ಕೆಆರ್‌ಎಸ್‌ ಪಕ್ಷದಿಂದ 28 ಕ್ಷೇತ್ರಗಳಲ್ಲೂ ಸ್ಪರ್ಧೆ

| Published : Mar 23 2024, 01:01 AM IST

ಸಾರಾಂಶ

2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಎಂ.ರವಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಕರ್ನಾಟಕ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಎಂ.ರವಿ ತಿಳಿಸಿದರು.ನಗರದ ಜಿಲ್ಲಾಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಅಭಿವೃದ್ಧಿಗಾಗಿ ನಾಡು ನುಡಿ ಗಡಿ ಹೋರಾಟದ ಮನೋಭಾವ ಹೊಂದಿರುವ ಹಾಗೂ ಭ್ರಷ್ಟಾಚಾರ ಮುಕ್ತ ಭಾರತದ ಕನಸು ಕಂಡಿರುವ ವಿವೇಕ ಇರುವ ಪ್ರಜ್ಞಾವಂತ ಪ್ರಬುದ್ಧ ವ್ಯಕ್ತಿಗಳನ್ನು ಸಂದರ್ಶನ ನಡೆಸಿ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳನ್ನಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಆಯ್ಕೆ ಮಾಡಿದೆ ಎಂದರು.ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸ್ಥಳೀಯ ಪ್ರಾಮಾಣಿಕ ವ್ಯಕ್ತಿಯಾಗಿರುವ ಹಾಗೂ ಜನಸಾಮಾನ್ಯರ ಪರವಾಗಿ ಅವರ ಹಕ್ಕುಗಳನ್ನು ರಕ್ಷಿಸುತ್ತ ಭ್ರಷ್ಟಾಚಾರದ ವಿರುದ್ದ ಹೋರಾಟವನ್ನು ಮಾಡಿರುವ ಯಳಂದೂರು ತಾಲೂಕಿನ ಕಂದಳ್ಳಿ ಮಹೇಶ್‌ ಅವರನ್ನು ಕೆಆರ್‌ಎಸ್‌ ಪಕ್ಷದಿಂದ ಅಭ್ಯರ್ಥಿಯನ್ನಾಗಿ ಕಣಕಿಳಿಸಲಿದ್ದೇವೆ ಎಂದರು.ಚುನಾವಣೆಯಲ್ಲಿ ಹಣ, ಹೆಂಡ ಹಂಚುವುದಿಲ್ಲ. ಸಂವಿಧಾನದ ಆಶಯಗಳ ಪರವಾಗಿ ಚುನಾವಣೆಯನ್ನು ಎದುರಿಸುತ್ತೇವೆ. ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವ, ನಿರಂಕುಶ ಪ್ರಭುತ್ವ ನಡುವಿನ ಹೋರಾಟವಾಗಿದೆ. ಸಾಮಾನ್ಯರು, ಸಂಪತ್ತು ಉಳ್ಳ ಜನರ ನಡುವಿನ ಸ್ಪರ್ಧೆಯಾಗಲಿದೆ. ಬಹುಸಂಖ್ಯಾತರಾದ ಸಾಮಾನ್ಯ ಜನರು ಸಾಮಾನ್ಯರನ್ನೇ ಆಯ್ಕೆ ಮಾಡಬೇಕು. ಆ ಮೂಲಕ ದೇಶದಲ್ಲಿ ಪ್ರಜಾಪ್ರಭುತ ಉಳಿಯಬೇಕು. ಈ ಬಾರಿಯ ಚುನಾವಣೆಯಲ್ಲಿ ಮತದಾರರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.ಕೆಆ‌ರ್‌ಎಸ್ ಪಕ್ಷದ ಅಭ್ಯರ್ಥಿ ಕಂಡಹಳ್ಳಿ ಮಹೇಶ್ ಮಾತನಾಡಿ, ಕೆಆರ್‌ಎಸ್ ಪಕ್ಷವು 2024ರ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಸಾಮಾನ್ಯ ವ್ಯಕ್ತಿಗೆ ಟಿಕೆಟ್ ನೀಡುವ ಮೂಲಕ ಅವಕಾಶ ಕಲ್ಪಿಸಿದೆ. ನನ್ನನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗಿದೆ. ಪಕ್ಷವು ಭ್ರಷ್ಟಚಾರ ನಿರ್ಮೂಲನೆ ಮಾಡಲು ಪಣತೊಟ್ಟಿದ್ದು, ಪಾರದರ್ಶಕವಾಗಿ ಚುನಾವಣೆ ಎದುರಿಸಲು ಮತದಾರರು ಬೆಂಬಲಿಸಬೇಕು ಎಂದರು. ಸುದ್ದಿಗೋಷ್ಟಿಯಲ್ಲಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್, ಉಪಾಧ್ಯಕ್ಷ ಸೈಯದ್ ಸಮೀ, ಯಳಂದೂರು ತಾಲೂಕು ಅಧ್ಯಕ್ಷ ವೈ.ಕೆ.ಮೋಳೆ ರಂಗರಾಜು, ರವೀಂದ್ರ, ನಿಸ್ವಾನ್, ಮುಬಾರಕ್ ಇದ್ದರು.