ಮುದ್ದೇಬಿಹಾಳ: ನಷ್ಟದಲ್ಲಿದ್ದ ನಿಗಮವನ್ನು ಲಾಭದಾಯಕವಾಗಿ ಮುನ್ನಡೆಸಲು ಅಧಿಕಾರಿಗಳೊಂದಿಗೆ ನಿರಂತರ ಚರ್ಚಿಸಿ ದೇಶಾದ್ಯಂತ ಮೈಸೂರು ಸ್ಯಾಂಡಲ್ ಉತ್ಪನ್ನಗಳ ಮಾರುಕಟ್ಟೆ ವಿಸ್ತರಿಸಲಾಗಿದೆ. ತಾವು ಅಧಿಕಾರ ವಹಿಸಿಕೊಂಡ ನಂತರ ನಿಗಮಕ್ಕೆ ಸುಮಾರು 500 ಕೋಟಿಗೂ ಅಧಿಕ ಲಾಭವಾಗಿದೆ ಎಂದು ಸಾಬೂನು ಮತ್ತು ಮಾರ್ಜಕ ನಿಗಮ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಾಡಗೌಡ ಹೇಳಿದರು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ನಷ್ಟದಲ್ಲಿದ್ದ ನಿಗಮವನ್ನು ಲಾಭದಾಯಕವಾಗಿ ಮುನ್ನಡೆಸಲು ಅಧಿಕಾರಿಗಳೊಂದಿಗೆ ನಿರಂತರ ಚರ್ಚಿಸಿ ದೇಶಾದ್ಯಂತ ಮೈಸೂರು ಸ್ಯಾಂಡಲ್ ಉತ್ಪನ್ನಗಳ ಮಾರುಕಟ್ಟೆ ವಿಸ್ತರಿಸಲಾಗಿದೆ. ತಾವು ಅಧಿಕಾರ ವಹಿಸಿಕೊಂಡ ನಂತರ ನಿಗಮಕ್ಕೆ ಸುಮಾರು ₹500 ಕೋಟಿಗೂ ಅಧಿಕ ಲಾಭವಾಗಿದೆ ಎಂದು ಸಾಬೂನು ಮತ್ತು ಮಾರ್ಜಕ ನಿಗಮ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಾಡಗೌಡ ಹೇಳಿದರು.ಪಟ್ಟಣದ ದುರ್ಗಾದೇವಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿ, ಮೈಸೂರು ಸಾಬೂನು ಮತ್ತು ಮಾರ್ಜಕ ನಿಗಮದಿಂದ ಮಂಜೂರಾದ ಎರಡು ಅಂಬುಲೆನ್ಸ್ಗಳನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಿ ಅವರು ಮಾತನಾಡಿದರು. ಕೃಷ್ಣರಾಜ ಒಡೆಯರ್, ಸರ್.ಎಂ.ವಿಶ್ವೇಶ್ವರಯ್ಯ ಸೇರಿ ಹಲವು ಹಿರಿಯರ ದೂರದೃಷ್ಟಿಯ ಫಲವಾಗಿ ಮೈಸೂರು ಸ್ಯಾಂಡಲ್ ಕಂಪನಿ ಸ್ಥಾಪನೆಯಾಗಿದೆ. ಇಲ್ಲಿ ಸಾಬೂನು, ಅಗರಬತ್ತಿ, ಸುಗಂಧ ದ್ರವ್ಯ ಸೇರಿದಂತೆ ಹಲವು ದಿನಬಳಕೆ ವಸ್ತುಗಳನ್ನು ಉತ್ಪಾದಿಸಲಾಗುತ್ತಿದೆ. ಸಾರ್ವಜನಿಕರು ದೇಶಿ ಉತ್ಪನ್ನಗಳನ್ನು ಹೆಚ್ಚು ಬಳಸುವುದರಿಂದ ನಿಗಮದ ಬೆಳವಣಿಗೆಗೆ ಸಹಕಾರಿಯಾಗುವುದರ ಜೊತೆಗೆ, ನಿಗಮದ ಮೂಲಕ ದೊರೆಯುವ ಸಿಎಸ್ಆರ್ ಅನುದಾನವನ್ನು ಸಾರ್ವಜನಿಕ ಅಭಿವೃದ್ಧಿಗೆ ಬಳಸಲು ಸಾಧ್ಯವಾಗುತ್ತದೆ ಎಂದರು.
ಕ್ಷೇತ್ರಕ್ಕೆ ಎರಡು ಅಂಬುಲೆನ್ಸ್:ಮತಕ್ಷೇತ್ರದ ಸಾರ್ವಜನಿಕರಿಗೆ ತುರ್ತು ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದಿಂದ ಮೈಸೂರು ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್ಆರ್ ಅನುದಾನದಡಿ ಎರಡು ಅಂಬ್ಯುಲೆನ್ಸ್ ಒದಗಿಸಲಾಗಿದೆ.
