ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ನಡೆಯಿತು.ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ವರದಿಯನ್ನು ಓದುವ ಮೂಲಕ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳು ನಡೆದವು.ಕಾರ್ಯಕ್ರಮಗಳ ಅನುಷ್ಠಾನ ಮತ್ತಿತರ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದವು.ಯುವ ಶಕ್ತಿಯ ಯೋಜನೆಯು ಸಂಪೂರ್ಣವಾಗಿ ತಾಲೂಕಿನಲ್ಲಿ ಕಾರ್ಯಗತಗೊಳಿಸಲು, ಮತ್ತು ಯುವಕರಿಗೆ ಸಮರ್ಪಕವಾಗಿ ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಸದ್ಯದಲ್ಲಿಯೇ ಯುವಜನ ಮೇಳವನ್ನು ಆಯೋಜಿಸುವಂತೆ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ವಿತರಣೆಯಾದ ಪಡಿತರ ವಸ್ತುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಖರೀದಿಸುತ್ತಿದ್ದ ಸಂದರ್ಭದಲ್ಲಿ ಕಾರ್ಯಾಚರಣೆ ಮಾಡಿ ಪಡಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ನಿಯಮಾನುಸಾರ ಕ್ರಮ ತೆಗೆದುಕೊಂಡ ಆಹಾರ ಇಲಾಖೆಯ ತಾಲೂಕು ಆಹಾರ ಪರಿವೀಕ್ಷಣಾ ಅಧಿಕಾರಿ ಎಂ ಎಸ್ ಸ್ವಾತಿ ಅವರ ಕಾರ್ಯ ವೈಖರಿಯನ್ನು ಗುರುತಿಸಿ ಸಭೆಯಲ್ಲಿ ಶ್ಲಾಘನೆ ವ್ಯಕ್ತಪಡಿಸುವ ಮೂಲಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಸಭೆಯಲ್ಲಿ ಚೆಸ್ಕಂ ವಿದ್ಯುತ್ ಸಂಸ್ಥೆ ವತಿಯಿಂದ ನಡೆಯುತ್ತಿರುವ ನೂತನ ಕಂಬಗಳ ಅಳವಡಿಕೆ ಮತ್ತು ಬದಲಿ ವೈರಲ್ ಅಳವಡಿಕೆ ಸಮರ್ಪಕವಾಗಿ ರಸ್ತೆಯ ಹದ್ದುಬಸ್ತು ಅನ್ನು ಬಿಟ್ಟು ಅಳವಡಿಕೆ ಮಾಡುವ ಕಾರ್ಯ ನಡೆಸಲು ವಿದ್ಯುತ್ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು.ಅಧ್ಯಕ್ಷತೆ ವಹಿಸಿದ ವಿ.ಪಿ.ಶಶಿಧರ್ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಯುವ ನಿಧಿ ಯೋಜನೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜೊತೆಯಲ್ಲಿ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ದೊರಕುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಸಭೆಯಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ತಾಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣ ಗೌಡ, ಹೆಚ್ . ಎನ್ .ರಾಜಶೇಖರ್, ಶ್ರೀನಿವಾಸನ್ , ಕುಮಾರ್, ಅಬ್ದುಲ್ ರಜಾಕ್, ರಫೀಕ್ ಖಾನ್, ಆದಂ, ಮಲ್ಲಿಕಾರ್ಜುನ, ಶ್ರೀನಿವಾಸ್ ಸೇರಿದಂತೆ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಶ್ರೀ ದೇವಿ, ವಿದ್ಯುತ್ ಇಲಾಖೆಯ ಇಂಜಿನಿಯರ್ ಸೋಮೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ ವರ್ಗದವರು ಇದ್ದರು.