ವೈಜ್ಞಾನಿಕತೆ ಕೊರತೆಯಿಂದ ಮೌಢ್ಯ ಹೆಚ್ಚಳ

| Published : Jul 01 2025, 12:47 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜನರಲ್ಲಿ ವೈಜ್ಞಾನಿಕ ಮನೋಭಾವದ ಕೊರತೆಯಿಂದಾಗಿ ಸಮಾಜದಲ್ಲಿ ಇನ್ನೂ ಮೌಢ್ಯಗಳು ಹೆಚ್ಚಾಗಿವೆ. ವಿಜ್ಞಾನವನ್ನು ಜನಪ್ರಿಯಗೊಳಿಸುವುದರಿಂದ ಮೌಡ್ಯತೆ ಹಾಗೂ ಅಂಧಕಾರವನ್ನು ಕಡಿಮೆ ಮಾಡಬಹುದಾಗಿದೆ ಎಂದು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜನರಲ್ಲಿ ವೈಜ್ಞಾನಿಕ ಮನೋಭಾವದ ಕೊರತೆಯಿಂದಾಗಿ ಸಮಾಜದಲ್ಲಿ ಇನ್ನೂ ಮೌಢ್ಯಗಳು ಹೆಚ್ಚಾಗಿವೆ. ವಿಜ್ಞಾನವನ್ನು ಜನಪ್ರಿಯಗೊಳಿಸುವುದರಿಂದ ಮೌಡ್ಯತೆ ಹಾಗೂ ಅಂಧಕಾರವನ್ನು ಕಡಿಮೆ ಮಾಡಬಹುದಾಗಿದೆ ಎಂದು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ ಅಭಿಪ್ರಾಯಪಟ್ಟರು.

ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಜೈವಿಕ ಮಾಹಿತಿ ತಂತ್ರಜ್ಙಾನ ಮತ್ತು ಜೈವಿಕ ತಂತ್ರಜ್ಞಾನ ವಿಭಾಗಗಳು ಭಾರತೀಯ ವಿಜ್ಞಾನ ಕಾಂಗ್ರೆಸ್‌ನ ವಿಜಯಪುರ ಚಾಪ್ಟರ್ ಸಹಯೋಗದಲ್ಲಿ ಪ್ರಾದೇಶಿಕ ಭಾಷೆಯಲ್ಲಿ ವಿಜ್ಞಾನ ಸಂವಹನ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ ಜನಪ್ರಿಯಗೊಳಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಯಾವ ದೇಶ ವಿಜ್ಞಾನವನ್ನು ಚನ್ನಾಗಿ ಅರಿತಿದೆ, ಆ ದೇಶವು ಸಮೃದ್ದವಾಗಿದೆ. ವಿಜ್ಞಾನವನ್ನು ಹೆಚ್ಚು ಜನಪ್ರಿಯಗೊಳಿಸಲು ಇಂತಹ ಹಲವಾರು ಕಾರ್ಯಾಗಾರಗಳು ಅವಶ್ಯವಾಗಿವೆ ಎಂದು ಹೇಳಿದರು.

ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವೈದ್ಯಕೀಯ ಮತ್ತು ಎಂಜನಿಯರಿಂಗ್ ಶಿಕ್ಷಣ ಕನ್ನಡ ಮಾಧ್ಯಮದಲ್ಲಿ ದೊರೆಯುವಂತಾಗಬೇಕು ಎಂದರು.

ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ವಿಜ್ಞಾನ ಸಂವಹನದಲ್ಲಿ ಸಾಕಷ್ಟು ಅವಕಾಶಗಳಿದ್ದು ಅದಕ್ಕೆ ಬೇಕಾದ ಕೌಶಲಗಳನ್ನು ಕಲಿತುಕೊಳ್ಳುವ ಮೂಲಕ ವೃತ್ತಿ ಜೀವನ ರೂಪಿಸಿಕೊಳ್ಳಬೇಕು. ಮಹಿಳಾ ವಿವಿಯಲ್ಲಿ ವಿಜ್ಞಾನದ ಪರಿಸರ ರೂಪಿಸುವಲ್ಲಿ ಭಾರತೀಯ ವಿಜ್ಞಾನ ಕಾಂಗ್ರೆಸ್‌ನ ವಿಜಯಪುರ ಚಾಪ್ಟರ್ ಕಾರ್ಯ ಮಾಡುತ್ತಿದೆ ಎಂದರು.

ಈ ವೇಳೆ ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಿದರು.

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿಯ) ಜಂಟಿ ಕುಲಸಚಿವ ವೀರಣ್ಣ ಕಮ್ಮಾರ, ಗುಬ್ಬಿ ಲ್ಯಾಬ್‌ನ ನಿರ್ದೇಶಕ ಡಾ.ಸುಧೀರ.ಎಚ್.ಎಸ್ ಮಾತನಾಡಿದರು. ಕಾರ್ಯಕ್ರಮದ ಆಯೋಜಕರಾದ ಡಾ.ಬಾಬು. ಆರ್.ಎಲ್ ಪ್ರಾಸ್ತಾವಿಕ ಮಾತನಾಡಿದರು. ಡಾ.ಜಾಯ್ ಹೊಸಕೇರಿ ವಂದಿಸಿದರು, ಬೋಧಕ, ಮತ್ತು ಭೋದಕೇತರ ಸಿಬ್ಬಂದಿ ಉಪಸ್ಥಿತರಿದ್ದರು.