ಬಂಟ್ವಾಳ: ಉಳಿ ಗ್ರಾಮದ ನಿವಾಸಿ ಲಾವಣ್ಯ ಅವರ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಉಳಿ ಹಾಗೂ ಕಕ್ಯಪದವು ಭಾಗದ ಗ್ರಾಮಸ್ಥರು ಭಾನುವಾರ ಬಂಟ್ವಾಳ ಡಿವೈಎಸ್ಪಿ ಕಚೇರಿಗೆ ತೆರಳಿ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಅಮಾಯಕ ಯುವತಿಯ ಹತ್ಯೆ ಇಡೀ ಸಮಾಜವನ್ನು ಬೆಚ್ಚಿಬೀಳಿಸಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸ್ ಇಲಾಖೆಯ ಕಾರ್ಯವನ್ನು ಶ್ಲಾಘಿಸಿದ ಗ್ರಾಮಸ್ಥರು, ತನಿಖೆಯನ್ನು ಶೀಘ್ರ ಹಾಗೂ ನಿಷ್ಪಕ್ಷಪಾತವಾಗಿ ಪೂರ್ಣಗೊಳಿಸಿ, ಬಲವಾದ ದೋಷಾರೋಪಣಾ ಪತ್ರ ಸಲ್ಲಿಸುವ ಮೂಲಕ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಮನವಿ ಸ್ವೀಕರಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರೆಡ್ಡಿ ಆರೋಪಿಗೆ ಕಾನೂನಿನಡಿ ಕಠಿಣ ಶಿಕ್ಷೆಯಾಗುವಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.ಈ ವೇಳೆ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಬೇಕು, ಸಾರ್ವಜನಿಕರಲ್ಲಿರುವ ಆತಂಕ ನಿವಾರಿಸಬೇಕು ಹಾಗೂ ಗ್ರಾಮಸಭೆಗಳ ಮೂಲಕ ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಮಹಿಳೆಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಗರಿಷ್ಠ ಆದ್ಯತೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.ಬಿಜೆಪಿ ಪ್ರಮುಖರ ಭೇಟಿ: ಲಾವಣ್ಯ ನಿವಾಸಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಮೃತಳ ಪೋಷಕರು ಹಾಗೂ ಕುಟುಂಬದವರನ್ನು ಭೇಟಿಯಾಗಿ ಅವರ ದುಃಖದಲ್ಲಿ ಭಾಗಿಯಾದ ಜನಪ್ರತಿನಿಧಿಗಳು, ಲಾವಣ್ಯ ಅವರ ಹತ್ಯೆ ಅತ್ಯಂತ ನೋವು ಮತ್ತು ಆಘಾತಕಾರಿ ಘಟನೆ ಎಂದು ಖಂಡಿಸಿದರು.

ಇಂತಹ ಘಟನೆಗಳು ಮತ್ತೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.


ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಬೂಡ ಮಾಜಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ರಾಮದಾಸ್ ಬಂಟ್ವಾಳ, ಸುರೇಶ್ ಮೈರ, ಚಿದಾನಂದ ಕಕ್ಯ, ವಸಂತ ಉಳಿ, ರಂಜಿತ್ ಮೈರ, ಅಜಿತ್ ಶೆಟ್ಟಿ ಕಾರಿಂಜ, ಸತೀಶ್ ಶೆಟ್ಟಿ ಮದ್ವ, ಯಶವಂತ ಕಜೆಕಾರು, ಶಶಿಕಾಂತ್ ಶೆಟ್ಟಿ ಮತ್ತಿತರರಿದ್ದರು.ಆರೋಪಿ ಪರ ವಕಾಲತು ವಹಿಸದಂತೆ ಮನವಿ: ಬಿ.ಸಿ.ರೋಡ್‌ನಲ್ಲಿ ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಪರವಾಗಿ ಬಂಟ್ವಾಳ ತಾಲೂಕಿನ ವಕೀಲ ಸಂಘದ ಯಾವುದೇ ಸದಸ್ಯರು ವಕಾಲತು ವಹಿಸದಂತೆ ವಿಶ್ವ ಹಿಂದೂ ಪರಿಷತ್‌ ಬಂಟ್ವಾಳ ಪ್ರಖಂಡ ವತಿಯಿಂದ ವಕೀಲರ ಸಂಘಕ್ಕೆ ಮನವಿ ಸಲ್ಲಿಸಲಾಯಿತು. ಸಮಾಜವೇ ತಲೆತಗ್ಗಿಸುವ ರೀತಿಯಲ್ಲಿ ಚೇತನ್ ಹೆಸರಿನ ವ್ಯಕ್ತಿ ಲಾವಣ್ಯ ಎಂಬ ಮುಗ್ಧ ಹೆಣ್ಣುಮಗಳನ್ನು ಸಾರ್ವಜನಿಕವಾಗಿ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹತ್ಯೆ ಮಾಡಿರುವುದು ಆಘಾತಕಾರಿ ಘಟನೆಯಾಗಿದೆ. ಈ ಹಿನ್ನೆಲೆಯಲ್ಲಿ ಆತನ ಪರವಾಗಿ ಯಾರೂ ವಕಾಲತು ವಹಿಸದಂತೆ ನಿರ್ಣಯ ಕೈಗೊಳ್ಳಬೇಕಾಗಿ ವಿಹಿಂಪ ಮತ್ತು ಬಜರಂಗ ದಳ ಬಂಟ್ವಾಳ ವಕೀಲರ ಸಂಘಕ್ಕೆ ಮನವಿ ಮಾಡಿದೆ. ಮುಖಂಡರಾದ ಸಂತೋಷ್ ಸರಪಾಡಿ ಮತ್ತಿತರರು ಈ ಮನವಿಯನ್ನು ವಕೀಲರ ಸಂಘಕ್ಕೆ ನೀಡಿದರು.