ಕುವೆಂಪು ಅವರು ಮಕ್ಕಳ ಸಾಹಿತ್ಯದಿಂದ ಹಿಡಿದು ಶ್ರೀರಾಮಾಯಣ ದರ್ಶನಂವರೆಗೂ ವಿಭಿನ್ನ ರೀತಿಯ ಸಾಹಿತ್ಯ ರಚಿಸಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ.
ಶಿರಹಟ್ಟಿ: ಕನ್ನಡ ಸಾಹಿತ್ಯ ಲೋಕಕ್ಕೆ ರಾಷ್ಟ್ರಕವಿ ಕುವೆಂಪು ಅವರು ಆಗಾಧವಾದ ಕೊಡುಗೆ ನೀಡಿದ್ದಾರೆ. ಅವರ ಸಾಹಿತ್ಯ ಕೊಡುಗೆಯನ್ನು ಕನ್ನಡಿಗರು ಮರೆಯಲು ಅಸಾಧ್ಯ ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವ್ ತಿಳಿಸಿದರು.ಸೋಮವಾರ ತಹಸೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕುವೆಂಪು ಅವರು ಮಕ್ಕಳ ಸಾಹಿತ್ಯದಿಂದ ಹಿಡಿದು ಶ್ರೀರಾಮಾಯಣ ದರ್ಶನಂವರೆಗೂ ವಿಭಿನ್ನ ರೀತಿಯ ಸಾಹಿತ್ಯ ರಚಿಸಿ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ನಾಡಿನ ಜನತೆ ಕನ್ನಡ ಭಾಷೆ, ನೆಲ, ಜಲದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದಾರೆ. ಇದನ್ನು ಹಾಗೆಯೇ ಕಾಪಾಡಿಕೊಂಡು ಹೋಗುವ ಜವಾಬ್ದಾರಿ ಸಾಹಿತಿಗಳ ಮೇಲಿದೆ ಎಂದರು.ಜನಮಾನಸದಲ್ಲಿ ಗುರುತಿಸಿಕೊಂಡಿದ್ದ ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡದ ಹೆಸರಾಂತ ಬರಹಗಾರ, ಕವಿ, ನಾಟಕಕಾರರು, ಸಮಾಜ ಸುಧಾರಕರು ಮತ್ತು ಪ್ರಗತಿಗಾಗಿ ಶ್ರಮಿಸಿದ ದಾರ್ಶನಿಕರೂ ಆಗಿದ್ದರು ಎಂದರು.ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎ. ಬಳಿಗೇರ ಮಾತನಾಡಿ, ಕುವೆಂಪು ಅವರು ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿ ಕೃತಿ ರಚಿಸಿ ಸಾಹಿತ್ಯ ಸಂಪತ್ತನ್ನು ಸಮೃದ್ಧಗೊಳಿಸಿದ್ದಾರೆ. ಕುವೆಂಪು ಅವರು ಮೇರುಸದೃಶವಾದ ಮಹಾನ್ ಕೃತಿಗಳನ್ನು, ಮೌಲ್ಯಯುತವಾದ ತತ್ವ ಸಂದೇಶಗಳನ್ನು ವಿಶ್ವ ಸಾಹಿತ್ಯಕ್ಕೆ ನೀಡುವ ಮೂಲಕ ಜನಮಾನಸದಲ್ಲಿ ಉಳಿದಿದ್ದಾರೆ ಎಂದರು. ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಕೆ. ಲಮಾಣಿ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅಪಾರ. ಅವರು ಕಾವ್ಯದ ಹೊಸ ರೂಪಗಳನ್ನು ಪರಿಚಯಿಸಿದರು ಮತ್ತು ಕನ್ನಡ ಸಾಹಿತ್ಯಕ್ಕೆ ಆಧುನಿಕತೆಯನ್ನು ತಂದರು. ಅವರ ಕೃತಿಗಳು ಅನೇಕ ಕನ್ನಡ ಬರಹಗಾರರಿಗೆ ಸ್ಫೂರ್ತಿ ನೀಡಿತು ಮತ್ತು ಅವರನ್ನು ಕನ್ನಡ ಸಾಹಿತ್ಯದಲ್ಲಿ ಪ್ರವರ್ತಕ ಎಂದು ಪರಿಗಣಿಸಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಗಿರಿಜಾ ಪೂಜಾರ, ಸಂತೋಷ ಅಸ್ಕಿ, ವಿನೋದ ಪಾಟೀಲ ಸೇರಿದಂತೆ ಕಂದಾಯ ಇಲಾಖೆಯ ಎಲ್ಲ ಸಿಬ್ಬಂದಿ ಇದ್ದರು.