ಕನ್ನಡಪ್ರಭ ವಾರ್ತೆ ಹಾಸನಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ನ್ಯಾಯವಾದಿ ಹಾಗೂ ಸಮಾಜಸೇವಕರಾದ ಜಿ.ಆರ್‌. ಲಕ್ಷ್ಮೀಶ ಅವರಿಗೆ ಸೇವಾಸ್ಫೂರ್ತಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು ರಾಜ್ಯ ಘಟಕ, ಬೆಂಗಳೂರು ಹಾಗೂ ಪರಿಸರ ಪ್ರೇಮ ತಂಡ, ಧಾರವಾಡ ಇವರ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಧಾರವಾಡದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿರುವ ಕರ್ನಾಟಕ ವಿದ್ಯಾವರ್ಧಕ ಸಂಘ ಆವರಣದಲ್ಲಿ ಏಪ್ರಿಲ್ ೫ ರಂದು ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೆ ಪ್ರಶಸ್ತಿ ಪ್ರದಾನ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಪರಿಸರ ಪ್ರೇಮ ತಂಡದ ಮುಖ್ಯಸ್ಥರಾದ ಮಲ್ಲಿಕಾರ್ಜುನ ತೊದಲಬಾಗಿ ಅವರ ‘ಪರಿಶ್ರಮ’ ಪುಸ್ತಕ ಲೋಕಾರ್ಪಣೆ ಮಾಡಲಾಯಿತು. ಜೊತೆಗೆ ಅತ್ಯುತ್ತಮ ಎಸ್.ಡಿ.ಎಂ.ಸಿ ಹಾಗೂ ಶಾಲೆಗಳಿಗೆ ಪ್ರಶಸ್ತಿ ವಿತರಣೆ ಹಾಗೂ ಶ್ರಮಿಕರತ್ನ ರಾಜ್ಯ ಪ್ರಶಸ್ತಿ ಪ್ರದಾನ ಕೂಡ ನೆರವೇರಿತು. ಈ ಸಂದರ್ಭದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು. ಜಿ. ಆರ್‌. ಲಕ್ಷ್ಮೀಶ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಗೌರವ ನೀಡಿರುವುದು ಹಾಸನ ಜಿಲ್ಲೆಯವರಿಗೆ ಹೆಮ್ಮೆಯ ಸಂಗತಿಯಾಗಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.