ಸಾರಾಂಶ
ಕನ್ನಡಪ್ರಭ ವಾರ್ತೆ ಕುಂದಾಪುರ
ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ವತಿಯಿಂದ ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ವಿದ್ಯಾ ಅಶೋಕ್, ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನಕರ್ ಶೆಟ್ಟಿ, ಕಾಲೇಜಿನ ಉಪನ್ಯಾಸಕರಾದ ಅಕ್ಷತಾ ಹಾಗೂ ಚೇತನ ಉಪಸ್ಥಿತರಿದ್ದರು.ಬಿಎಸ್ಸಿ ನರ್ಸಿಂಗ್ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಭಾರತಿ, ವಿಶ್ವ ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಸಂಸ್ಥೆಯ ಆಡಳಿತ ವೈದ್ಯಾಧಿಕಾರಿ ಡಾ. ವಿದ್ಯಾ ಅಶೋಕ್, ಪ್ಲಾಸ್ಟಿಕ್ ಮಾಲಿನ್ಯದಿಂದ ಪರಿಸರದ ಮೇಲಾಗುವ ದುಷ್ಪರಿಣಾಮದ ಬಗ್ಗೆ ತಿಳಿಸಿದರು. ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನಕರ್ ಶೆಟ್ಟಿ, ಜನರಲ್ಲಿ ಪರಿಸರದ ಬಗ್ಗೆ ಜಾಗೃತಿ ಮತ್ತು ಕಾಳಜಿ ವಹಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು ಮತ್ತು ಪರಿಸರ ಜಾಗೃತಿ ಜಾತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕೊನೆಯಲ್ಲಿ ಬಿಎಸ್ಸಿ ನರ್ಸಿಂಗ್ 5ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಪರಿಸರವನ್ನು ಸ್ವಚ್ಛ ಮಾಡುವ ಮುಖಾಂತರ ಜನರಲ್ಲಿ ಅರಿವು ಮೂಡಿಸಿದರು.ಈ ಸಂದರ್ಭದಲ್ಲಿ ಎಂಸಿಎನ್ ವಿದ್ಯಾರ್ಥಿಗಳು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು. ನಿಕಿತಾ ಸ್ವಾಗತಿಸಿದರು. ದಿವ್ಯ ವಂದಿಸಿದರು. ವಿದ್ಯಾರ್ಥಿನಿ ಸಿನ್ಸಿ ಕಾರ್ಯಕ್ರಮವನ್ನು ನಿರೂಪಿಸಿದರು.