ಕುಂಜತ್ತಬೈಲ್ ಲೇಔಟ್: ಮೂಲಸೌಕರ್ಯ ಅಭಿವೃದ್ಧಿಪಡಿಸಲು ದಿನೇಶ್‌ ಗುಂಡೂರಾವ್‌ ಸೂಚನೆ

| Published : Oct 30 2025, 02:45 AM IST

ಕುಂಜತ್ತಬೈಲ್ ಲೇಔಟ್: ಮೂಲಸೌಕರ್ಯ ಅಭಿವೃದ್ಧಿಪಡಿಸಲು ದಿನೇಶ್‌ ಗುಂಡೂರಾವ್‌ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಕುಂಜತ್ತಬೈಲ್‍ನಲ್ಲಿ ನಿರ್ಮಾಣವಾಗುತ್ತಿರುವ ವಸತಿ ಲೇಔಟ್‍ನಲ್ಲಿ ಮೂಲ ಸೌಲಭ್ಯಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಜನಾಕರ್ಷಣೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಗರದ ಕುಂಜತ್ತಬೈಲ್‍ನಲ್ಲಿ ನಿರ್ಮಾಣವಾಗುತ್ತಿರುವ ವಸತಿ ಲೇಔಟ್‍ನಲ್ಲಿ ಮೂಲ ಸೌಲಭ್ಯಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಜನಾಕರ್ಷಣೆಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.

ಸೋಮವಾರ ಕುಂಜತ್ತಬೈಲ್ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದರು.

ಬಡಾವಣೆಯಲ್ಲಿ ಉದ್ಯಾನವನ, ದಾರಿದೀಪ ಸೇರಿದಂತೆ ಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಬೇಕು. ನಿವೇಶನಗಳ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಅರಿವು ಮತ್ತು ಮಾಹಿತಿ ನೀಡುವಂತೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ಕಡೆ ಈ ಬಗ್ಗೆ ಪ್ರಚಾರಪಡಿಸಬೇಕು ಎಂದು ಅವರು ಸೂಚಿಸಿದರು.

ಕುಂಜತ್ತಬೈಲ್ ಬಡಾವಣೆಯಲ್ಲಿ ಆಧುನಿಕ ಸೌಲಭ್ಯಗಳು ದೊರಕುವಂತೆ ಅಭಿವೃದ್ಧಿಪಡಿಸಬೇಕು. ನಗರಾಭಿವೃದ್ಧಿ ಪ್ರಾಧಿಕಾರವು ಈ ಬಗ್ಗೆ ಹೆಚ್ಚು ಒತ್ತು ನೀಡಿ ಬಡಾವಣೆ ನಿರ್ಮಿಸಬೇಕು. ನಿವೇಶನ ಮಾರಾಟದಿಂದ ಬಂದ ಹಣದಲ್ಲಿ ನಗರದ ಇನ್ನೊಂದು ಕಡೆ ಬಡಾವಣೆಯನ್ನು ಅಭಿವೃದ್ಧಿಗೊಳಿಸುವಂತೆ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಸಚಿವರಿಗೆ ಮಾಹಿತಿ ನೀಡಿ, ಈ ಬಡಾವಣೆಯಲ್ಲಿ 208 ನಿವೇಶನಗಳಿವೆ. ಈಗಾಗಲೇ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದ್ದು, ನ.18 ಕೊನೆಯ ದಿನವಾಗಿದೆ ಎಂದು ತಿಳಿಸಿದರು. ಸಾರ್ವಜನಿಕರಿಗೆ ಅತಿ ಕಡಿಮೆ ದರದಲ್ಲಿ ನಿವೇಶನ ಲಭ್ಯವಾಗಲು ಸೈಟ್ ದರವನ್ನು ಕಡಿಮೆಗೊಳಿಸಲಾಗಿದೆ ಎಂದು ಹೇಳಿದರು.

ಸಚಿವರು ನಂತರ ಕೊಣಾಜೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೂಡ ವಸತಿ ಬಡಾವಣೆಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತ ಮುಹಮ್ಮದ್ ನಜೀರ್, ಮೂಡಾ ಸದಸ್ಯರು ಇದ್ದರು.