ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗಗಳಿಗೆ ನಿಗದಿತ ಪ್ರಮಾಣದಲ್ಲಿ ಮೀಸಲಾತಿ ಕಲ್ಪಿಸುವ ಜತೆಗೆ ಮಹಿಳೆಯರಿಗೂ ಮೀಸಲಾತಿ ನೀಡಬೇಕು. ಆದರೆ ಪ್ರಕಟಿಸಿರುವ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಕಂಡುಬರುತ್ತಿವೆ ಎಂದರು. ವಿಶೇಷವಾಗಿ ಹಿಂದುಳಿದ ವರ್ಗಗಳ ‘ಎ’ ಗುಂಪಿಗೆ ಸೇರಿದ ಬಿಲ್ಲವ, ಮುಸ್ಲಿಂ, ಆಚಾರ್ಯ, ದೇವಾಂಗ ಸೇರಿದಂತೆ ವಿವಿಧ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಹಲವು ಗ್ರಾಮ ಪಂಚಾಯಿತಿಗಳಿಗೆ ‘ಎ’ ವರ್ಗದ ಮೀಸಲಾತಿ ನೀಡಲಾಗಿಲ್ಲ. ಸಕಲೇಶಪುರ ತಾಲೂಕಿನ 26 ಗ್ರಾಮ ಪಂಚಾಯಿತಿಗಳ ಪೈಕಿ 16 ಪಂಚಾಯಿತಿಗಳಲ್ಲಿ ‘ಎ’ ವರ್ಗಕ್ಕೆ ಮೀಸಲಾತಿ ಕಲ್ಪಿಸದಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.

ಸಕಲೇಶಪುರ: ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ಉದ್ದೇಶದಿಂದ ಪ್ರಕಟಿಸಿರುವ ಮೀಸಲಾತಿ ಪಟ್ಟಿಯು ಸರ್ಕಾರ ಹಾಗೂ ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಆರೋಪಿಸಿದರು.ಪಟ್ಟಣದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕಲೇಶಪುರ ತಾಲೂಕಿನಲ್ಲಿ 26 ಗ್ರಾಮ ಪಂಚಾಯಿತಿಗಳಿದ್ದು, ಮೀಸಲಾತಿ ನಿಗದಿಪಡಿಸುವಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗಗಳಿಗೆ ನಿಗದಿತ ಪ್ರಮಾಣದಲ್ಲಿ ಮೀಸಲಾತಿ ಕಲ್ಪಿಸುವ ಜತೆಗೆ ಮಹಿಳೆಯರಿಗೂ ಮೀಸಲಾತಿ ನೀಡಬೇಕು. ಆದರೆ ಪ್ರಕಟಿಸಿರುವ ಪಟ್ಟಿಯಲ್ಲಿ ಹಲವು ವ್ಯತ್ಯಾಸಗಳು ಕಂಡುಬರುತ್ತಿವೆ ಎಂದರು. ವಿಶೇಷವಾಗಿ ಹಿಂದುಳಿದ ವರ್ಗಗಳ ‘ಎ’ ಗುಂಪಿಗೆ ಸೇರಿದ ಬಿಲ್ಲವ, ಮುಸ್ಲಿಂ, ಆಚಾರ್ಯ, ದೇವಾಂಗ ಸೇರಿದಂತೆ ವಿವಿಧ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಹಲವು ಗ್ರಾಮ ಪಂಚಾಯಿತಿಗಳಿಗೆ ‘ಎ’ ವರ್ಗದ ಮೀಸಲಾತಿ ನೀಡಲಾಗಿಲ್ಲ. ಸಕಲೇಶಪುರ ತಾಲೂಕಿನ 26 ಗ್ರಾಮ ಪಂಚಾಯಿತಿಗಳ ಪೈಕಿ 16 ಪಂಚಾಯಿತಿಗಳಲ್ಲಿ ‘ಎ’ ವರ್ಗಕ್ಕೆ ಮೀಸಲಾತಿ ಕಲ್ಪಿಸದಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿದರು.ಬೆಳಗೋಡು, ದೇಪಲ, ಆನೆಮಹಲ್, ಕುರಿಗನಹಳ್ಳಿ, ಮಹಾನಬಲ್, ಭಾಗ್ಯಮ್ಮ ಹಾಗೂ ಬಾಳುಪೇಟೆ ಸೇರಿದಂತೆ ವಿವಿಧ ಭಾಗಗಳಲ್ಲಿ ನಿರ್ದಿಷ್ಟ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಅವರಿಗೆ ಸೂಕ್ತ ಮೀಸಲಾತಿ ದೊರೆತಿಲ್ಲ. ಪರಿಶಿಷ್ಟ ಜಾತಿ ಸೇರಿದಂತೆ ವಿವಿಧ ವರ್ಗಗಳಲ್ಲಿಯೂ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನಿಗದಿಯಾಗಿಲ್ಲ ಎಂಬ ದೂರುಗಳಿವೆ ಎಂದು ತಿಳಿಸಿದರು. ಮೀಸಲಾತಿ ನಿಗದಿಪಡಿಸುವಾಗ ಜಿಲ್ಲಾಧಿಕಾರಿ, ತಹಸೀಲ್ದಾರ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸರ್ಕಾರ ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾರ್ಗಸೂಚಿಗಳನ್ನು ಮೀರಿ ಮೀಸಲಾತಿ ನಿಗದಿಪಡಿಸಿರುವುದು ಏಕೆ ಎಂಬುದನ್ನು ಜಿಲ್ಲಾಡಳಿತ ಸ್ಪಷ್ಟಪಡಿಸಬೇಕು. ಇದರಲ್ಲಿ ರಾಜಕೀಯ ಪ್ರೇರಣೆ ಇದೆಯೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ ಎಂದು ಆರೋಪಿಸಿದರು.ಮೀಸಲಾತಿ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಹೀಗಾಗಿ ಯಾವುದೇ ಗ್ರಾಮ ಪಂಚಾಯಿತಿ ಅಥವಾ ವಾರ್ಡ್‌ನಲ್ಲಿ ಅನ್ಯಾಯವಾಗಿದೆ ಎಂದು ಭಾವಿಸುವ ಮತದಾರರು ನಿಗದಿತ ಅವಧಿಯೊಳಗೆ ತಕರಾರು ಸಲ್ಲಿಸಿ ತಮ್ಮ ಹಕ್ಕನ್ನು ಕೇಳಬೇಕು. ಈ ವಿಚಾರವನ್ನು ತಮ್ಮ ಪರವಾಗಿ ಜಿಲ್ಲಾಧಿಕಾರಿಗಳ ಗಮನಕ್ಕೂ ತರುವುದಾಗಿ ಹೇಳಿದರು.