ಮತಕ್ಷೇತ್ರಕ್ಕೆ ಅಂಬುಲೆನ್ಸ್ಗಳ ಅಗತ್ಯವಿರುವ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಅನುದಾನದ ಕೊರತೆಯಿರುವುದು ತಿಳಿದುಬಂದಿತ್ತು. ಮೈಸೂರು ಸಾಬೂನು ಮತ್ತು ಮಾರ್ಜಕ ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಿ ಎರಡು ಅಂಬುಲೆನ್ಸ್ ಮುದ್ದೇಬಿಹಾಳ ಕ್ಷೇತ್ರಕ್ಕೆ ಒದಗಿಸಲಾಗಿದೆ ಎಂದು ಹೇಳಿದರು.ಮೈಸೂರು ಸಾಬೂನು ಮತ್ತು ಮಾರ್ಜಕ ನಿಗಮದಿಂದ ಕೇವಲ ಮುದ್ದೇಬಿಹಾಳ ಕ್ಷೇತ್ರಕ್ಕಷ್ಟೇ ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಸಿಎಸ್ಆರ್ ಅನುದಾನದಡಿ ಅಭಿವೃದ್ಧಿ ಹಾಗೂ ಸಾರ್ವಜನಿಕ ಉಪಯೋಗದ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ನಿಗಮದ ಸಿಎಸ್ಆರ್ ಅನುದಾನದ ಮೂಲಕ ಅಂಬುಲೆನ್ಸ್ಗಳ ಒದಗಿಸುವಿಕೆ, ಅರಣ್ಯ ಇಲಾಖೆ ಸಿಬ್ಬಂದಿಗೆ ಕಿಟ್ಗಳ ವಿತರಣೆ ಸೇರಿದಂತೆ ರಾಜ್ಯದ ವಿವಿಧೆಡೆ ಸಾರ್ವಜನಿಕ ಅಗತ್ಯತೆಗಳಿಗೆ ಅನುಗುಣವಾಗಿ ಹಲವು ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದರು.
ಶಾಲಾ ಅಭಿವೃದ್ಧಿಗೂ ಅನುದಾನ:ನಿಗಮದ ಸಿಎಸ್ಆರ್ ಅನುದಾನದ ಮೂಲಕ ಈಗಾಗಲೇ ಕೆಲವು ಸರ್ಕಾರಿ ಶಾಲೆಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಮುದ್ದೇಬಿಹಾಳ ಪಟ್ಟಣದ ಹೃದಯ ಭಾಗದಲ್ಲಿರುವ ಬ್ರಿಟಿಷರ ಕಾಲದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಬಿಎಂಪಿಎಸ್ ಶಾಲೆಯ ನವೀಕರಣಕ್ಕೂ ನಿಗಮದಿಂದ ₹1 ಕೋಟಿಗೂ ಅಧಿಕ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.ಪುರಸಭೆ ಮಾಜಿ ಅಧ್ಯಕ್ಷ ಮೆಹಬೂಬ ಗೊಳಸಂಗಿ, ಗಣ್ಯರಾದ ರವಿ ಶಾಸ್ತ್ರಿ, ಸದು ಮಠ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮಲ್ಲನಗೌಡ ಬಿರಾದಾರ, ತಾಲೂಕು ಆರೋಗ್ಯಾಧಿಕಾರಿ ಸತೀಶ ತಿವಾರಿ, ಪುರಸಭೆ ಮುಖ್ಯಾಧಿಕಾರಿ ಎಂ.ಬಿ.ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ:ಮತಕ್ಷೇತ್ರದ ಜನರು ನಮ್ಮನ್ನು ಆಯ್ಕೆ ಮಾಡಿ ಶಾಸಕರನ್ನಾಗಿಸಿದ್ದು, ಅವರಿಗೆ ಅಗತ್ಯವಿರುವ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಸರ್ಕಾರದ ಮೂಲಕ ಒದಗಿಸುವುದಕ್ಕಾಗಿ.ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ದೋಷಗಳು ಆಗುವುದು ಸಹಜ. ಅವುಗಳನ್ನು ಸಂಬಂಧಿಸಿದವರ ಗಮನಕ್ಕೆ ತಂದು ಪರಿಹಾರ ಕಂಡುಕೊಂಡು ಅಭಿವೃದ್ಧಿ ಕಾರ್ಯ ಮುಂದುವರಿಸಬೇಕು. ಆದರೆ ದೋಷವನ್ನೇ ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸೂಕ್ತವಲ್ಲ ಎಂದು ನಾಡಗೌಡ ಹೇಳಿದರು.ನಮ್ಮ ನಿಗಮದಿಂದ ಆರೋಗ್ಯ ಇಲಾಖೆಗೆ ಅಂಬುಲೆನ್ಸ್ ಗಳನ್ನು ಉಚಿತವಾಗಿ ಹಸ್ತಾಂತರಿಸಲಾಗಿದೆ. ಆದರೆ ಅವುಗಳ ನಿರ್ವಹಣೆಗಾಗಿ ಆರೋಗ್ಯ ಇಲಾಖೆ ಯಾವ ಷರತ್ತು ಹಾಕುತ್ತಾರೆ ಎಂಬುವುದು ಇಲಾಖೆ ಅಧಿಕಾರಿಗಳಿಗೆ ಬಿಟ್ಟಿದ್ದು. ಈಗಾಗಲೇ ನಮ್ಮಲ್ಲಿ 108 ಅಂಬುಲೆನ್ಸ್ಗಳ ಸೇವೆ ಇದೆ. ನಮ್ಮ ನಿಗಮದಿಂದ ಹೆಚ್ಚುವರಿ ಸೌಲಭ್ಯಕ್ಕಾಗಿ ಇವುಗಳನ್ನು ನೀಡಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಮಾಡಬೇಡಿ.
-ಸಿ.ಎಸ್.ನಾಡಗೌಡ ಅಪ್ಪಾಜಿ ಅಧ್ಯಕ್ಷರು, ಕೆಎಸ್ಡಿಎಲ್. ನಿಗಮ ಹಾಗೂ ಶಾಸಕರು ಮುದ್ದೇಬಿಹಾಳ ಕ್ಷೇತ್ರ