ಬೆಂಗಳೂರು: ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪುರಾತತ್ವ ವೈಭವವನ್ನು ಒಳಗೊಂಡಿರುವ ಲಕ್ಕುಂಡಿಯನ್ನು ದೇಶದ ಅಗ್ರ ಪುರಾತತ್ವ ಕೇಂದ್ರವನ್ನಾಗಿ ರೂಪಿಸುವ ದಿಸೆಯಲ್ಲಿ ಸಮಗ್ರ ಯೋಜನೆಗಳೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಾಜ್ಯಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಲಕ್ಕುಂಡಿಯ ಪುರಾತತ್ವ ಸಂಪತ್ತಿನ ಸಂರಕ್ಷಣೆ, ದೇವಾಲಯಗಳ ಪುನರುಜ್ಜೀವನ, ಪುರಾತನ ಬಾವಿಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಕಾರ್ಯಗಳನ್ನು ಸಮನ್ವಯದಿಂದ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಲಕ್ಕುಂಡಿಯಲ್ಲಿ ಈಗಾಗಲೇ 15 ಬಾವಿ ಹಾಗೂ 15 ದೇವಾಲಯಗಳನ್ನು ಸಾರ್ವಜನಿಕರಿಗೆ ಪರಿಚಯಿಸಲಾಗಿದೆ. ಕಾಲಕ್ರಮೇಣ ನಿರ್ಲಕ್ಷ್ಯಕ್ಕೆ ಒಳಗಾಗಿ ತಮ್ಮ ಗುರುತನ್ನು ಕಳೆದುಕೊಂಡಿದ್ದ ಅನೇಕ ಪಾರಂಪರಿಕ ತಾಣಗಳನ್ನು ಸರ್ಕಾರ ಮತ್ತು ಸ್ಥಳೀಯರ ಸಹಕಾರದಿಂದ ಮರು ಅನಾವರಣಗೊಳಿಸುವ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ.

2026 ಅಂತ್ಯದೊಳಗೆ ಕನಿಷ್ಠ 50 ಬಾವಿ ಹಾಗೂ 50 ದೇವಾಲಯಗಳನ್ನು ಅನಾವರಣಗೊಳಿಸಿ, ಲಕ್ಕುಂಡಿಯ ಪಾರಂಪರಿಕ ತಾಣಗಳ ಸಂಖ್ಯೆಯನ್ನು 100ರ ಗಡಿಗೆ ತಲುಪಿಸುವ ಗುರಿ ಹೊಂದಲಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆ ಸಾಕಾರಕ್ಕೆ ಸ್ಥಳೀಯರ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದರು.

ನರಗುಂದ ಶಾಸಕ ಸಿ.ಸಿ. ಪಾಟೀಲ ಮಾತನಾಡಿ, ಎರಡು ಸಾವಿರ ವರ್ಷಗಳ ಇತಿಹಾಸ ಹೊತ್ತಿರುವ ಲಕ್ಕುಂಡಿಯ ಪುರಾತತ್ವ ಸಂಪತ್ತು ಇಂದಿನ ಪೀಳಿಗೆಗೆ ಅಚ್ಚರಿಯ ಸಂಗತಿಯಾಗಿದೆ. ಆ ಕಾಲದ ಶಿಲ್ಪಿಗಳ ಪ್ರತಿಭೆ, ಕಲಾತ್ಮಕತೆ ಮತ್ತು ತಾಂತ್ರಿಕ ಸಾಮರ್ಥ್ಯಕ್ಕೆ ಇಲ್ಲಿ ದೊರೆಯುತ್ತಿರುವ ಶಿಲ್ಪಗಳು ಹಾಗೂ ಪುರಾವೆಗಳು ಜೀವಂತ ಸಾಕ್ಷಿಗಳಾಗಿವೆ.


ಸಚಿವ ಎಚ್.ಕೆ. ಪಾಟೀಲರ ನೇತೃತ್ವದಲ್ಲಿ ನಡೆಯುತ್ತಿರುವ ಅನ್ವೇಷಣಾ ಕಾರ್ಯಗಳಿಂದ ಲಕ್ಕುಂಡಿಯ ಐತಿಹಾಸಿಕ ಮಹತ್ವ ಮತ್ತಷ್ಟು ಬೆಳಕಿಗೆ ಬರುತ್ತಿದೆ. ಈಗ ಪತ್ತೆಯಾಗಿರುವ ಪುರಾವೆಗಳು ಕೇವಲ ಆರಂಭ ಮಾತ್ರ. ಇನ್ನಷ್ಟು ಅನ್ವೇಷಣೆಗಳು ನಡೆದರೆ ಲಕ್ಕುಂಡಿಯ ಗತ ವೈಭವ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವ ಸಾಧ್ಯತೆ ಇದೆ ಎಂದರು.

ಸಭೆಯಲ್ಲಿ ಲಕ್ಕುಂಡಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಮಂಡಿಸಿದರು. ಪಾರಂಪರಿಕ ತಾಣಗಳ ಸಂರಕ್ಷಣೆ, ಪ್ರವಾಸೋದ್ಯಮ ವಿಸ್ತರಣೆ, ಸ್ಥಳೀಯ ಕಲಾ ಪರಂಪರೆಯ ಉತ್ತೇಜನ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸದಸ್ಯರು ಅಭಿಪ್ರಾಯಪಟ್ಟರು.

ರಾಜ್ಯಮಟ್ಟದ ಸಲಹಾ ಸಮಿತಿ ಸದಸ್ಯರಾದ ಸಿ.ಜಿ. ಬೆಟಸೂರಮಠ, ಸಿದ್ದಲಿಂಗೇಶ್ವರ ಪಾಟೀಲ, ಗೀತಾಂಜಲಿ ರಾವ್, ಅ.ದ. ಕಟ್ಟಿಮನಿ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯುಕ್ತ ದೇವರಾಜ್ ಎ., ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಶರಣು ಗೊಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.