ಸಾರಾಂಶ
ಶಾಲಾ ಮಕ್ಕಳು ಮಣ್ಣಿನಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿಸಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಕೊಡ್ಲಿಪೇಟೆ
ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ಜನರು ಪಿಓಪಿ ಗಣೇಶ ಮೂರ್ತಿ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ, ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕೊಡ್ಲಿಪೇಟೆ ಪ್ರೌಢಶಾಲಾ ಮುಖ್ಯ ಶಿಕ್ಷಕ ಅಬ್ದುಲ್ ಹೇಳಿದರು.ನಮ್ಮ ನಡೆ ಹಸಿರೆಡೆಗೆ ಅಭಿಯಾನದಡಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಅಂಗವಾಗಿ ಕೊಡ್ಲಿಪೇಟೆ ಪ್ರೌಢಶಾಲೆಯಲ್ಲಿ ಸೋಮವಾರ ಏರ್ಪಡಿಸಿದ್ದ ಪರಿಸರ ಜನಜಾಗೃತಿ ಆಂದೋಲನದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ಕುರಿತು ಮಾಹಿತಿ ನೀಡಿದರು.
ಹೇಮಾವತಿ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಎಂ.ಪಿ.ಶಿವಕುಮಾರಿ ಮಾತನಾಡಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ನದಿ, ಕೆರೆ ಮತ್ತಿತರ ಜಲಮೂಲಗಳಿಗೆ ವಿಸರ್ಜಿಸುವುದರಿಂದ ಜಲಚರಗಳು ಸೇರಿದಂತೆ ಜಲ ಮಾಲಿನ್ಯ ಉಂಟಾಗುವುದನ್ನು ತಡೆಗಟ್ಟುವ ದಿಸೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಲು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು. ವಿದ್ಯಾರ್ಥಿಗಳು ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.ಶಾಲಾ ಮಕ್ಕಳು ಮಣ್ಣಿನಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು.
ಈ ಸಂದರ್ಭ ಶಿಕ್ಷಕರಾದ ಕೆ.ಎನ್.ಕಿರಣ್ ಕುಮಾರ್, ನಂದಿತಾ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಕೊಡ್ಲಿಪೇಟೆ ಪ್ರೌಢಶಾಲೆಯಲ್ಲಿ ಸೋಮವಾರ ಪರಿಸರ ಸ್ನೇಹಿ ಗಣೇಶೋತ್ಸವದಲ್ಲಿ ವಿದ್ಯಾರ್ಥಿಗಳು ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಪ್ರದರ್ಶಿಸಿದರು.