ವಂದೇಮಾತರಂ ಗೀತೆಯನ್ನು ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಎರಡೇ ಚರಣ ಹಾಡಬೇಕೆಂದು ಸರ್ಕಾರ ಆದೇಶ ಮಾಡಿದೆ. ಅದನ್ನು ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯೂ ಪಾಲಿಸಬೇಕು. ಇಲ್ಲವಾದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಎಚ್ಚರಿಸಿದ್ದಾರೆ.

ಕೊಪ್ಪಳ : ವಂದೇಮಾತರಂ ಗೀತೆಯನ್ನು ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಎರಡೇ ಚರಣ ಹಾಡಬೇಕೆಂದು ಸರ್ಕಾರ ಆದೇಶ ಮಾಡಿದೆ. ಅದನ್ನು ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯೂ ಪಾಲಿಸಬೇಕು. ಇಲ್ಲವಾದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಎಚ್ಚರಿಸಿದ್ದಾರೆ.

ಇತ್ತೀಚೆಗೆ ಗಂಗಾವತಿಯ ಪ್ರಜಾಸೇವೆ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ನಿಗದಿಗಿಂತ ಹೆಚ್ಚು ಚರಣ ಹಾಡಿರುವ ಕುರಿತಂತೆ ಅವರ ಗಮನ ಸೆಳೆದಾಗ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕ ಜನಾರ್ದನ ರೆಡ್ಡಿ ಒತ್ತಡದ ಹಿನ್ನೆಲೆಯಲ್ಲಿ ಪ್ರಜಾಸೇವೆ ಕಾರ್ಯಕ್ರಮದಲ್ಲಿ ವಂದೇಮಾತರಂ ಗೀತೆ ಪೂರ್ತಿ ಹಾಡಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ತಂಗಡಗಿ, ಜನಾರ್ದನ ರೆಡ್ಡಿ ಹೇಳಿದ ರೀತಿ ಕೇಳಲು ಆಗೋದಿಲ್ಲ. ಸರ್ಕಾರದ ಆದೇಶ ಪಾಲನೆ ಮಾಡಬೇಕು. ವಂದೇ ಮಾತರಂ ಪ್ರಾರಂಭವಾಗಿದ್ದೇ ಕಾಂಗ್ರೆಸ್‌ ಕಚೇರಿಯಲ್ಲಿ, ದೇಶಭಕ್ತಿ ಬಗ್ಗೆ ನಮಗೆ ಪಾಠ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

ಕೆಲ ದಿನಗಳ ಹಿಂದೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯನ್ನು ಎರಡು ಚರಣ ಹಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಜೆಪಿ ಶಾಸಕ ಚನ್ನಬಸಪ್ಪ ಅವರು ಕಾರ್ಯಕ್ರಮವನ್ನೇ ಬಹಿಷ್ಕರಿಸಿದ್ದರು. ಗುರುವಾರ ಬೆಳಗಾವಿ ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಅವರು ಕೂಡ 2 ಚರಣದ ವಂದೇ ಮಾತರಂಗೆ ಆಕ್ಷೇಪ ವ್ಯಕ್ತಪಡಿಸಿ ಪೂರ್ಣ ಹಾಡಲು ಸೂಚಿಸಿದ್ದರು. ಕೇಂದ್ರ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಪೂರ್ಣವಾಗಿ ಹಾಡಲಾಗುತ್ತಿದ್ದರೆ, ಅದನ್ನು 2 ಚರಣ ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಕಾಂಗ್ರೆಸ್‌- ಬಿಜೆಪಿ ನಡುವೆ ಜಟಾಪಟಿಗೆ ಕಾರಣವಾಗಿದೆ.

- ಎರಡು ಚರಣ ಹಾಡಬೇಕೆಂಬ ರಾಜ್ಯ ಸರ್ಕಾರದ ಆದೇಶ ಪಾಲಿಸಲೇಬೇಕು

- ಅದನ್ನು ಉಲ್ಲಂಘಿಸಿದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ತೀವಿ: ಸಚಿವ

- ಕೇಂದ್ರ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎಲ್ಲ 6 ಚರಣ ಹಾಡಬೇಕು ಎಂದು ಕೇಂದ್ರ ಆದೇಶ

- ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ 2 ಚರಣ ಮಾತ್ರ ಹಾಡಬೇಕು ಎಂದು ರಾಜ್ಯ ಸರ್ಕಾರದಿಂದ ನಿರ್ದೇಶನ

- ಬಿಜೆಪಿ ವಿರೋಧ. ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲೂ ಆರು ಚರಣ ಹಾಡಲು ಬಿಜೆಪಿ ಜನಪ್ರತಿನಿಧಿಗಳ ಪಟ್ಟು

- ಕೆಲವೆಡೆ ಸೂಚನೆ ಪಾಲಿಸುತ್ತಿರುವ ಅಧಿಕಾರಿಗಳು, ಕೆಲವೆಡೆ ಸರ್ಕಾರದ ಆದೇಶ ತೋರಿಸಿ 2 ಚರಣಕ್ಕೆ ವ್ಯವಸ್ಥೆ

- ವಂದೇ ಮಾತರಂ 6 ಚರಣ ಹಾಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಂಗಡಗಿ ಎಚ್ಚರಿಕೆ

ಬಿಜೆಪಿಗರಿಂದ ನಾವು ಪಾಠ ಕಲಿಯಬೇಕಿಲ್ಲ

ವಂದೇ ಮಾತರಂ ಪ್ರಾರಂಭವಾಗಿದ್ದೇ ಕಾಂಗ್ರೆಸ್‌ ಕಚೇರಿಯಲ್ಲಿ. ದೇಶಭಕ್ತಿ ಬಗ್ಗೆ ನಮಗೆ ಬಿಜೆಪಿಗರು ಪಾಠ ಮಾಡುವ ಅಗತ್ಯವಿಲ್ಲ. ಸರ್ಕಾರದ ಆದೇಶದಂತೆ ವಂದೇ ಮಾತರಂನ 2 ಚರಣ ಹಾಡಬೇಕು. ಇಲ್ಲವಾದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.

- ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