ಕನ್ನಡಪ್ರಭ ವಾರ್ತೆ ಬೆಂಗಳೂರು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಆರೋಪಿಯಾಗಿರುವ ಬಿ.ನಾಗೇಂದ್ರ ಅವರನ್ನು ಮತ್ತೆ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆ ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಕೆಆರ್‌ಎಸ್‌ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ರಘು ಜಾಣಗೆರೆ, ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಮೀಸಲಿದ್ದ ಹಣದ ದುರುಪಯೋಗದ ಆರೋಪದ ಪ್ರಕರಣದಲ್ಲಿ ಇಡಿ, ಸಿಬಿಐ, ಎಸ್ಐಟಿ ತನಿಖೆ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಪರ ಧೋರಣೆಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ಕಿಡಿಕಾರಿದರು.ಪ್ರಸ್ತುತ ಬಿ. ನಾಗೇಂದ್ರ ಅವರು ಜಾಮೀನಿನ ಮೇಲೆ ಹೊರಗಿದ್ದು, ನ್ಯಾಯಾಲಯದ ಷರತ್ತುಗಳಿಗೆ ಒಳಪಟ್ಟಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಸಚಿವರಾಗಿ ಸಂಪೂರ್ಣ ಸ್ವಾತಂತ್ರ್ಯದಿಂದ ಹಾಗೂ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಪ್ರಕರಣದ ವಿಚಾರಣೆ ಪೂರ್ಣಗೊಂಡು ಅಂತಿಮ ತೀರ್ಪು ಬರುವವರೆಗೂ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಅಗತ್ಯವಿದ್ದರೆ ಶಾಸಕ ಸ್ಥಾನಕ್ಕೂ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕೆಆರ್‌ಎಸ್‌ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್ ಮಾತನಾಡಿ, ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಸಿದ್ದ ಹಣದ ದುರುಪಯೋಗದ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದು ರಾಜ್ಯದ ಜನತೆಗೆ ಮಾಡಿದ ಅನ್ಯಾಯವಾಗಿದೆ. ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಸರ್ಕಾರವೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ಮತ್ತೆ ಅಧಿಕಾರ ನೀಡಿರುವುದು ಸರ್ಕಾರದ ನೈತಿಕತೆಯನ್ನು ಪ್ರಶ್ನಿಸುವಂತಾಗಿದೆ ಎಂದರು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಪೂರ್ಣಗೊಂಡು ಅಂತಿಮ ತೀರ್ಪು ಬರುವವರೆಗೂ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಸರ್ಕಾರ ಈ ಬೇಡಿಕೆಯನ್ನು ನಿರ್ಲಕ್ಷಿಸಿದರೆ ಭ್ರಷ್ಟಾಚಾರದ ವಿರುದ್ಧ ಕೆಆರ್‌ಎಸ್ ಪಕ್ಷ ತನ್ನ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಿದೆ ಎಚ್ಚರಿಸಿದರು.

ಕೆಆರ್‌ಎಸ್‌ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುಪತಿ ಭಟ್, ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಆರೋಗ್ಯಸ್ವಾಮಿ, ಆನಂದ ಹಾಗೂ ಅಕ್ಷಯ್, ಬೆಂಗಳೂರು ಪಶ್ಚಿಮ ಜಿಲ್ಲಾಧ್ಯಕ್ಷರಾದ ದೇವರಾಜ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.