ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಕಾರ್ಯದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ತಂಡ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ಅನನ್ಯ ವಾಸುದೇವ್ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಕಾರ್ಯದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ತಂಡ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ಅನನ್ಯ ವಾಸುದೇವ್ ತಿಳಿಸಿದ್ದಾರೆ.ಅವರು ಕುಶಾಲನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಸ್ಥಳೀಯ ಎಪಿಸಿಎಂಎಸ್ ಸಭಾಂಗಣದಲ್ಲಿ ನಡೆದ ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಕಾರ್ಯಕ್ರಮದಲ್ಲಿ ನಡೆದ ಸ್ವಯಂಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಳೆದ ಎರಡು ವರ್ಷಗಳಿಂದ ಮಳೆಗಾಲ ಅವಧಿಗಿಂತ ಮುನ್ನ ಜಿಲ್ಲಾಡಳಿತ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಮೂಲಕ ಯಾವುದೇ ರೀತಿಯ ಅನಾಹುತ ನಡೆಯದಂತೆ ಎಚ್ಚರ ವಹಿಸಲಾಗುತ್ತಿದೆ. ಆಕಸ್ಮಿಕ ಘಟನೆಗಳ ಸಂದರ್ಭ ಪ್ರತಿಯೊಬ್ಬ ನಾಗರಿಕರು ಯಾವುದೇ ರೀತಿಯ ಅಪಾಯ ಸಂಭವಿಸಿದಂತೆ ಜಾಗೃತಿ ವಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಶೌರ್ಯ ತಂಡದ ಸದಸ್ಯರು ತಮ್ಮ ಕಾರ್ಯ ಚಟುವಟಿಕೆ ನಡುವೆ ಜನರಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಎನ್ ಡಿ ಆರ್ ಎಫ್ ವಿಜಯವಾಡ ಬೆಟಾಲಿಯನ್ ಅಧಿಕಾರಿ ಶಾಂತಿಲಾಲ್ ಜಟಿಯ ಮಾತನಾಡಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಕಾರ್ಯವೈಖರಿ ಬಗ್ಗೆ ಮಾಹಿತಿ ಒದಗಿಸಿದರು.
ಈ ಸಂದರ್ಭ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜಿಲ್ಲಾ ನಿರ್ದೇಶಕರಾದ ವಿಠ್ಠಲ್ ಎಸ್ ಸಾಲಿಯಾನ್ ಶೌರ್ಯ ತಂಡದ ಸದಸ್ಯರು ಸದಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಸರ್ಕಾರದ ತಂಡಗಳು ಬರುವ ಮುನ್ನ ಸ್ಥಳೀಯ ತಂಡಗಳು ಪ್ರಾಕೃತಿಕ ವಿಕೋಪದ ಸ್ಥಳಕ್ಕೆ ಧಾವಿಸಿ ಸೂಕ್ತ ರಕ್ಷಣಾ ಕಾರ್ಯದಲ್ಲಿ ನಿರತರಾಗಬೇಕು ಎಂದರು.ಜನಜಾಗೃತಿ ವೇದಿಕೆಯ ನಿಕಟಪೂರ್ವ ಉಪಾಧ್ಯಕ್ಷ ಎಂ ಎನ್ ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೌರ್ಯ ವಿಪತ್ತು ಕಾರ್ಯಕ್ರಮದ ಯೋಜನಾಧಿಕಾರಿ ಜೈವಂತ ಪಟಗಾರ, ಯೋಜನೆಯ ಸೋಮವಾರಪೇಟೆ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಶೌರ್ಯ ತಂಡದ ತಾಲೂಕು ಪ್ರಮುಖರಾದ ರಾಮದಾಸ್ ಯಶೋಧ, ದಿವ್ಯ, ದಿನೇಶ್, ತೀರ್ಥ ಕುಮಾರ್, ರೇಖಾ ಗಣೇಶ್ ಮತ್ತಿತರರು ಇದ್ದರು.
200ಕ್ಕೂ ಅಧಿಕ ಸ್ವಯಂಸೇವಕರಿಗೆ ತರಬೇತಿ ಕಾರ್ಯಾಗಾರ ನಡೆಯಿತು.ಯೋಜನಾಧಿಕಾರಿ ಹನುಮಂತ ಅಂಗಡಿ ನಿರೂಪಿಸಿದರು. ಜನಜಾಗೃತಿ ವೇದಿಕೆಯ ಮೇಲ್ವಿಚಾರಕರಾದ ಜಿತೇಶ್ ವಂದಿಸಿದರು.---------------------------------ಚಿತ್ರ ತರಬೇತಿ ಕಾರ್ಯಗಾರ ಉದ್ಘಾಟನೆ ಸಂದರ್ಭ