ಜಾನಪದ ಹಾಡುಗಳನ್ನು ಹಾಡಿ ವಿದ್ಯಾರ್ಥಿಗಳನ್ನು ರಂಜಿಸಿದರು

ಕೊಪ್ಪಳ: ಸಾಹಿತ್ಯ ಕ್ಷೇತ್ರದಲ್ಲಿ ಕೊಪ್ಪಳ ರಾಜ್ಯಕ್ಕೆ ಮಾದರಿಯಾಗಿದೆ. ಸಾಹಿತ್ಯ ಸಿದ್ಧ ವಸ್ತು ಅಲ್ಲ. ಸತತ ಅಧ್ಯಯನದ ಮೂಲಕ, ಸಾಹಿತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಕನ್ನಡ ನಾಡು-ನುಡಿ, ಸಂಸ್ಕೃತಿ ಹಾಗೂ ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಸಾಹಿತಿ ರಮೇಶ ಬನ್ನಿಕೊಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾ ಭವನದಲ್ಲಿ ಶುಕ್ರವಾರ ಐಚ್ಚಿಕ ಕನ್ನಡ ವಿಭಾಗದ ವಿದ್ಯಾರ್ಥಿಗಳ ತಿರುಳ್ಗನ್ನಡ ಕನ್ನಡ ಸಂಘ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಂತಾರಾಷ್ಟ್ರೀಯ ಜಾನಪದ ಹಾಡುಗಾರ ಹಾಗೂ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮೆಹಬೂಬ ಕಿಲ್ಲೇದಾರ ಸಾಂದರ್ಭಿಕವಾಗಿ ಮಾತನಾಡಿದರು. ಬಳಿಕ ಜಾನಪದ ಹಾಡುಗಳನ್ನು ಹಾಡಿ ವಿದ್ಯಾರ್ಥಿಗಳನ್ನು ರಂಜಿಸಿದರು. ಇದೇ ಸಂದರ್ಭದಲ್ಲಿ ನೂತನವಾಗಿ ರಚಿಸಲಾದ ತಿರುಳ್ಗನ್ನಡ ಕನ್ನಡ ಸಂಘದ ಪದಾಧಿಕಾರಿಗಳಿಗೆ ಕನ್ನಡ ವಿಭಾಗದ ಮುಖ್ಯಸ್ಥ ಯಮನೂರಪ್ಪ ಟಿ. ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾಧ್ಯಾಪಕ ಬಸವರಾಜ್ ಡಿ. ಪ್ರಾಸ್ತವಿಕವಾಗಿ ಮಾತನಾಡಿದರು.

ಪ್ರಾಂಶುಪಾಲ ವೈ.ಬಿ. ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಉಪನ್ಯಾಸಕ ಡಾ. ವಿಪ್ಲವಿ, ಡಾ. ಮಂಜುಳಾ ಬಿ.ಆರ್., ಡಾ. ಷಣ್ಮುಖಪ್ಪ ಬೋದುರ, ಹನುಮಪ್ಪ ಶಲೋಡಿ ಸೇರಿದಂತೆ ಎಲ್ಲ ವಿಭಾಗಗಳ ಪ್ರಾಧ್ಯಾಪಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಉಪನ್ಯಾಸಕ ಡಾ. ತುಕಾರಾಮ್ ನಾಯ್ಕ ಸ್ವಾಗತಿಸಿದರು, ಡಾ ಸಿ.ಬಿ. ಹನುಮಂತಪ್ಪ ಅತಿಥಿಗಳನ್ನು ಪರಿಚಯಿಸಿದರು. ಡಾ. ಮಹಾಂತೇಶ ನೆಲಾಗಣಿ ನಿರೂಪಿಸಿದರು. ಡಾ. ಪ್ರಕಾಶ ಬಳ್ಳಾರಿ ವಂದಿಸಿದರು.