ಪ್ರತಿಯೊಬ್ಬರೂ ಸಂವಿಧಾನದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯವಿದೆ. ಸಂವಿಧಾನದ ಮೌಲ್ಯಗಳು, ತತ್ವಗಳು ಇಂದಿನ ಪೀಳಿಗೆಯವರಿಗೆ ಸರಿಯಾದ ರೀತಿಯಲ್ಲಿ ತಲುಪುತ್ತಿಲ್ಲ. ಎಲ್ಲರಿಗೂ ಸಂವಿಧಾನದ ಹಕ್ಕುಗಳು ದೊರೆಯಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಶಾಲಾ-ಕಾಲೇಜುಗಳ ಹಂತದಲ್ಲೇ ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವವನ್ನು ತಿಳಿಸಿಕೊಡುವ ಸಲುವಾಗಿ ಲೇಖಕ ಮಹೇಶ್ ಇರಸವಾಡಿ ಅವರು ಬರೆದಿರುವ ಭಾರತೀಯ ಸಂವಿಧಾನ-ಭಾರತೀಯರ ಹಕ್ಕುಗಳು ಮತ್ತು ಕರ್ತವ್ಯಗಳು ಕೃತಿಯನ್ನು ಸೋಮವಾರ ಮಂಡ್ಯದ ಪತ್ರಕರ್ತರ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಕೃತಿ ಬಿಡುಗಡೆ ಮಾಡಿ ಮಾತನಾಡಿದ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶಗೌಡ ಅವರು, ಪ್ರತಿಯೊಬ್ಬರೂ ಸಂವಿಧಾನದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯವಿದೆ. ಸಂವಿಧಾನದ ಮೌಲ್ಯಗಳು, ತತ್ವಗಳು ಇಂದಿನ ಪೀಳಿಗೆಯವರಿಗೆ ಸರಿಯಾದ ರೀತಿಯಲ್ಲಿ ತಲುಪುತ್ತಿಲ್ಲ. ಎಲ್ಲರಿಗೂ ಸಂವಿಧಾನದ ಹಕ್ಕುಗಳು ದೊರೆಯಬೇಕು. ಸಮಾನವಾಗಿ ಬಾಳುವ ಅವಕಾಶವನ್ನು ಕಲ್ಪಿಸಬೇಕು ಎಂದರು.

ಶಾಲಾ-ಕಾಲೇಜು, ವಿದ್ಯಾರ್ಥಿನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಈ ಕೃತಿಯನ್ನು ಉಚಿತವಾಗಿ ನೀಡಲು ಲಯನ್ಸ್ ಕ್ಲಬ್, ಮೈಸೂರಿನ ಪರಿವರ್ತನ ಸಂಸ್ಥೆಯು ಮುಂದಾಗಿರುವುದು ಶ್ಲಾಘನೀಯ. ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ತಲಾ ೨೦ ಸಾವಿರ ಕೃತಿಗಳನ್ನು ನೀಡಲು ನಿರ್ಧರಿಸಿದ್ದು, ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ತಿಳಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದರು.

ಸಮಾಜ ಸೇವಕ ಮುದ್ದನಘಟ್ಟ ಮಹಾಲಿಂಗೇಗೌಡ ಮಾತನಾಡಿ, ಸಂವಿಧಾನದ ಹಕ್ಕು ಬಾಧ್ಯತೆಗಳು ಎಲ್ಲರಿಗೂ ದೊರೆಯುವಂತಾಗಬೇಕು. ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಮೂಡಿಸುವುದಕ್ಕೆ ಇದೊಂದು ಒಳ್ಳೆಯ ಕಾರ್ಯವಾಗಿದೆ. ಆರಂಭದಲ್ಲಿ ಒಂದು ಸಾವಿರ ಕೃತಿಗಳನ್ನು ಮುದ್ರಿಸಲಾಗಿದೆ. ೨೫ ಸಾವಿರ ಕೃತಿಗಳನ್ನು ಮುದ್ರಿಸಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಹಂಚುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಮಹೇಶ್ ಇರಸವಾಡಿ, ಎಂ.ಬಿ.ನಾಗಣ್ಣಗೌಡ, ಕೃಷ್ಣಮೂರ್ತಿ, ನಂದಾದೀಪ ಇದ್ದರು.ಕಣ್ಣು, ಕಿವಿ ಇಲ್ಲದ ಕೇಂದ್ರ ಸರ್ಕಾರ, ಶಿಕ್ಷಣ ಸಚಿವರ ರಾಜೀನಾಮೆ ಎಂ.ವಿ.ಕೃಷ್ಣ ಆಗ್ರಹ

ಮಂಡ್ಯ:ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ದೆಹಲಿಯಲ್ಲಿ ನಡೆಯುತ್ತಿರುವ ವಿವಿಧ ಪರೀಕ್ಷಾ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಕೂಡಲೇ ರಾಜೀನಾಮೆ ನೀಡಬೇಕು ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಂ.ವಿ.ಕೃಷ್ಣ ಅಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ನೀಟ್ ಪರೀಕ್ಷೆ ಅಕ್ರಮದಿಂದಾಗಿ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಸಾವುಗಳಿಗೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ದೂರಿದ್ದಾರೆ.ಪ್ರತಿ ವರ್ಷ ದೇಶದಲ್ಲಿ ಸುಮಾರು 1,38,000 ವಿದ್ಯಾರ್ಥಿಗಳು ನೀಟ್ ಮೂಲಕ ವೈದ್ಯಕೀಯ ಹಾಗೂ ತಾಂತ್ರಿಕ ಸೀಟುಗಳಿಗೆ ಆಯ್ಕೆ ಆಗುತ್ತಿದ್ದಾರೆ. ಇಂತಹ ಬೃಹತ್ ಪ್ರಕ್ರಿಯೆಯಲ್ಲಿ ನಡೆದಿರುವ ಈ ಮಹಾ ವಂಚನೆಯನ್ನು ದೇಶ ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ.

ದೇಶದ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಅಗ್ರಹಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಸೋನಮ್ ವಾಂಗ್ಚುಕ್ ಕಳೆದ 19 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದ್ದೂ ಕೇಂದ್ರದ ಬಿಜೆಪಿ ಸರ್ಕಾರ ಮಾತ್ರ ಕಣ್ಣು ಕಿವಿ ಇಲ್ಲದ ಹೃದಯ ಹೀನದಂತೆ ವರ್ತಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.ಪರೀಕ್ಷಾ ಅಕ್ರಮ ಖಂಡಿಸಿ ದೇಶಾದ್ಯಂತ ಹೊರಾಡುತ್ತಿರುವ ಯುವಜನರ ಚಳವಳಿಯನ್ನು ಡಿಎಸ್ಎಸ್ ಸಂಪೂರ್ಣ ಬೆಂಬಲಿಸುತ್ತದೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕತ್ತಲೆಗೆ ತೆಳ್ಳಲ್ಪಟ್ಟಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣರಾಗಿರುವ ಕೇಂದ್ರ ಶಿಕ್ಷಣ ಸಚಿವರನ್ನು ವಜಾಗೊಳಿಸದಿದ್ದರೆ ರಾಜ್ಯಾದ್ಯಂತ ಚಳವಳಿ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.