ಕನ್ನಡಪ್ರಭ ವಾರ್ತೆ ಮದ್ದೂರು

ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ಪ್ರಾಧಿಕಾರದ ಆದೇಶ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ, ಪಟ್ಟಣದ ವಕೀಲರು ಶನಿವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ವಕೀಲರ ಸಂಘದ ಉಪಾಧ್ಯಕ್ಷ ಎ.ಎಂ.ಪುಟ್ಟರಾಜು ನೇತೃತ್ವದಲ್ಲಿ ಸಭೆ ನಡೆಸಿದ ವಕೀಲರು, ಕಾವೇರಿ ನದಿ ನೀರಿನ ರಕ್ಷಣೆಗಾಗಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಲು ಸರ್ವಾನುಮತದ ತೀರ್ಮಾನ ಕೈಗೊಂಡರು.

ನಂತರ ವಕೀಲರ ಸಂಘದ ಆವರಣದಲ್ಲಿ ಕೆಲಕಾಲ ಮೌನ ಪ್ರತಿಭಟನೆ ನಡೆಸಿದ ವಕೀಲರು ನಂತರ ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಶಿವಕುಮಾರ ಬಿರಾದಾರ ಅವರ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸರ್ಕಾರ ಯಾವುದೇ ಕಾರಣಕ್ಕೂ ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಹನಿ ನೀರು ಸಹ ಬಿಡಬಾರದು ಎಂದು ಆಗ್ರಹ ಪಡಿಸಿದರು. ನಂತರ ನ್ಯಾಯಾಲಯದ ಆವರಣದಿಂದ ಪ್ರಮುಖ ಬೀದಿಗಳಲ್ಲಿ ಬೈಕ್ ರ್‍ಯಾಲಿ ನಡೆಸಿದ ವಕೀಲರು ರೈತರ ಹೋರಾಟಕ್ಕೆ ಬೆಂಬಲ ನೀಡಿದರು.


ಈ ವೇಳೆ ಮಾತನಾಡಿದ ವಕೀಲರ ಸಂಘದ ಉಪಾಧ್ಯಕ್ಷ ಪುಟ್ಟರಾಜು ಹಾಗೂ ಮಾಜಿ ಅಧ್ಯಕ್ಷ ಜಿ.ಎನ್.ಸತ್ಯ, ಈ ಬಾರಿ ಮಳೆ ಅಭಾವದಿಂದ ಜಿಲ್ಲೆಯಲ್ಲಿ ಬರಗಾಲವಿದೆ. ಪ್ರಾಧಿಕಾರ ವಸ್ತುಸ್ಥಿತಿ ಅವಲೋಕನ ಮಾಡದೆ ಪ್ರತಿದಿನ 3500 ಕ್ಯುಸೆಕ್ ನೀರು ಬಿಡುವಂತೆ ನೀಡಿರುವ ಆದೇಶ ವೈಜ್ಞಾನಿಕ ನೀತಿಯಾಗಿದೆ. ಹೀಗಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವ ನಿರ್ಧಾರ ಮಾಡಬಾರದು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಖಜಾಂಚಿ ಪ್ರಸನ್ನ, ಕ್ರೀಡಾ ಕಾರ್ಯದರ್ಶಿ ಯಶವಂತ್, ಸಂಘದ ಸದಸ್ಯರಾದ ಯದುನಂದನ, ವಿ .ಟಿ. ರವಿಕುಮಾರ,ಸಿದ್ದಪ್ಪಾಜಿ, ಮಹೇಶ್, ಪ್ರಶಾಂತ್, ವೆಂಕಟೇಶ್, ಮನು, ಕಮಲಮ್ಮ, ಪಾವನ, ಮೈತ್ರಿ, ಕದಲೂರು ಯೋಗಾ ನಂದ, ಕೆ. ಶಿವಣ್ಣ, ವಿ.ಎಸ್. ನಾಗರಾಜು, ಮಧು, ನಾಗೇಶ್, ಎಚ್. ರವಿ, ರಾಜಮ್ಮಾಜಿ, ಅನಿಲ್ ಮತ್ತಿತರರು ಭಾಗವಹಿಸಿದ್ದರು.