ಕಥೆ, ಕವನ, ಕಾದಂಬರಿ, ವಿಮರ್ಶೆ ಮುಂತಾದ ಪ್ರಕಾರಗಳಲ್ಲಿಯೂ ಕುವೆಂಪು ಅವರು ಸಾಹಿತ್ಯ ರಚಿಸಿ, ಕನ್ನಡ ಅಗ್ರಮಾನ್ಯ ರಾಷ್ಟ್ರಕವಿ ಎಂದೆನಿಸಿಕೊಂಡಿದ್ದಾರೆ ಎಂದು ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜುಮದಾರ ಬಣ್ಣಿಸಿದರು.

ಕೊಪ್ಪಳ: ಕುವೆಂಪು ಅವರು ಮನುಜ ಮತ ವಿಶ್ವಪಥ ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವರಾಗಿದ್ದಾರೆ. ಕಥೆ, ಕವನ, ಕಾದಂಬರಿ, ವಿಮರ್ಶೆ ಮುಂತಾದ ಪ್ರಕಾರಗಳಲ್ಲಿಯೂ ಕುವೆಂಪು ಅವರು ಸಾಹಿತ್ಯ ರಚಿಸಿ, ಕನ್ನಡ ಅಗ್ರಮಾನ್ಯ ರಾಷ್ಟ್ರಕವಿ ಎಂದೆನಿಸಿಕೊಂಡಿದ್ದಾರೆ ಎಂದು ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮುಜುಮದಾರ ಬಣ್ಣಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿಶ್ವ ಮಾನವ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಕುವೆಂಪು ಅವರ ಸಾಹಿತ್ಯ ಅಧ್ಯಯನ ಮಾಡುವುದರ ಮೂಲಕ ಇಂದಿನ ಯುವಕವಿ, ಸಾಹಿತಿಗಳು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು. ಕುವೆಂಪು ಅವರ ‘ಭಾರತ ಜನನಿಯ ತನುಜಾತೆ’ ಎಂಬ ಹಾಡನ್ನು ನಮ್ಮ ರಾಜ್ಯದ ನಾಡಗೀತೆಯಾಗಿ ಅಳವಡಿಸಿಕೊಳ್ಳಲಾಗಿದ್ದು, ಈ ಹಾಡು ಇಡೀ ಭಾರತದ ಪರಿಕಲ್ಪನೆಯನ್ನು ಮುಂದಿಡುತ್ತದೆ. ಕುವೆಂಪು ಅವರನ್ನು ಬರೀ ಗದ್ಯ, ಸಾಹಿತ್ಯಕ್ಕಷ್ಟೇ ಲೇಖಕರೆಂದು ಅವರನ್ನು ಗುರುತಿಸಲು ಸಾಧ್ಯವಿಲ್ಲ. ಏಕೆಂದರೆ, ಅವರು ರಚಿಸಿದ ಶ್ರೀರಾಮಾಯಣ ದರ್ಶನಂ ಮಹಾಕಾವ್ಯ, ಆಧುನಿಕ ಕಾಲದ ಶ್ರೇಷ್ಠ ಕಾವ್ಯಗಳಲ್ಲೊಂದಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿ, ಕುವೆಂಪು ಅವರ ಕವನಗಳು ಅರ್ಥಗರ್ಭಿತವಾಗಿವೆ. ಅವರ ದಿವ್ಯ ಸಂದೇಶಗಳು ನಮಗೆ ದಾರಿದೀಪವಾಗಿವೆ. ವಿಶ್ವಮಾನವ ಸಂದೇಶವನ್ನು ನಾವೆಲ್ಲರೂ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಮಾತನಾಡಿ, ಮಾನವ ಕುಲಕ್ಕೆ ಕುವೆಂಪು ನೀಡಿರುವ ಸಂದೇಶಗಳು ಸಾರ್ವಕಾಲಿಕವಾಗಿವೆ. ನಾವೆಲ್ಲರೂ ಮತ್ತೆ ಮತ್ತೆ ಜ್ಞಾಪಿಸಿಕೊಳ್ಳಬಹುದಾದ ಶ್ರೇಷ್ಠ ಸಾಹಿತಿಗಳಲ್ಲಿ ಕುವೆಂಪು ಪ್ರಮುಖರಾಗಿದ್ದಾರೆ ಎಂದರು.

ನಿವೃತ್ತ ಪ್ರಾಚಾರ್ಯ ಹಾಗೂ ಹಿರಿಯ ಸಾಹಿತಿ ಮಹಾಂತೇಶ ಮಲ್ಲನಗೌಡರ್ ಮಾತನಾಡಿ, ಕುವೆಂಪು ಜಾತಿ, ಮತ, ಪಂಥ, ದೇಶ, ಭಾಷೆ ಎಲ್ಲವನ್ನೂ ಮೀರಿ ಮೊದಲು ನಾವು ಮಾನವರಾಗಬೇಕು, ವಿಶ್ವ ಮಾನವರಾಗಬೇಕೆಂಬ ಸಂದಶೇವನ್ನು ನೀಡಿದ್ದಾರೆ. ಅವರ ವಿಚಾರಗಳನ್ನು ನಾವೆಲ್ಲರೂ ತಿಳಿದುಕೊಳ್ಳಬೇಕು. ಕುವೆಂಪು ಹೇಳಿರುವ ಹಾಗೆ ನಾವೆಲ್ಲರೂ ವಿಶ್ವ ಮಾನವರಾಗಿ ಬಾಳಲು ಪ್ರಯತ್ನಿಸೋಣ ಎಂದು ಹೇಳಿದರು.

ಶ್ರೀ ಗುರುಕೃಪ ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳು ಕುವೆಂಪು ಅವರು ಗೀತೆಗಳನ್ನು ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಮತ್ತು ಸಾಹಿತಿಗಳು, ಲೇಖಕರು ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ವಿವಿಧ ಇತರೆ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.