ಬೇರೆ ಊರಿನ ಶಾಲೆಗೆ ನಮ್ಮೂರ ಮಕ್ಕಳ ಸೇರಿಸಲು ಸಾಧ್ಯವಿಲ್ಲ ಎಂದು ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಹಳ್ಳಿಯ ಸರ್ಕಾರಿ ಶಾಲೆ ಮುಚ್ಚಿದರೆ ಬೇರೆ ಊರಿಗೆ ನಮ್ಮೂರ ಮಕ್ಕಳನ್ನು ಸೇರಿಸಲು ಸಾಧ್ಯವಿಲ್ಲ ಎಂದು ತಾಲೂಕಿನ ಮುತ್ತಯ್ಯನಹಟ್ಟಿ ಗ್ರಾಮಸ್ಥರು ಎಐಡಿಎಸ್ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಗ್ರಾಮದ ಶಾಲೆ ಮುಂದೆ ಪ್ರತಿಭಟನೆ ನಡೆಸಿದರು.ಎಐಡಿಎಸ್ಓ ರಾಜ್ಯ ಕಚೇರಿ ಕಾರ್ಯದರ್ಶಿ ಮಹಾಂತೇಶ್ ಬಿಳೂರು ಮಾತನಾಡಿ, ಇಡೀ ರಾಜ್ಯಾದ್ಯಂತ ಹಳ್ಳಿಗಳಲ್ಲಿ ಪೋಷಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಎಸ್ಡಿಎಮ್ಸಿ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಗ್ರಾಮದಿಂದ ಹಿಡಿದು ರಾಜ್ಯ ಮಟ್ಟದವರೆಗೆ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು ಎಂದು ಹೋರಾಟಗಳನ್ನು ಮಾಡುತ್ತಾ ಬಂದಿದ್ದಾರೆ, ಇಷ್ಟೇಲ್ಲಾ ತೀವ್ರ ವಿರೋಧದ ನಡುವೆಯೊ ರಾಜ್ಯ ಸರ್ಕಾರವು ತನ್ನ ಹಟಮಾರಿ ಧೋರಣೆ ಬಿಡದೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸಿ, ಅದರ ಸುತ್ತ ಮುತ್ತಲಿನ 5-6 ಕಿ.ಮೀ ಒಳಗೆ ಇರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ಆದೇಶಗಳನ್ನು ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ ಸರ್ಕಾರಿ ಶಾಲೆ ಮುಚ್ಚಿ ಹಳ್ಳಿ ಜನರನ್ನು ಹೆಬ್ಬೆಟ್ಟು ಆಗಿ ಮಾಡುತ್ತಿದೆ ಇಡೀ ರಾಜ್ಯದ ಎಲ್ಲಾ ಹಳ್ಳಿಯ ಜನರೆಲ್ಲಾ ಒಗ್ಗಟ್ಟಾಗಿ ಹೋರಾಟ ಕಟ್ಟಿ, ಸರ್ಕಾರಿ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ರಾಜ್ಯ ಸರ್ಕಾರ ಈ ಕೂಡಲೇ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕೈಬಿಟ್ಟು, ಸರ್ಕಾರಿ ಶಾಲೆಗಳನ್ನು ಉಳಿಸಿ ಬಲಪಡಿಸಬೇಕೆಂದು ಆಗ್ರಹಿಸಿದರು.ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯ ಬೋರಣ್ಣ ಮಾತನಾಡಿ, ಮುತ್ತಯ್ಯನಹಟ್ಟಿ ಜನರು ಕೂಲಿ ಕೆಲಸ ಮಾಡುವ ಕಾರ್ಮಿಕರು, ಒಂದು ದಿನದ ಊಟಕ್ಕೆ ದಿನನಿತ್ಯ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. 400ಕ್ಕೂ ಹೆಚ್ಚು ಜನ ವಾಸವಿರುವ ಈ ಹಟ್ಟಿಯಲ್ಲಿ ಸರ್ಕಾರಿ ಶಾಲೆಯಲ್ಲಿ 50ಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಈ ಶಾಲೆ ಮುಚ್ಚಿದರೆ 5 ಕಿ.ಮೀ ದೂರದಲ್ಲಿರುವ ಪಿಳ್ಳೇಕೆರೆನಹಳ್ಳಿ ಕೆಪಿಎಸ್ ಶಾಲೆಗೆ ಕಳುಹಿಸಲು ಸಾಧ್ಯವಾಗುವುದಿಲ್ಲ. ಸಮಾಜದಲ್ಲಿ ಹೆಣ್ಣು ಮಕ್ಕಳಿಗೆ ಭದ್ರತೆ ಇಲ್ಲ, ಬೇರೆ ಊರಿಗೆ ಹೋಗಿ ಶಿಕ್ಷಣ ಪಡೆಯಬೇಕೆಂದರೆ ಹರಸಾಹಸ ಪಡಬೇಕಾಗುತ್ತದೆ. ಆದ್ದರಿಂದ ನಮ್ಮೂರ ಶಾಲೆ ನಮ್ಮೂರಲ್ಲಿ ಉಳಿಸಬೇಕೆಂದು ಒತ್ತಾಯಿಸಿದರು.
ಈ ವೇಳೆ ಎಐಡಿಎಸ್ಓ ಜಿಲ್ಲಾ ಸಂಚಾಲಕ ಕೆ.ಈರಣ್ಣ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಗೀತಮ್ಮ, ಲಲಿತಾ, ಸರೋಜಾ, ಲಕ್ಷ್ಮಿ ಮತ್ತು ಎಸ್ಡಿಎಮ್ಸಿ ಅಧ್ಯಕ್ಷರು ಪವಿತ್ರ, ಸದಸ್ಯರು ಗ್ರಾಮಸ್ಥರು, ವಿದ್ಯಾರ್ಥಿಗಳು, ಭಾಗವಹಿಸಿದ್ದರು.