಿಗೆ ತಮ್ಮ ಸೇವೆ ನೀಡಬೇಕು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದು, ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿದ್ದೇವೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ ಪರಿಶ್ರಮದಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯ ಮಟ್ಟದಲ್ಲಿ ಅನೇಕ ಸ್ಥಾನ ಗಳಿಸಲು ಸಾಧ್ಯವಾಗಿದೆ. ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ನೌಕರರು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆಂದು ಶ್ಲಾಘಿಸಿದರು.

ಸರ್ಕಾರಿ ರಾಜ್ಯ ನೌಕರರ ಸಂಘದ ಶಿರಸಿ ಜಿಲ್ಲಾ ಶಾಖೆಯ ಅಧ್ಯಕ್ಷ ಹಾಗೂ ವಿಭಾಗೀಯ ಉಪಾಧ್ಯಕ್ಷ ಕಿರಣಕುಮಾರ ನಾಯ್ಕ ಪ್ರಾಸ್ತಾವಿಕ ಮಾತನಾಡಿ, ಶಾಸಕ ಭೀಮಣ್ಣ ನಾಯ್ಕ ಎಲ್ಲರೂ ಒಂದೇ ರೀತಿಯಲ್ಲಿ ಕಾಣುತ್ತಿದ್ದಾರೆ. ಶಿಕ್ಷಣ ಒಂದು ಜಾತಿಗೆ ಸೀಮಿತವಾಗಬಾರದು. ಎಲ್ಲರನ್ನು‌ ಪ್ರೀತಿಸುವ ಗುಣ ಶಾಸಕರಲ್ಲಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ ಗೌಡ, ವಾಣಿಜ್ಯ ತೆರಿಗೆ ಅಧಿಕಾರಿ ಭುವನೇಶ್ವರಿ ಪಾಟೀಲ, ಡಿಡಿಪಿಐ ಡಿ.ಆರ್‌. ನಾಯ್ಕ, ತಾಪಂ ಕಾರ್ಯನಿರ್ವಹಣಾಧಿಕಾರಿ ಚನ್ನಬಸಪ್ಪ ಹಾವಣಗಿ, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸತೀಶ ಹೆಗಡೆ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ ಮತ್ತಿತರರು ಇದ್ದರು.