ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ: ಆ.24ಕ್ಕೆ ವಿಚಾರಣೆ ಮುಂದೂಡಿಕೆ

| Published : Jul 24 2025, 01:45 AM IST

ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ: ಆ.24ಕ್ಕೆ ವಿಚಾರಣೆ ಮುಂದೂಡಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಜೋಶಿ ಸಮ್ಮುಖದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಜೋಶಿ ಸಮ್ಮುಖದಲ್ಲಿ ನಡೆಯಿತು.ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಆ.24ಕ್ಕೆ ನಿಗದಿಪಡಿಸಿತು. ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ನೇತೃತ್ವದಲ್ಲಿ ವಕೀಲರಾದ ಕಿರಣ್ ನಾರಾಯಣ್, ಸತ್ಯ ಸಭರ್ವಾಲ್, ಪಲ್ಲಕ್ ಬಿಷ್ಣೋಯ್, ಮಾಧಿಯಾ ನಯೀಮ್ ಹಾಗೂ ಅನನ್ಯ ದೀಕ್ಷಿತ್ ಉಪಸ್ಥಿತರಿದ್ದರು.ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಗೃಹ ಮಂತ್ರಾಲಯ, ಕೇಂದ್ರ ಕಾನೂನು ಮಂತ್ರಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2 ಮತ್ತು 3 ಎಂದು ಉಲ್ಲೇಖಿಸಲಾಗಿದೆ.ವಿಚಾರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಯು.ನಾಚಪ್ಪ, ಆ.24 ರಂದು ಡಾ.ಸುಬ್ರಮಣಿಯನ್ ಸ್ವಾಮಿ ಅವರು ನ್ಯಾಯಾಲಯದಲ್ಲಿ ಸಮಗ್ರ ವಾದ ಮಂಡನೆ ಮಾಡಲಿದ್ದಾರೆ. ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕಾನೂನು ಹೋರಾಟದಿಂದ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ನ್ಯಾಯ ಸಿಗಲಿದೆ ಎನ್ನುವ ವಿಶ್ವಾಸವಿದೆ ಎಂದರು.ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್‌ಟಿ ಟ್ಯಾಗ್ ಪಡೆಯುವ ಗುರಿ ಹೊಂದಿದ್ದೇವೆ. ಬೇಡಿಕೆ ತಾರ್ಕಿಕ ಅಂತ್ಯ ಕಾಣುವಲ್ಲಿಯ ವರೆಗೆ ಹೋರಾಟ ಮುಂದುವರಿಯಲಿದೆ. ಕಳೆದ 35 ವರ್ಷಗಳಿಂದ ಸಿಎನ್‌ಸಿ ಸಂಘಟನೆ ಕೊಡವರ ಸಾಂವಿಧಾನಿಕ ಹಕ್ಕುಗಳಿಗಾಗಿ ಶಾಂತಿಯುತ ಹೋರಾಟವನ್ನು ನಡೆಸಿಕೊಂಡು ಬರುತ್ತಿದೆ. ಕೊಡವರಿಗೆ ಕೊಡವ ಲ್ಯಾಂಡ್ ಬಿಟ್ಟರೆ ಬೇರೆ ಪ್ರದೇಶವಿಲ್ಲ, ಆದ್ದರಿಂದ ಕೊಡವ ಲ್ಯಾಂಡನ್ನು ಶಾಶ್ವತವಾಗಿ ಉಳಿಸಿಕೊಳ್ಳಲು ಕಾನೂನಿನ ನೆರವು ಕೋರಲಾಗಿದೆ ಎಂದು ತಿಳಿಸಿದರು.ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ, ಸ್ವ-ಆಡಳಿತ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು, ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ, ವಿಶ್ವ ರಾಷ್ಟ್ರಸಂಸ್ಥೆಯ ಸ್ಥಳೀಯ ಮಾನ್ಯತೆ, ಭಾರತದ ಸಂವಿಧಾನದ ಪರಿಶಿಷ್ಟ ಪಟ್ಟಿಯ ಅಡಿಯಲ್ಲಿ ಸ್ಥಳೀಯ ಆದಿಮಸಂಜಾತ ಕೊಡವ ಏಕ-ಜನಾಂಗೀಯ ಅನಿಮಿಸ್ಟಿಕ್ ಕೊಡವರ ವರ್ಗೀಕರಣ ಇವುಗಳು ಸಿಎನ್‌ಸಿಯ ಪ್ರಮುಖ ಬೇಡಿಕೆಗಳು ಎಂದರು.ವಿಎಚ್‌ಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ, ರೇಖಾ ನಾಚಪ್ಪ, ಕಲಿಯಂಡ ಪ್ರಕಾಶ್, ಅರೆಯಡ ಗಿರೀಶ್, ನಂದೇಟಿರ ರವಿ, ಕಾಟುಮಣಿಯಂಡ ಉಮೇಶ್, ಕಾಂಡೇರ ಸುರೇಶ್, ಬೇಪಡಿಯಂಡ ದಿನು, ಬೇಪಡಿಯಂಡ ಬಿದ್ದಪ್ಪ, ಕಿರಿಯಮಾಡ ಶೆರಿನ್, ಅವರೇಮಾದಂಡ ಚಂಗಪ್ಪ, ವಿಎಚ್‌ಎಸ್ ರಾಜ್ಯಾಧ್ಯಕ್ಷ ನಿಕುಂಜ್ ಶಾ, ವಕೀಲರಾದ ಎ.ಕೆ.ವಸಂತ್, ಉಮೇಶ್, ಪ್ರಮುಖರಾದ ಗುರುದತ್ ಶೆಟ್ಟಿ, ನಟರಾಜ್, ರವಿಶಂಕರ್, ಕಾವಡಿಚಂಡ ಮೇದಪ್ಪ, ಶಿವು, ಮಹೇಶ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.