ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಿರಿಯಾಪಟ್ಟಣ ತಾಲೂಕು ಕೊಪ್ಪ ವಲಯ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು.
ಕುಶಾಲನಗರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಿರಿಯಾಪಟ್ಟಣ ತಾಲೂಕು ಕೊಪ್ಪ ವಲಯ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು. ಕೊಪ್ಪ ಮಿಲಿಂದ ವಿದ್ಯಾ ಸಂಸ್ಥೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಗಳನ್ನು ನೆಡಲಾಯಿತು. ನಂತರ ನಡೆದ ಸರಳ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯರಾದ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಮಕ್ಕಳು ಶಿಕ್ಷಣದ ನಡುವೆ ಪರಿಸರ ಜ್ಞಾನ ಮೈಗೂಡಿಸಿಕೊಳ್ಳಬೇಕು ಎಂದರು.
ಪ್ರತಿಯೊಬ್ಬರು ಗಿಡ ನೆಟ್ಟು ಬೆಳೆಸುವ ಮೂಲಕ ಉತ್ತಮ, ಸ್ವಚ್ಛ ಪರಿಸರ ನಿರ್ಮಾಣದಲ್ಲಿ ಕೈಜೋಡಿಸಬೇಕು ಎಂದರು. ಜನಜಾಗೃತಿ ವೇದಿಕೆ ಸದಸ್ಯರಾದ ಎನ್. ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡೀಡ್ ಸಂಸ್ಥೆಯ ಶ್ರೀಕಾಂತ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪರಿಸರ ಜಾಗೃತಿ ಬಗ್ಗೆ ಅರಿವು ಮೂಡಿಸಿದರು. ಕೊಪ್ಪ ಗ್ರಾಪಂ ಮಾಜಿ ಅಧ್ಯಕ್ಷೆ ಗೀತಾ, ಶಾಲೆ ಮುಖ್ಯೋಪಾಧ್ಯಾಯರಾದ ಝಾನ್ಸಿ, ಸಹ ಶಿಕ್ಷಕಿ ಕವಿತಾ ಯೋಜನೆಯ ಕೊಪ್ಪ ವಲಯದ ಮೇಲ್ವಿಚಾರಕರಾದ ಪ್ರೇಮ ಮತ್ತು ಸೇವಾ ಪ್ರತಿನಿಧಿ ಪ್ರೇಮಾ ಅವರು ಇದ್ದರು.