ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ಪುರಸಭಾ ವ್ಯಾಪ್ತಿಯ ಬೈಚನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ 2 ಕೋಟಿ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕುಶಾಲನಗರ ತಾಲೂಕುಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.ಈ ಸಂದರ್ಭ ನಡೆದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಸ್ಮರಿಸುವ ಕಾರ್ಯ ಆಗಬೇಕಿದೆ. ಅವರ ಧ್ಯೇಯ, ಉದ್ದೇಶ ಈಡೇರಿಕೆಗೆ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸುವಂತಾಗಬೇಕಿದೆ. 50 ಸೆಂಟ್ ಜಾಗದಲ್ಲಿ ನಿರ್ಮಾಣವಾಗುವ ನೂತನ ಭವನ ಆಕರ್ಷಣೀಯವಾಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದರು.ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರತ್ಯೇಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ವಿವಿಧ ಸಂಘ ಸಂಸ್ಥೆಗಳು ಒಂದಾಗಿ ಸೇರಿ ಸಂವಿಧಾನ ಶಿಲ್ಪಿ ಅವರ ಕನಸನ್ನು ನನಸಾಗಿಸುವ ಕೆಲಸ ಆಗಬೇಕು ಎಂದು ಹೇಳಿದರು.ಕುಶಾಲನಗರ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನ ಸೇರಿದಂತೆ ಸರ್ಕಾರಿ ಜಾಗಗಳಲ್ಲಿ ಕುಶಾಲನಗರ ತಾಲೂಕಿಗೆ ಬೇಕಾಗಿರುವ ಅಗತ್ಯ ಕ್ರೀಡಾಂಗಣ, ಸರ್ಕಾರಿ ಆಸ್ಪತ್ರೆ, ಕಂದಾಯ ಭವನ, ತಾಲೂಕು ಪಂಚಾಯಿತಿ ಆಡಳಿತ ಕಚೇರಿ ಮುಂತಾದವುಗಳನ್ನು ನಿರ್ಮಿಸಲು ಎಲ್ಲ ರೀತಿಯ ಕಾರ್ಯ ಯೋಜನೆಗಳನ್ನು ಈಗಾಗಲೇ ರೂಪಿಸಲಾಗಿದೆ ಎಂದು ತಿಳಿಸಿದರು.ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ತಾಲೂಕು ಕೇಂದ್ರಕ್ಕೆ ಬೇಕಿರುವ ಅಗತ್ಯ ಕಚೇರಿಗಳ ಕಾಮಗಾರಿಗಳನ್ನು ಮಂಜೂರು ಮಾಡಿಸುವಲ್ಲಿ ಶಾಸಕರ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದರು.
ಪುರಸಭೆ ಅಧ್ಯಕ್ಷೆ ಜಯಲಕ್ಷ್ಮೀ ಚಂದ್ರ, ಸದಸ್ಯ ಜೈವರ್ಧನ್, ಮಾಜಿ ಸದಸ್ಯ ಎಚ್.ಡಿ.ಚಂದ್ರು ಮಾತನಾಡಿದರು.ಈ ಸಂದರ್ಭ ಪುರಸಭೆ ಉಪಾಧ್ಯಕ್ಷೆ ಪುಟ್ಟಲಕ್ಷ್ಮೀ, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡೂರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ತಹಸೀಲ್ದಾರ್ ಕಿರಣ್ ಗೌರಯ್ಯ, ತಾ.ಪಂ. ಇಒ ಪರಮೇಶ್ವರ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಸೇರಿದಂತೆ ಪುರಸಭೆ ಸದಸ್ಯರು, ದಲಿತ ಸಂಘಟನೆಗಳ ಮುಖಂಡರು, ಪಕ್ಷದ ಪ್ರಮುಖರು ಇದ್ದರು.