ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಗುರುವಾರ ನಡೆಯಿತು.ಜಿಲ್ಲಾ ಆರೋಗ್ಯ ಇಲಾಖೆ, ಕುಶಾಲನಗರ ತಾಲೂಕು ಆರೋಗ್ಯ ಇಲಾಖೆ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲ ಡಾ.ಸತೀಶ್ ಮಾತನಾಡಿ, ಜನಸಂಖ್ಯಾ ಸ್ಫೋಟದಿಂದ ದೇಶದ ಅಭಿವೃದ್ಧಿಗೆ ಅಡ್ಡಿ ಉಂಟಾಗುತ್ತಿದೆ. ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ತೊಡಕು ಉಂಟಾಗುವುದು ಸಹಜವಾಗಿದೆ ಎಂದರು.ಸಂಪನ್ಮೂಲ ವ್ಯಕ್ತಿ, ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ಲೋಕೇಶ್ ಭರಣಿ ದಿನದ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು.
ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಜನಸಂಖ್ಯಾ ಸ್ಫೋಟದಿಂದ ಆಗುತ್ತಿರುವ ಪ್ರಸಕ್ತ ಪರಿಣಾಮದ ಬಗ್ಗೆ ಮಾಹಿತಿ ನೀಡಿದರು.
ಕುಶಾಲನಗರ ತಾಲೂಕು ಆರೋಗ್ಯ ಅಧಿಕಾರಿ ಡಾ ಇಂದೂಧರ್ ಪ್ರಾಸ್ತಾವಿಕ ನುಡಿಗಳಲ್ಲಿ ಜನಸಂಖ್ಯಾ ಸ್ಫೋಟ ನಿಯಂತ್ರಿಸುವ ವಿಧಾನಗಳ ಬಗ್ಗೆ ಮಾಹಿತಿ ಒದಗಿಸಿದರು.
ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ ನಿರೂಪಿಸಿದರು.ಹೆಚ್ಚು ಕೆ ಶಾಂತಿ ಅವರು ಸ್ವಾಗತಿಸಿ ನಿರೂಪಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜನಾರ್ದನ್ ರಾವ್ ವಂದಿಸಿದರು.
ಕಾರ್ಯಕ್ರಮಕ್ಕೆ ಮುನ್ನ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಮುಂಭಾಗದಿಂದ ಆಶಾ ಕಾರ್ಯಕರ್ತೆಯರು, ಧರ್ಮಸ್ಥಳ ಯೋಜನೆಯ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳ ಜಾಥಾವನ್ನು ಉದ್ದೇಶಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ಮಾತನಾಡಿದರು.